ಶಿವಮೊಗ್ಗ ಏರ್ಪೋರ್ಟ್ ನಿರ್ವಹಣೆಗೆ ಒಪ್ಪಿಗೆ: ರಾಜ್ಯ ಸರ್ಕಾರವೇ ಹೊಸ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಚಿಂತನೆ: ಎಂಬಿಪಾ
ಬೆಂಗಳೂರು, ಜೂನ್ 13: ರಾಜ್ಯದಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಗಳ ವೈಮಾನಿಕ ಸೇವೆ ಮತ್ತು ನಿರ್ವಹಣೆಯನ್ನು ಕರ್ನಾಟಕ ಭಾರೀ ಕೈಗಾರಿಕಾ ಇಲಾಖೆಯಡಿ ಬರುವ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ತೆಗೆದುಕೊಳ್ಳಲು ಗಂಭೀರ ಚಿಂತನೆ ನಡೆದಿದೆ. ಈ ಬಗ್ಗೆ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕದಲ್ಲಿ ಸದ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣವು ಕಾರ್ಯಾಚರಣೆಗೆ ಸಿದ್ಧವಾಗಿದೆ. ಇದರ ನಿರ್ವಹಣೆಯನ್ನು ರಾಜ್ಯ ಸರ್ಕಾರ ನಿರ್ವಹಿಸಲು ಕೇಂದ್ರ ವಿಮಾನಯಾನ ನಿರ್ದೇಶನಾಲಯ ಒಪ್ಪಿಗೆ ನೀಡಿದೆ.

ಅದೇ ರೀತಿ ನಿರ್ಮಾಣ ಹಂತದಲ್ಲಿ ಇರುವ ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳನ್ನೂ ರಾಜ್ಯ ಸರ್ಕಾರವೇ ಆಪರೇಟ್ ಮಾಡುವ ಉದ್ದೇಶ ಹೊಂದಿದೆ. ಇವುಗಳಷ್ಟೇ ಅಲ್ಲದೇ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಿರ್ಮಿಸುವ ವಿಮಾನ ನಿಲ್ದಾಣಗಳನ್ನು ನಾವೇ (ರಾಜ್ಯ ಸರ್ಕಾರ) ನಿರ್ವಹಣೆ ಮಾಡುವುದು ಒಳ್ಳೆಯದು. ಇದರಿಂದ ಆರ್ಥಿಕವಾಗಿ ಲಾಭವಾಗಲಿದೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದ ಶಿರಡಿಯಲ್ಲಿರುವ ವಿಮಾನ ನಿಲ್ದಾಣವನ್ನು ಅಲ್ಲಿನ ಸರ್ಕಾರವೇ ನಿರ್ವಹಿಸುತ್ತಿದೆ. ಹಾಗೆಯೇ, 2-3 ರಾಜ್ಯಗಳು ಈ ಮಾದರಿಯನ್ನು ಅನುಸರಿಸುತ್ತಿವೆ. ಅದೇ ರೀತಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನಾದರೂ ನಾವೇ ನಿರ್ವಹಿಸಿದರೆ ಆಗುವ ಲಾಭ-ನಷ್ಟಗಳನ್ನು ಕುರಿತು ಚರ್ಚಿಸಲಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಲಬುರಗಿಯಲ್ಲಿ ರಾಜ್ಯ ಸರಕಾರವು 1,000 ಕೋಟಿ ರೂ. ಖರ್ಚು ಮಾಡಿ ವಿಮಾನ ನಿಲ್ದಾಣ ನಿರ್ಮಿಸಿದೆ. ಆದರೆ, ಅದನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟು ಕೊಟ್ಟಿದ್ದೇವೆ. ಇದರ ಬದಲು ನಾವೇ ನಿರ್ವಹಣೆಯನ್ನು ಹೊತ್ತುಕೊಂಡರೆ ಅದರಿಂದ ಪ್ರಯೋಜನವಾಗಲಿದೆ. ಇಂತಹ ಚಿಂತನೆ ಈಗ ದೇಶದ ಹಲವು ರಾಜ್ಯಗಳಲ್ಲಿ ಮುನ್ನೆಲೆಗೆ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚಾಣಕ್ಯ ವಿವಿಗೆ ಬಿಜೆಪಿ ನೀಡಿದ ಭೂಮಿ ಹಿಂದಕ್ಕಿಲ್ಲ
ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿರುವ ಭೂಮಿಯನ್ನು ವಾಪಸ್ ಪಡೆಯುವ ವಿಚಾರ ಸದ್ಯಕ್ಕೆ ನಮ್ಮ ಮುಂದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಲಿದ್ದಾರೆ. ಆದರೆ, ಹಿಂದಿನ ಬಿಜೆಪಿ ಅವಧಿಯಲ್ಲಿ ಭೂಮಿ ಹಂಚಿಕೆಯಲ್ಲಿ ಎಲ್ಲೆಲ್ಲೆ ದುರ್ಬಳಕೆ ಆಗಿದೆಯೋ ಅದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಆಗಿರುವ ಭೂಮಿ ಹಂಚಿಕೆಯನ್ನು ಪ್ರತಿಯೊಂದು ಕಡೆಯೂ ಪರಿಶೀಲಿಸುತ್ತೇವೆ ಎಂದು ಎಂಬಿ ಪಾಟೀಲ್ ಹೇಳಿದರು.
ಉಪನಗರ ರೈಲು ಹೊರ ವಲಯಕ್ಕೂ ವಿಸ್ತರಣೆ
ಬೆಂಗಳೂರು ಉಪನಗರ ರೈಲು ಯೋಜನೆಯ ವಿಸ್ತರಣೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. ಮೈಸೂರು, ದಾಬಾಸ್ಪೇಟೆ, ಗೌರಿ ಬಿದನೂರು, ಕೋಲಾರ ಸೇರಿ ವಿವಿಧೆಡೆ ವಿಸ್ತರಣೆಗೆ ನಿರ್ಧಾರ ಮಾಡಲಾಗಿದೆ. ಇದು ಮುಂದಿನ ದಿನಗಳಲ್ಲಿ ಕಾರ್ಯ ನಿರ್ವಹಣೆಗೆ ಬರಲಿದೆ. ಈ ಬಗ್ಗೆ ತಿಳಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದರು.












Click it and Unblock the Notifications