'ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದೆ'
ಬೆಂಗಳೂರು, ಆಗಸ್ಟ್ 20: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಒಂದೆಡೆ ಪ್ರತಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ತೀವ್ರ ಒತ್ತಾಯಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಪರ ರಾಜ್ಯಪಾಲರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿದ್ದು, ರಾಜ್ಯಪಾಲರನ್ನು ಬಿಜೆಪಿ ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಆರೋಪದ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುವ ಬದಲಾಗಿ ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು ಕಾರಣ ನೀಡಿ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ.

ದೇಶದಲ್ಲಿರುವ ಎಲ್ಲಾ ಭ್ರಷ್ಟರೂ ಬಿಜೆಪಿಯಲ್ಲೇ ಇದ್ದಾರೆ. ಬಿಜೆಪಿ ಸೇರಿದ ಕಳಂಕಿತರು ಆ ಪಕ್ಷ ಸೇರುತ್ತಿದ್ದಂತೆ ಅವರು ಸ್ವಚ್ಛವಾಗಿಬಿಡುತ್ತಾರೆ. ಇಂತಹವರ ಮಾತು ಕೇಳಿ ರಾಜ್ಯಪಾಲರು ಅರ್ಥಹೀನ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಸುತ್ತ ಇರುವ ಸಲಹೆಗಾರರರಿಗೆ ತಲೆ ಇದ್ದಿದ್ದರೆ ನೋಟಿಸ್ ಕೊಡುವ ಪ್ರಮೇಯ ಇರುತ್ತಿರಲಿಲ್ಲ ಎಂದರು.
ಬಿಜೆಪಿ ಕೈಗೊಂಬೆಯಾಗಿರುವ ನೀವು ರಾಜ್ಯಪಾಲ ಹುದ್ದೆಯಲ್ಲಿ ಇರಲು ಲಾಯಕ್ಕಿಲ್ಲ. ನೀವು ಈಗಲಾದರೂ ಸರಿಯಾದ ತೀರ್ಮಾನ ಮಾಡಿ ರಾಜ್ಯಪಾಲ ಹುದ್ದೆಯ ಗೌರವ ಉಳಿಸಬೇಕು. ಇಲ್ಲದಿದ್ದರೆ ಬೇರೆ ರಾಜ್ಯಕ್ಕೆ ರಾಜ್ಯಪಾಲರಾಗಿ ಹೋದರೆ ಉತ್ತಮ ಎಂದು ನನ್ನ ಅಭಿಪ್ರಾಯ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.












Click it and Unblock the Notifications