ಕೋಟೆ ಶಿವಣ್ಣ ಮೈಸೂರಿನಲ್ಲಿ ಪ್ರತ್ಯಕ್ಷ
ಚಾಮರಾಜನಗರ, ಏ. 17 : ಗಡಿನಾಡು ಚಾಮರಾಜನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಕೋಟೆ ಶಿವಣ್ಣ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಿವಣ್ಣ, ತಾವು ಮೈಸೂರಿನಲ್ಲಿದ್ದೇನೆ ಎಲ್ಲಿಯೂ ನಾಪತ್ತೆಯಾಗಿಲ್ಲ ಎಂದು ಹೇಳುವ ಮೂಲಕ ಕಾರ್ಯಕರ್ತರ ಆತಂಕವನ್ನು ಕಡಿಮೆ ಮಾಡಿದ್ದಾರೆ.
ಚಾಮರಾಜನಗರದಲ್ಲಿ ಜೆಡಿಎಸ್ ಕೋಟೆ ಶಿವಣ್ಣ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. 2009ರ ಚುನಾವಣೆಯಲ್ಲಿಯೂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿವಣ್ಣ ಅವರು 2014ರ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದ ಅವರು ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದಾರೆ. [ಮತದಾನ ಮಾಡಿದವರು ಯಾರು? ಚಿತ್ರಗಳನ್ನು ನೋಡಿ]

ಎರಡು ದಿನಗಳಿಂದ ಕೋಟೆ ಶಿವಣ್ಣ ಅವರು ಯಾವ ಕಾರ್ಯಕರ್ತರ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರ ಮೊಬೈಲ್ ಫೋನ್ ಸಹ ಸ್ವಿಚ್ ಆಫ್ ಆಗಿದೆ. ಇಂದು ಮತದಾನದ ದಿನವಾಗಿದ್ದು, ಅವರು ಆಗಮಿಸಬಹುದು ಎಂದು ಕಾರ್ಯಕರ್ತರು ಕಾದು ಕುಳಿತಿದ್ದರು. ಆದರೆ, ಕೋಟೆ ಶಿವಣ್ಣ ಆಗಮಿಸದಿರುವುದು ಆತಂಕಕ್ಕೆ ಕಾರಣವಾಗಿದೆ. [ಮತದಾನ ಮಾಡಿದ ನಾಯಕರು ಹೇಳಿದ್ದೇನು?]
2014ರ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಹಳೆ ಹುಲಿಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ ಅವರು, 369,970 ಮತಗಳನ್ನು ಪಡೆದು ಸಂಸತ್ ಪ್ರವೇಶಿಸಿದ್ದರು. ಬಿಜೆಪಿ ಅಭ್ಯರ್ಥಿ ಕೃಷ್ಣಮೂರ್ತಿ 365,968 ಮತಗಳನ್ನು ಪಡೆದು ಸೋಲುಂಡಿದ್ದರು. ಜೆಡಿಎಸ್ ಅಭ್ಯರ್ಥಿ ಕೋಟೆ ಶಿವಣ್ಣ 106,876 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.
ಈ ಮೂವರು ನಾಯಕರು ಈ ಬಾರಿ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಅದರಲ್ಲೂ ಕಳೆದ ಬಾರಿ ಕೇವಲ ಒಂದು ಮತಗಳ ಅಂತರದಿಂದ ಸೋಲು ಅನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮತ್ತು ಮೂರನೇ ಸ್ಥಾನ ಪಡೆದಿದ್ದ ಕೋಟೆ ಶಿವಣ್ಣ ಕ್ಷೇತ್ರದಲ್ಲಿ ಜಯಗಳಿಸಬೇಕು ಎಂದು ಭರ್ಜರಿ ಪ್ರಚಾರ ಕೈಗೊಂಡಿದ್ದರು. ಆದರೆ, ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕ ಶಿವಣ್ಣ ನಾಪತ್ತೆಯಾಗಿದ್ದಾರೆ.
ಕಾಂಗ್ರೆಸ್ ಹೇಳಿದ್ದೆ ಬೇರೆ : ತಮ್ಮ ಪ್ರತಿಸ್ಪರ್ಧಿ ಕಾಣೆಯಾದ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ ಪ್ರತಿಕ್ರಿಯೆ ನೀಡಿದ್ದು, ತಮ್ಮನ್ನು ಸೋಲಿಸುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ. ಆದ್ದರಿಂದ ಕೋಟೆ ಶಿವಣ್ಣ ಅವರು ಕಾಣೆಯಾಗಿದ್ದಾರೆ. ಬಿಜೆಪಿಯವರು ಅವರನ್ನು ಎಲ್ಲಿಗೋ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.












Click it and Unblock the Notifications