'ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ'
ಬೆಂಗಳೂರು, ಅಕ್ಟೋಬರ್ 25: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಪ್ರತಿ ಕ್ವಿಂಟಾಲ್ ಗೆ 6,783 ರೂ. ನಿಗದಿಪಡಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ,ಗದಗ ಮತ್ತು ಬಾಗಲಕೋಟ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈಗ ಅನುಮತಿ ದೊರೆತಿರುವ ಶೇಂಗಾ ಸೇರಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗಿದೆ. ಇದುವರೆಗೆ ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿಯನ್ನು ಖರೀದಿಸಲಾಗಿದೆ. ಬೆಲೆ ಕುಸಿತದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
ರಾಜ್ಯದ ಮನವಿಗೆ ಕೇಂದ್ರ ಪುರಸ್ಕರಿಸಿದ್ದು, ಶೇಂಗಾ ಖರೀದಿಗೆ ಕೇಂದ್ರ ಸರ್ಕಾರದಿಂದ ಎರಡು, ರಾಜ್ಯ ಸರ್ಕಾರದಿಂದ ನಾಲ್ಕು ಏಜನ್ಸಿಗಳನ್ನು ಗುರುತಿಸಲಾಗಿದೆ. ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್ ಸಂಸ್ಥೆ, ಎನ್ಸಿಸಿಎಫ್ ಸಂಸ್ಥೆ ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ ಐದಾರು ಕುಟುಂಬಗಳು ಕುಟುಂಬ ರಾಜಕಾರದಲ್ಲಿವೆ: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಇದೀಗ ಬಿಜೆಪಿಯಲ್ಲಿ ಆಗುತ್ತಿರುವುದೇನು? ರಾಜಕಾರಣದಲ್ಲಿ ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬಿಜೆಪಿಯಲ್ಲಿ ಸುಮಾರು ಐದಾರು ಕುಟುಂಬಗಳು ಕುಟುಂಬ ರಾಜಕಾರದಲ್ಲಿವೆ. ಇದು ರಾಜಕಾರಣದಲ್ಲಿ ಸ್ವಾಭಾವಿಕ. ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು. ಹೇಳಿಕೆ ನೀಡುತ್ತಿದ್ದವರೇ ಇದೀಗ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದರು.
ಶಿಗ್ಗಾವಿಯಲ್ಲಿ ಅಭ್ಯರ್ಥಿಗಿಂತ ಪಕ್ಷ ಕೆಲಸ ಮಾಡಬೇಕಿದೆ. ಈ ಕಾರ್ಯವನ್ನು ಪಕ್ಷ ಮಾಡಲಿದೆ. ನಮ್ಮ ಅಭ್ಯರ್ಥಿ ಗೆಲ್ಲಲು ಸಚಿವರು, ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ೨೫ ವರ್ಷಗಳಿಂದ ನಾವು ಶಿಗ್ಗಾವಿಯಲ್ಲಿ ಗೆದ್ದಿಲ್ಲ. ಈ ಬಾರಿ ಗೆಲ್ಲಲು ಪಕ್ಷ ಪ್ರಾಮಾಣಿಕ ಕೆಲಸ ಮಾಡಲಿದೆ. ಟಕೆಟ್ ಹಂಚಿಕೆ ಸಂದರ್ಭದಲ್ಲಿ ಅಸಮಧಾನಗಳು ಹಾಗೂ ಒಂದಿಷ್ಟು ಗೊಂದಲಗಳು ಸಾಮಾನ್ಯ. ಅದನ್ನು ಪ್ರಧಾನ ಕಾರ್ಯದರ್ಶಿಗಳು ಬಗೆಹರಿಸುವ ಕೆಲಸ ಮಾಡಲಿದ್ದಾರೆ. ೧೫ ಜನ ಆಕಾಂಕ್ಷಿಗಳಿದ್ದ ಕಾರಣ ಟಿಕೆಟ್ ವಿಳಂಬವಾಗಿದೆಯಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.












Click it and Unblock the Notifications