Get Updates
Get notified of breaking news, exclusive insights, and must-see stories!

ಕೇಂದ್ರ ಸಚಿವ ವಿ.ಸೋಮಣ್ಣ ಕಡೆ ಕುರ್ಚಿ ಎಸೆದು ಕೈ ಕಾರ್ಯಕರ್ತರ ಆಕ್ರೋಶ

ಕೊಪ್ಪಳ: ಬಳ್ಳಾರಿಯಲ್ಲಿ ಇತ್ತೀಚೆಗಷ್ಟೇ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆದ ಗಲಭೆಯ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲೂ ಗದ್ದಲ ಉಂಟಾಗಿದೆ. ಈ ವೇಳೆ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಕಡೆ ಕುರ್ಚಿ ಎಸೆದಿರುವ ಘಟನೆ ನಡೆದಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕಾಂಗ್ರೆಸ್‌ನ ಶಿವರಾಜ ತಂಗಡಗಿ ಹೆಸರನ್ನು ಸೇರಿಸಿಲ್ಲ ಎಂಬ ಕಾರಣಕ್ಕೆ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಕುರ್ಚಿ ಬಿಸಾಡಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಸೋಮಣ್ಣ ಅವರ ಕಾರಿಗೂ ಅಡ್ಡಿಪಡಿಸಿದ್ದಾರೆ. ಸೋಮಣ್ಣ ಅವರತ್ತಲೂ ಕುರ್ಚಿ ಎಸೆಯಲು ಯತ್ನಿಸಿದಾಗ ಅವರ ಬಾಡಿಗಾರ್ಡ್‌ಗಳು ತಡೆದಿದ್ದಾರೆ. ಈ ಗಲಾಟೆಯಿಂದಾಗಿ ಸೋಮಣ್ಣ ವಾಪಸ್‌ ತೆರಳಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಠಾಚಾರ ಉಲ್ಲಂಘನೆಯಾಗಿಲ್ಲ, ಆದರೆ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಿದ್ದಾರೆ ಎಂದು ಸೋಮಣ್ಣ ಆರೋಪಿಸಿದ್ದಾರೆ.

Chair Thrown At Union Minister Somanna In Koppal

ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ಹೈಡ್ರಾಮಾ ನಡೆದಿದೆ. ಕೇಂದ್ರ ಸಚಿವ ವಿ.ಸೋಮಣ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ನಮೂದಿಸಿಲ್ಲ ಎಂದು ಸಚಿವ ತಂಗಡಗಿ ಅಸಮಾಧಾನಗೊಂಡಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಿದೆ, ಹೀಗಿರುವಾಗ ರಾಜ್ಯಕ್ಕೆ ಅವಮಾನ ಮಾಡಬೇಡಿ ಎಂದು ಹೇಳಿದ್ದಾರೆ.

ಶಾಸಕ-ಎಂಎಲ್‌ಸಿ ಫೈಟ್‌

ಮತ್ತೊಂದೆಡೆ ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಹಾಗೂ ವಿಧಾನ ಪರಿಷತ್‌ ಸದಸ್ಯ ಪರಸ್ಪರ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್‌ ಶಾಸಕ ಸಿದ್ದು ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಕಿತ್ತಾಡಿಕೊಂಡಿದ್ದಾರೆ.

ಗೂಂಡಾ ರಾಜ್ಯ ಮಾಡುವುದೇ ಕಾಂಗ್ರೆಸ್‌ನ ಗುರಿ: ವಿಜಯೇಂದ್ರ

ಈ ಘಟನೆಗಳನ್ನು ಉಲ್ಲೇಖಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡಲೇಬೇಕು ಎನ್ನುವುದು ಕಾಂಗ್ರೆಸ್‌ ಪಕ್ಷದ ಗುರಿ ಎನ್ನುವಂತೆ ತೋರುತ್ತಿದೆ ಎಂದು ದೂರಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿ ನೋಡಿ, ನಾವೇನು ಕಮ್ಮಿ ಎನ್ನುವಂತೆ ಕಾಂಗ್ರೆಸ್ ಸಚಿವರು, ಶಾಸಕರು ಕೂಡ ಈಗ ಬಹಿರಂಗವಾಗಿ ಗೂಂಡಾವರ್ತನೆಗೆ ಇಳಿದಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಿ, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಕಾಂಗ್ರೆಸ್ ಕುತಂತ್ರ, ಶಾಂತಿಯ ತೋಟವಾಗಿದ್ದ ಕರ್ನಾಟಕದ ಹಿರಿಮೆಗೆ ಮಸಿ ಬಳಿಯುತ್ತಿದೆ ಎಂದಿದ್ದಾರೆ.

ಈ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುವುದಂತೂ ದೂರವೇ ಉಳಿಯಿತು, ಕೇಂದ್ರ ಸರ್ಕಾರದ ವತಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಸುವುದಕ್ಕೂ ಕಲ್ಲು ಹಾಕುವ ಕೀಳು ಪ್ರವೃತ್ತಿ, ಈ ಕಾಂಗ್ರೆಸ್ ಎಷ್ಟು ಹೀನಾಯ ಸ್ಥಿತಿ ತಲುಪಿದೆ ಎನ್ನುವುದಕ್ಕೆ ಸಾಕ್ಷಿ. ಒಂದೆಡೆ, ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಕಾರಿಗೆ ಅಡ್ಡಪಡಿಸಿ, ಉದ್ದೇಶಪೂರ್ವಕವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮುಂದಾಳತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಇನ್ನೊಂದೆಡೆ ಬೀದರ್‌ನಲ್ಲಿ ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಉಪಸ್ಥಿತಿಯಲ್ಲೇ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ನಮ್ಮ ಪಕ್ಷದ ಹುಮನಾಬಾದ್‌ ಶಾಸಕರಾದ ಸಿದ್ದು ಪಾಟೀಲ್ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ನ ಗೂಂಡಾಗಿರಿ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಪ್ರಚೋದನಕಾರಿ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮಾತ್ರವಲ್ಲ, ಸಂಪೂರ್ಣ ಆಡಳಿತ ಯಂತ್ರವೇ ಕುಸಿದಿದೆ. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಅಸಭ್ಯ, ಅಸಹ್ಯಕರ, ಗೂಂಡಾ ವರ್ತನೆಯನ್ನು ಗಮನಿಸುತ್ತಿದ್ದಾರೆ. ಅವರೇ ನಿಮ್ಮ ಎಲ್ಲ ಕುಕೃತ್ಯಗಳಿಗೂ ಅಂತ್ಯ ಹಾಡುವ ದಿನ ದೂರವಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+