Siddaramaiah:ಅನ್ನಭಾಗ್ಯ ಅಕ್ಕಿಗೆ ಕೇಂದ್ರ ಕೊಕ್ಕೆ!: ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್14: ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದ ಕೇಂದ್ರ ಸರ್ಕಾರ, ಇದೀಗ ರಾಜಕೀಯ ನಿರ್ಧಾರ ಕೈಗೊಂಡಿದೆ. ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಬುಧವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಡೆಪ್ಯುಟಿ ಮ್ಯಾನೇಜರ್ 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದಿದ್ದರು.

ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ಬಡವರ ವಿರೋಧಿಗಳು. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಕ್ಕಿ ಪೂರೈಸಲು ಛತ್ತೀಸ್ಗಢ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಐದು ಗ್ಯಾರೆಂಟಿಗಳನ್ನ ಈಗಾಗಲೇ ಘೋಷಣೆ ಮಾಡಿದ್ದೇವೆ. ಯಾವಾಗ ಜಾರಿ ಬರಲಿದೆ ಅಂತ ದಿನಾಂಕ ಘೋಷಣೆ ಮಾಡಿದ್ದೇವೆ. ಮೊದಲ ಗ್ಯಾರೆಂಟಿ ಈಗಾಗಲೇ ಜಾರಿ ಆಗಿದೆ. ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು.
ಸದ್ಯ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಕೊಡುತ್ತಿದೆ. ಅದರ ಜೊತೆಗೆ ಇನ್ನೂ 5 ಕೆ.ಜಿ ಸೇರಿಸಿ 10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು. ನಾವು ಹೆಚ್ಚುವರಿಯಾಗಿ ಕೊಡಬೇಕು ಅಂದರೆ ಪ್ರತಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕು ಎಂದು ತಿಳಿಸಿದರು.
ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ.
ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆಗೆ 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿರುವ ಪತ್ರದ ವಿವರಗಳನ್ನು ಓದಿ ಹೇಳಿದ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರ ರಾಜಕೀಯವಾಗಿ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

ಎಫ್.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ನಾಳೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ನಾಳೆ ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.
ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದರು.












Click it and Unblock the Notifications