ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇಂದ್ರದ ಒಪ್ಪಿಗೆ
ಬೆಂಗಳೂರು, ನವೆಂಬರ್ 27 : ಮೇಕೆದಾಟು ಯೋಜನೆಯ ವಿಚಾರದಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಿದೆ. ಕೇಂದ್ರ ಜಲ ಆಯೋಗ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್ ಸಿದ್ಧಪಡಿಸಿ ಕಳುಹಿಸುವಂತೆ ಸೂಚನೆ ನೀಡಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ತೀರ್ಮಾನಿಸಲಾಗಿತ್ತು. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಲಾಗಿತ್ತು.
ಮೇಕೆದಾಟು ಯೋಜನೆ ವಿವಾದ ಏಕೆ, ಏನು?
ಯೋಜನೆ ಜಾರಿಗೆ ಕೇಂದ್ರ ಜಲ ಆಯೋಗ ಸಹಮತ ವ್ಯಕ್ತಪಡಿಸಿದೆ. ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಕಳುಹಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಯೋಜನೆಗೆ ತಮಿಳುನಾಡು ರಾಜ್ಯ ವಿರೋಧ ವ್ಯಕ್ತಡಿಸುತ್ತಿದೆ. ಕರ್ನಾಟಕದಲ್ಲಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆದಿತ್ತು.
ಕಾವೇರಿ ನದಿ ನೀರು ಹಂಚಿಕೆ, ಕ್ಯಾತೆ ತೆಗೆದ ಜಯಲಲಿತಾ
ಕರ್ನಾಟಕ ಹಿಂದೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಾಗ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜಯಲಲಿತಾ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದ್ದರಿಂದ, ಯೋಜನೆಗೆ ಒಪ್ಪಿಗೆ ಸಿಕ್ಕಿರಲಿಲ್ಲ.
ಮೇಕೆದಾಟು ಯೋಜನೆಗಾಗಿ ಗಡ್ಕರಿಯನ್ನು ಭೇಟಿ ಮಾಡಿದ ದೇವೇಗೌಡ
ನೀರಿನ ಹರಿವಿಗೆ ತೊಂದರೆ ಆಗಬಾರದು
ಕೇಂದ್ರ ಜಲ ಆಯೋಗ ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ತಮಿಳುನಾಡು ರಾಜ್ಯಕ್ಕೆ ಹರಿಯುವ ನೀರಿನಲ್ಲಿ ವ್ಯತ್ಯಾಸವಾಗದಂತೆ ವರದಿ ತಯಾರಿಸಬೇಕು ಎಂದು ನಿರ್ದೇಶನವನ್ನು ಕರ್ನಾಟಕಕ್ಕೆ ಕೊಟ್ಟಿದೆ.
ಕುಮಾರಸ್ವಾಮ-ಮೋದಿ ಭೇಟಿ
ಎರಡು ತಿಂಗಳ ಹಿಂದೆ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ಆಗ ಮೇಕೆದಾಟು ಯೋಜನೆ ಬಗ್ಗೆ ವಿವರಣೆ ನೀಡಿದ್ದರು. ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿದ್ದರು.
ಯೋಜನೆಯ ವಿವರ
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ಅಡ್ಡವಾಗಿ ಸುಮಾರು 66 ಟಿಎಂಸಿ ನೀರನ್ನು ಸಂಗ್ರಹ ಮಾಡಬಲ್ಲ ಅಣೆಕಟ್ಟು ನಿರ್ಮಿಸುವುದು ಯೋಜನೆಯಾಗಿದೆ. ಕರ್ನಾಟಕ ಸರ್ಕಾರ ಇದಕ್ಕೆ ಸುಮಾರು 5912 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಿದೆ.
ಕುಡಿಯುವ ನೀರು, ವಿದ್ಯುತ್ ಉತ್ಪಾದನೆ
ಅಣೆಕಟ್ಟು ನಿರ್ಮಾಣ ಮಾಡಿ ಬೆಂಗಳೂರು, ರಾಮನಗರ ಸೇರಿದಂತೆ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವುದು ಮತ್ತು ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡುವುದು ಯೋಜನೆಯ ಉದ್ದೇಶವಾಗಿದೆ. ಕೆಆರ್ಎಸ್ ಜಲಾಶಯ ಭರ್ತಿಯಾದ ಮೇಲೆ ತಮಿಳುನಾಡಿಗೆ ಹರಿದು ಹೋಗುವ ನೀರನ್ನು ಇದರಲ್ಲಿ ಸಂಗ್ರಹಿಸುವು ಯೋಜನೆ. ಕೆಆರ್ಎಸ್ ಬಳಿಕ ಕಾವೇರಿ ನದಿಗೆ ಕರ್ನಾಟಕದಲ್ಲಿ ಯಾವುದೇ ಅಣೆಕಟ್ಟು ಇಲ್ಲ.
ತಮಿಳುನಾಡು ವಿರೋಧ
ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆ ಆಗಲಿದೆ ಎಂಬುದು ಅವರ ವಾದವಾಗಿದೆ. ಕಾವೇರಿ ಅಂತಿಮ ತೀರ್ಪಿನ ಅನ್ವಯ ತಮಿಳುನಾಡಿಗೆ ವಾರ್ಷಿಕ 177.25 ಟಿಎಂಸಿ ನೀರನ್ನು ಹರಿಸಬೇಕು. ಆದರೆ, ಕರ್ನಾಟಕದಲ್ಲಿ ಮಳೆ ಹೆಚ್ಚಾದಾಗ ಇದಕ್ಕಿಂತಲೂ ಹೆಚ್ಚಿನ ನೀರು ಹರಿದು ಹೋಗುತ್ತದೆ. ಅದನ್ನು ಸಂಗ್ರಹ ಮಾಡಿ, ಕುಡಿಯುವ ನೀರು ಪೂರೈಸಲು ನಿರ್ಧರಿಸಲಾಗಿದೆ.