ನನ್ನಲ್ಲಿರುವ ದಾಖಲೆಗಳನ್ನು ಬಿಚ್ಚಿಟ್ಟರೆ ಜನರೇ ಇವರನ್ನು ಓಡಿಸುತ್ತಾರೆ: ಕಾಂಗ್ರೆಸ್ಗೆ HDK ವಾರ್ನಿಂಗ್
ಬೆಂಗಳೂರು, ಏಪ್ರಿಲ್ 12: ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ. ಕಾಂಗ್ರೆಸ್ ಪಕ್ಷದ ಪುಡಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾನು ಹೆದರುವ ವ್ಯಕ್ತಿ ಅಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಗುಡುಗಿದರು.
ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿರುವ ದಾಖಲೆಗಳನ್ನು ಬಿಚ್ಚಿಟ್ಟರೆ ಜನರೇ ಇವರನ್ನು ಓಡಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಟನ್ ಗಟ್ಟಲೆ ದಾಖಲೆ ಇದೆ ಅಂತ ಹೇಳಿದ್ದೆ, ಅದೇನು ಸುಳ್ಳಲ್ಲ. ಅಕ್ಷರಶಃ ಸತ್ಯ. ಹಿಂದೆ ಅಧಿಕಾರದಲ್ಲಿದ್ದಾಗ ನನ್ನ ಧ್ವನಿ ಅಡಗಿಸೋ ಕೆಲಸ ಮಾಡಿದ್ದರು. ನನ್ನ ತೊಡವಿಕೊಂಡರೆ ಅವರಿಗೆ ಕಷ್ಟ. ನಾನು ಯಾವುದೇ ಕಾನೂನು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ನ್ಯಾಯ, ಕೋರ್ಟ್ ಇದೆ ಎಂದು ಹೋರಾಟ ಮಾಡುತ್ತಿದ್ದೇನೆ. ನನ್ನಲ್ಲಿ ಅಧಿಕಾರ ಇದ್ದಾಗಲೂ ನಾನು ನನ್ನ ಕೆಲಸ ಮಾಡಿಕೊಳ್ಳಲಿಲ್ಲ. ಈಗ ಕೇಂದ್ರ ಸಚಿವನಾಗಿದ್ದಾಗಲೂ ಕಾಂಗ್ರೆಸ್ ನವರು ನನಗೆ ಕಿರುಕುಳ ನೀಡುತ್ತಿದ್ದಾರೆ. ಅದಕ್ಕೆ ಹೆದರಲ್ಲ ನಾನು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನ್ನ ಮೇಲೆ ಗಣಿ ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ. ತಮ್ಮ ವಿರುದ್ಧ ಬಂದಿರುವ ಆರೋಪಕ್ಕೆ ಅವರು ಏನು ಹೇಳುತ್ತಾರೆ? ರಾಮಮೂರ್ತಿ ಗೌಡ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಪ್ರಾಸಿಕ್ಯೂಷನ್ ಕೊಡಿ ಅಂತ ರಾಜ್ಯಪಾಲರ ಕೇಳಿದ್ದಾರೆ.
ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಸಿಎಂ ಆಗಿದ್ದ ಸಂದರ್ಭದಲ್ಲಿ ಗಣಿ ಗುತ್ತಿಗೆ ನವೀಕರಣಕ್ಕೆ ₹500 ಕೋಟಿ ಕಿಕ್ಬ್ಯಾಕ್ ಪಡೆದಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಗಣಿ ಗುತ್ತಿಗೆ ನವೀಕರಣದಿಂದ ಸರಕಾರದ ಬೊಕ್ಕಸಕ್ಕೆ ₹5,000 ಕೋಟಿ ನಷ್ಟ ಉಂಟು ಮಾಡಿರುವ ಗಂಭೀರ ಆಪಾದನೆಯನ್ನು ಸಿದ್ದರಾಮಯ್ಯ ಎದುರಿಸುತ್ತಿದ್ದಾರೆ. ವಿಚಾರಣೆಗೆ ಅನುಮತಿ ನೀಡುವಂತೆ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆನಪ್ಪ ಉತ್ತರ ಕೊಡುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಅಲ್ಲಿ ನಾನು ಅಕ್ರಮವನ್ನೇ ಮಾಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಒಂದಿಚೂ ಮಣ್ಣು ಎತ್ತಿಲ್ಲ ಅಂತ ಹೇಳಿದ್ದಾರೆ. ಅವರು ಅಕ್ರಮ ಮಾಡಿದ್ದಾರೋ ಸಕ್ರಮ ಮಾಡಿದ್ದಾರೋ ಎನ್ನುವುದು ನನಗೆ ಗೊತ್ತಿದೆ. ಅದರ ಬಗ್ಗೆ ದಾಖಲೆಗಳೂ ನನ್ನಲ್ಲಿ ಇವೆ. ಮುಂದೆ ಅವರೆಲ್ಲವೂ ಮಾತನಾಡುತ್ತವೆ . ಈ ಮಹಾನುಭಾವರು ನನ್ನ ಬಗ್ಗೆ ಗಣಿ ಗುತ್ತಿಗೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಅನುಮತಿ ನೀಡುವುದು ಇರಲಿ, ಅಲ್ಲಿ ಚನಿಕೆಯಷ್ಟು ಮಣ್ಣನ್ನೇ ಅವರು ಎತ್ತಿಲ್ಲ. ಅವರಿಗೆ ಆ ಗಣಿ ಮಂಜೂರಾಗಿಯೂ ಇಲ್ಲ. ರಾಜ್ಯದ ಬೊಕ್ಕಸಕ್ಕೆ ನಯಾಪೈಸೆ ನಷ್ಟ ಆಗಿಲ್ಲ. ಹಾಗಿದ್ದ ಮೇಲೆ ನನ್ನ ವಿರುದ್ಧ ವಿಚಾರಣೆ ಯಾಕೆ ನಡೆಯುತ್ತಿದೆ? ಯಾಕೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.
ನನ್ನ ಬಾಯಿ ಮುಚ್ಚಿಸೋ ಕೆಲಸ ಮಾಡ್ತಿದ್ದಾರೆ ಇವರು. ಇವರ ಜನ್ಮದಲ್ಲಿ ನನ್ನನ್ನು ಹೆದರಿಸುವ ಶಕ್ತಿ ಇಲ್ಲ. ಎರಡು ಸಲ ಸಿಎಂ ಆಗಿದ್ದೆ. ನಾನೇನಾದ್ರೂ ಅಕ್ರಮ ಮಾಡಿದ್ದಿದ್ದರೆ ಐದೇ ನಿಮಿಷದಲ್ಲಿ ಸರಿ ಮಾಡಿಕೊಳ್ಳಲು ಆಗುತ್ತಿರಲಿಲ್ಲವೇ? ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ ಎಂದು ತಿರುಗೇಟು ಕೊಟ್ಟರು.












Click it and Unblock the Notifications