ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಒಪ್ಪಿಗೆ
ಬೆಂಗಳೂರು, ಜೂ.16: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.
ದೆಹಲಿಗೆ ಭೇಟಿ ನೀಡಿರುವ ಗೋವಿಂದ ಕಾರಜೋಳ ಅವರು, ಕೇಂದ್ರ ಸರ್ಕಾರದ ವಿವಿಧ ಹಂತಗಳಲ್ಲಿ ಬಾಕಿ ಇರುವ ಕರ್ನಾಟಕದ ಪ್ರಸ್ತಾವನೆಗಳನ್ನು ಅನುಮೋದಿಸಲು, ಮಂಜೂರಿ ಪಡೆಯಲು ಹಲವಾರು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಮತ್ತು ಇತರ ನಾಯಕರೊಂದಿಗೆ ಸಚಿವರುಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಎಲ್ಲಾ ಅರ್ಹತೆ ಹೊಂದಿದ್ದು ಈಗಾಗಲೇ ಅವಶ್ಯವಿರುವ ಎಲ್ಲ ಪೂರಕ ಅನುಮೋದನೆಗಳನ್ನು ಕೇಂದ್ರ ಜಲ ಆಯೋಗ ಮತ್ತು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಿಂದ ಪಡೆದುಕೊಂಡಿರುತ್ತದೆ. ಕೇಂದ್ರದ ಜಲಶಕ್ತಿ ಮಂತ್ರಾಲಯ ದಿನಾಂಕ 15.2. 2020 ರಂದು ನಡೆದ 14ನೇ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ(14th High powered steering committee)ಸದರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ ಎಂದರು.
ಅತಿ ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸಂಬಂಧಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಒಪ್ಪಿಗೆ ಸೂಚಿಸಿದ್ದಾರೆ. ಇದು ಕರ್ನಾಟಕದ ಮೊದಲನೆಯ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು.
29.90 ಟಿಎಂಸಿ ನೀರಿನ ಬಳಕೆ
ಭದ್ರಾ ಮೇಲ್ದಂಡೆ ಯೋಜನೆ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯು ಬೃಹತ್ ನೀರಾವರಿ ಯೋಜನೆಯಾಗಿದ್ದು 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ( ತುಂಗಾ ನದಿಯಿಂದ 17.40 ಟಿಎಂಸಿ ಮತ್ತು ಭದ್ರಾ ಜಲಾಶಯದಿಂದ 12.50 ಟಿಎಂಸಿ ) ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ (5,57,022 ಎಕರೆ ) ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಮೂಲಕ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಹಾಗೂ ಈ ಜಿಲ್ಲೆಗಳ 367 ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ತುಂಬಿಸುವ ಯೋಜನೆಯಾಗಿದೆ.
21,473.67 ಕೋಟಿ ರೂ. ಯೋಜನೆ
ಈ ಯೋಜನೆಗೆ ತಗಲುವ ಒಟ್ಟಾರೆ ವೆಚ್ಚವು 21,473.67 ಕೋಟಿ ರೂಪಾಯಿಗಳಾಗಿದ್ದು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿತವಾದ ನಂತರ ಕೇಂದ್ರ ಸರ್ಕಾರ ಈ ಯೋಜನೆಗೆ ರೂ 16125.48( ಸೂಕ್ಷ್ಮ ನೀರಾವರಿ ಹೊರತುಪಡಿಸಿ) ಕೋಟಿ ರೂಪಾಯಿ ವೆಚ್ಚದಲ್ಲಿ ಶೇಕಡ 60 ರಷ್ಟು ಅಂದರೆ ರೂ 9675.29 ಕೋಟಿಗಳನ್ನು ಭರಿಸಲಿದೆ.
ಮಹಾದಾಯಿ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ
ಮಹದಾಯಿ ಯೋಜನೆಯ ಕುರಿತು ಕೇಂದ್ರ ಜಲಸಂಪನ್ಮೂಲ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರಿಗೆ ವಿಶೇಷ ಮನವಿ ಸಲ್ಲಿಸಲಾಯಿತು. ಕೇಂದ್ರ ಜಲಸಂಪನ್ಮೂಲ ಸಚಿವರು ಮಹಾದಾಯಿ ಯೋಜನೆಗೆ ಅನುಮೋದನೆ ನೀಡುವ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಕೂಡಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಮೇಕೆದಾಟು ಯೋಜನೆ ಈ ಭೇಟಿಯ ಸಂದರ್ಭದಲ್ಲಿ ಮೇಕೆದಾಟು ಯೋಜನೆಯ ಕುರಿತು ವಿವರವಾಗಿ ಪ್ರಸ್ತಾಪಿಸಲಾಯಿತು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ದಿನಾಂಕ 17.6. 2022ರ ಬದಲಾಗಿ 23.6.2022 ರಂದು ಚರ್ಚೆಯಾಗಲಿದೆ.
ಯುಕೆಪಿಗೆ 13 ಸಾವಿರ ಕೋಟಿ ರೂ.
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆ ಹಂತದ ಕಾಮಗಾರಿಗಳಿಗೆ 13 ಸಾವಿರ ಕೋಟಿ ರೂಪಾಯಿಗಳನ್ನು ಈಗಾಗಲೇ ವೆಚ್ಚ ಮಾಡಲಾಗಿದ್ದು ಕೇಂದ್ರ ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಕೃಷ್ಣಾ ಜಲ ವಿವಾದ ಎರಡನೇ ನ್ಯಾಯಾಧೀಕರಣದ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸುವ ಮೂಲಕ ಕರ್ನಾಟಕದ ಈ ಪ್ರತಿಷ್ಠಿತ ಯೋಜನೆಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಲಾಯಿತು. ಕೇಂದ್ರ ಸರ್ಕಾರ ಕರ್ನಾಟಕದ ಎಲ್ಲ ಮನವಿಗಳನ್ನು ಪುರಸ್ಕರಿಸಿ ಕರ್ನಾಟಕಕ್ಕೆಅನುಕೂಲವಾಗುವ ರೀತಿಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.