ಕೊಪ್ಪಳದಲ್ಲಿ ನಿಗದಿಯಾಗಿದ್ದ ಅಮಿತ್ ಶಾ ಕಾರ್ಯಕ್ರಮ ಏಕಾಏಕಿ ರದ್ದಾಗಲು ಕಾರಣವೇನು?
ಬೆಂಗಳೂರು, ಮೇ 05: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಕಾರಣ ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಬೇಕಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮಗಳು ರದ್ದಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ನಾಯಕರು ರಾಜ್ಯದಲ್ಲಿ ವಾಸ್ತವ್ಯ ಹೂಡಿದ್ದು, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಶತಾಯಗತಾಯ ರಾಜ್ಯದಲ್ಲಿ ಅಧಿಕಾರವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಬಿಜೆಪಿ ಮತದಾರರನನ್ನು ಓಲೈಕೆ ಮಾಡಲು ಶತ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಾಗಿ ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಮೂರು ಕಡೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯ ಕಾರಟಗಿ, ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಅಮಿತ್ ಶಾ ಕಾರ್ಯಕ್ರಮ ಆಯೋಜನೆಯಾಗಿತ್ತು. ಆದರೆ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯದ ಕಾರ್ಯಕ್ರಮಗಳನ್ನು ರದ್ದು ಮಾಡಿ ಅಮಿತ್ ಶಾ ದೆಹಲಿಗೆ ತೆರಳಿದ್ದಾರೆ.
ಅಮಿತ್ ಶಾ ಮಧ್ಯಾಹ್ನ 2.30ಕ್ಕೆ ಮಸ್ಕಿಯಿಂದ ಕಾರಟಗಿಗೆ ಬಂದು ಎಪಿಎಂಸಿ ಗೇಟ್ನಿಂದ ಪುರಸಭೆ ಕಾರ್ಯಾಲಯದ ತನಕ ಒಂದು ಕಿ.ಮೀ. ರೋಡ್ ಶೋ ನಡೆಸಿ ಬಳಿಕ ಕನಕಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ದಡೇಸೂಗೂರು ಪರ ಮತಯಾಚನೆ ಮಾಡಬೇಕಿತ್ತು. ಬಳಿಕ ಹೆಲಿಕಾಪ್ಟರ್ ಮೂಲಕ ಸಂಜೆ 4 ಗಂಟೆಗೆ ಕುಷ್ಟಗಿಗೆ ಬಂದು ವೇದಿಕೆ ಕಾರ್ಯಕ್ರಮದ ಮೂಲಕ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಪರ ಮತಯಾಚಿಸಬೇಕಿತ್ತು. 5.30ಕ್ಕೆ ಕೊಪ್ಪಳದಲ್ಲಿ ರೋಡ್ ಶೋ ನಿಗದಿಯಾಗಿತ್ತು. ಆದರೆ ಸದ್ಯ ಅಮಿತ್ ಶಾ ಅವರ ಜಿಲ್ಲೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರ ಹತ್ತಿಕ್ಕಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ನ್ನು ರವಾನಿಸಲಾಗಿದೆ. ಇಂಫಾಲ್, ಚುರಾಚಂದ್ಪುರ ಹಾಗೂ ಕಾಂಗ್ಪೋಕ್ಪಿಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅಲ್ಲದೇ ಮಣಿಪುರ ಸರಕಾರ ರಾಜ್ಯದಲ್ಲಿ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.












Click it and Unblock the Notifications