ಜಿ.ಎಸ್ ಶಿವರುದ್ರಪ್ಪ ನಿಧನಕ್ಕೆ ಗಣ್ಯರ ಕಂಬನಿ
ಬೆಂಗಳೂರು, ಡಿ. 23 : ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಶಿವರುದ್ರಪ್ಪ ಅವರ ನಿಧನದಿಂದಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬಕ್ಕೆ ದೇವರು ದುಖಃವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ವಿವಿಧ ಗಣ್ಯರು ಪ್ರಾರ್ಥಿಸಿದ್ದಾರೆ.
ಜಿ.ಎಸ್ ಶಿವರುದ್ರಪ್ಪ ಅವರ ನಿಧನದ ಸುದ್ದಿ ತಿಳಿಯುತ್ತದ್ದಂತೆ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್ ಮುಂತಾದವರು ಶಿವರುದ್ರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. [ರಾಷ್ಟ್ರಕವಿ ಜಿಎಸ್ ಶಿವರುದ್ರಪ್ಪ ವಿಧಿವಶ]
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮಂಗಳವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. [ಗಣ್ಯರ ಪ್ರತಿಕ್ರಿಯೆಗಳು]
ಕನ್ನಡ ನಾಡು ಶೋಕತಪ್ತವಾಗಿದೆ
ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪಅವರ ನಿಧನದಿಂದಾಗಿ ಕನ್ನಡನಾಡು ಶೋಕತಪ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಜಿ.ಎಸ್.ಶಿವರುದ್ರಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಖಃ ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಸಾರಸ್ವತ ಲೋಕ ಬಡವಾಗಿದೆ
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ನಿಧನದಿಂದಾಗಿ ಕನ್ನಡ ಸಾರಸ್ವತ ಲೋಕ ಬಡವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಆದರ್ಶ ಜೀವಿಯಾಗಿದ್ದರು
ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಆದರ್ಶ ಜೀವಿಯಾಗಿದ್ದರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಸಂತಾಪ ಸೂಚಿಸಿದ್ದಾರೆ. ಶಿವರುದ್ರಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ, ಅವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ, ದುಖಃವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಉಮಾಶ್ರೀ ಪ್ರಾರ್ಥಿಸಿದ್ದಾರೆ.
ಬಹುದೊಡ್ಡ ಹಾನಿಯುಂಟಾಗಿದೆ
ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಹಾನಿಯುಂಟಾಗಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಸಂತಾಪ ಸೂಚಿಸಿದ್ದಾರೆ. ಶಿವರುದ್ರಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ಅವರ ಶಿಷ್ಯರಾಗಿದ್ದ ಜಿ.ಎಸ್ ಶಿವರುದ್ರಪ್ಪ, ಕನ್ನಡ ನಾಡಿನ ಸಾಹಿತಿಗಳಾಗಿ ಗುರುತಿಸಿಕೊಂಡಿರಲಿಲ್ಲ, ಕನ್ನಡದ ಏಳಿಗೆಗಾಗಿ ಹಲವು ಪ್ರಥಮಗಳಿಗೆ ಕಾರಣರಾಗಿದ್ದರು. ಶಿವರುದ್ರಪ್ಪ ಅವರು ಸಾಹಿತಿಗಳಲ್ಲದೇ ಓರ್ವ ಸಂಘಟಕರೂ ಆಗಿದ್ದರು ಎಂದು ಕಂಬಾರರು ಬಣ್ಣಿಸಿದ್ದಾರೆ.
ಸಾಹಿತ್ಯ ಲೋಕಕ್ಕೆ ಕತ್ತಲು ಆವರಿಸಿದೆ
ಜಿ.ಎಸ್ ಶಿವರುದ್ರಪ್ಪ ಅವರ ನಿಧನದಿಂದಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಕತ್ತಲು ಅವರಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಕವಿ ಜಿಎಸ್ಎಸ್ ಯುವ ಸಾಹಿತಿಗಳಿಗೆ ಪ್ರೇಕರ ಶಕ್ತಿಯಾಗಿದ್ದರು ಎಂದು ಅವರು ಹೇಳಿದ್ದಾರೆ.
ತುಂಬಲಾರದ ನಷ್ಟ
ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರದಲ್ಲಿ ಅವರು ಹುಟ್ಟಿದ್ದರು ಎಂಬುದು ನಮಗೆ ಗೌರವದ ಸಂಗತಿ. ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿಗೆ ಬಂದು ಅವರ ದರ್ಶನ ಪಡೆಯಲಾಗುತ್ತಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಆರಿದ ಹಣತೆ
ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಣತೆಯೊಂದು ಆರಿದೆ. ನಮ್ಮ ನಡುವೆ ಇದ್ದ ರಾಷ್ಟ್ರಕವಿ ಇಂದು ನಮ್ಮೊಂದಿಗಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಹೇಳಿದ್ದಾರೆ. ಶಿವರುದ್ರಪ್ಪ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಈ ದುಖಃವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದರು.