ಸಿಇಟಿ ಬಿಕ್ಕಟ್ಟು: 75:25 ಅನುಪಾತ ಸೂತ್ರ ತಿರಸ್ಕರಿಸಿದ ಕೆಇಎ
ಬೆಂಗಳೂರು, ಆ.22. ಪುನರಾರ್ತಿತ ಪಿಯುಸಿ ಅಭ್ಯರ್ಥಿಗಳ ಕುರಿತಂತೆ ಸಿಇಟಿ ಬಿಕ್ಕಟ್ಟು ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಹೈಕೋರ್ಟ್ ಕಳೆದ ವಿಚಾರಣೆ ವೇಳೆ ನೀಡಿದ್ದ 75:25 ಸೂತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿರಸ್ಕರಿಸಿದೆ. ಈ ಮಧ್ಯೆ ಹೈಕೋರ್ಟ್ ಈ ಕುರಿತು ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.
ಕಳೆದ ಸಾಲಿನಲ್ಲಿ ಪರೀಕ್ಷೆಯಲ್ಲಿ ಬರೆಯದೆ ಉತ್ತೀರ್ಣರಾಗಿರುವ ಪಿಯು ವಿದ್ಯಾರ್ಥಿಗಳು ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25 ರಷ್ಟು ಅಂಕಗಳನ್ನು ಪರಿಗಣಿಸಿ ಮತ್ತೆ ಹೊಸದಾಗಿ Rank ಪಟ್ಟಿ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರಾಕರಿಸಿದೆ.
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್ಗಳ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕ್ರಮ ಪ್ರಶ್ನಿಸಿ ಹಲವು ವಿದ್ಯಾರ್ಥಿಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಸೋಮವಾರ(ಆಗಸ್ಟ್ 22) ಮತ್ತೆ ವಿಚಾರಣೆಗೆ ಬಂದಾಗ ಕೆಇಎ ಪರ ಸರ್ಕಾರಿ ವಕೀಲರು ಹಾಜರಾಗಿ, ಅರ್ಜಿದಾರ ವಿದ್ಯಾರ್ಥಿಗಳು ಸಿಇಟಿಯಲ್ಲಿ ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ಪಟ್ಟಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಸಿಇಟಿಗೆ ಪಿಯು ಅಂಕ ವಿವಾದ; ಕೌನ್ಸೆಲಿಂಗ್ ಆರಂಭಿಸಲ್ಲ ಎಂದ ಸರ್ಕಾರ
ಅರ್ಜಿದಾರರ ವಕೀಲರು ವಾದ ಮಂಡಿಸಿ, ಕೆಇಎ ನೀತಿ ತಾರತಮ್ಯ ಮತ್ತು ಕಾನೂನು ಬಾಹಿರವಾಗಿದೆ. ಇದರಿಂದ ಅರ್ಜಿದಾರರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಹಾಗಾಗಿ, 2020-21, 2021-22ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಅರ್ಜಿದಾರ ವಿದ್ಯಾರ್ಥಿಗಳು ಪಡೆದಿರುವ ಅಂಕಗಳಲ್ಲಿ ಶೇ.50ರಷ್ಟು ಅಂಕ ಮತ್ತು ಸಿಇಟಿಯಲ್ಲಿ ಪಡೆದಿರುವ ಶೇ.50 ಅಂಕಗಳನ್ನು ಆಧರಿಸಿ ಹೊಸ ಪಟ್ಟಿ ಪ್ರಕಟಿಸಲು ಕೆಇಎಗೆ ನಿರ್ದೇಶಿಸಬೇಕು ಎಂದು ಕೋರಿದರು. ಈ ವಾದ-ಪ್ರತಿವಾದ ಆಲಿಸಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.
75:25 ಸೂತ್ರಕ್ಕೆ ಸಲಹೆ: ಅರ್ಜಿಯನ್ನು ಆ.18ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ತಾವು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.50ಅಂಕಗಳನ್ನು ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮತ್ತೊಂದೆಡೆ ಕೋವಿಡ್ ಹಿನ್ನೆಲೆಯಲ್ಲಿ 2021ನೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣರಾಗಿರುವುದರಿಂದ ವಿದ್ಯಾರ್ಥಿಗಳ ಮನವಿ ಪರಿಗಣಿಸುವುದಿಲ್ಲ ಎಂಬುದಾಗಿ ಸರ್ಕಾರ ಹೇಳುತ್ತಿದೆ.
ಕೆಇಎ ವಿರುದ್ಧ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪ್ರತಿಭಟನೆ
ಹಾಗಾಗಿ, ಎರಡೂ ಕಡೆಯವರ ವಾದವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಅರ್ಜಿದಾರ ವಿದ್ಯಾರ್ಥಿಗಳ ಸಿಇಟಿಯ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯ ಶೇ.25ರಷ್ಟು ಅಂಕ ಪರಿಗಣಿಸಿ ಲಿಸ್ಟ್ ಪ್ರಕಟಿಸಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ಕೆಇಎಗೆ ತಿಳಿಸಿತ್ತು.
ನಿಲುವು ತಿಳಿಸಲು ಸರ್ಕಾರಕ್ಕೆ ಸೂಚನೆ:ಕಳೆದ ಸಾಲಿನಲ್ಲಿ ಪರೀಕ್ಷೆಯಲ್ಲಿ ಬರೆಯದೆ ಉತ್ತೀರ್ಣ ಆಗಿರುವ ಪಿಯು ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟು ಅಂಕಗಳನ್ನು ಪರಿಗಣಿಸಿ ಅವರಿಗೆ ವೃತ್ತಿಪರ ಕೋರ್ಸ್ ಗಳ ಪ್ರವೇಶ ಕಲ್ಪಿಸಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಅರ್ಜಿದಾರರು 25 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಸಕ್ತ ವರ್ಷದಲ್ಲಿ ಪಿಯುಸಿ ಪರೀಕ್ಷೆ ಬರೆದು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸಮನಾಗಿ ಹಿಂದಿನ ವರ್ಷ ಯಾವುದೇ ಪರೀಕ್ಷೆ ಬರೆಯದೇ ಉತ್ತೀರ್ಣವಾಗಿರುವ ವಿದ್ಯಾರ್ಥಿಗಳನ್ನು ಸಮಾನವಾಗಿ ಇಡುವುದು ನ್ಯಾಯಸಮ್ಮತವಲ್ಲ ಎಂದು ಸರ್ಕಾರ ಹೇಳುತ್ತಿದೆ. ಆದ್ದರಿಂದ ಅರ್ಜಿದಾರರು, ಸರ್ಕಾರದ ನಡುವೆ ಸಮತೋಲನ ಸಾಧಿಸಲು 75:25ರ ಅನುಪಾತದಲ್ಲಿ ಅಂಕಗಳನ್ನು ಪರಿಗಣಿಸುವ ಸಾಧ್ಯತೆ ಬಗ್ಗೆ ಸರ್ಕಾರ ನಿಲುವು ತಿಳಿಸಬೇಕು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಈ ವರ್ಷದಿಂದ ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಹೆಚ್ಚಳ..!
Recommended Video
ಅರ್ಜಿದಾರರ ವಾದವೇನು?: 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ 2021-22ನೇ ಶೈಕ್ಷಣಿಕ ವರ್ಷದ ಪಿಯು ಅಂಕ ಅನ್ವಯಿಸುವುದಿಲ್ಲ ಎಂದು ಕೆಇಎ ಹೇಳಿದೆ. ಈ ಕುರಿತು ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತರದೇ ಆದೇಶ ಮಾಡಿ, ಜಾರಿಗೊಳಿಸಲು ಮುಂದಾಗಿದೆ. ಪರೀಕ್ಷೆ ಮುಗಿದ್ದು, ಫಲಿತಾಂಶ ಪ್ರಕಟಿಸಿರುವಾಗ ಕೆಇಎ ನಿಯಮ ಬದಲಿಸಲಾಗದು. ಅದರ ಬದಲಾಗಿ 2020-21, 2021-22 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನು ಆಧರಿಸಿ ಶ್ರೇಯಾಂಕ ಪ್ರಕಟಿಸಬೇಕು ಎಂದು ಅರ್ಜಿದಾರರು ಕೋರಿದ್ದರು.