ಡಿಕೆಶಿ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಬಿಟ್ಟ ಯೋಗೇಶ್ವರ?
Recommended Video

ರಾಮನಗರ, ಅಕ್ಟೋಬರ್ 16 : ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ನಡೆ ಬಗ್ಗೆ ಗುಟ್ಟು ಬಿಟ್ಟು ಕೊಡದ ಅವರು, ಅಕ್ಟೋಬರ್ 22ರಂದು ಚನ್ನಪಟ್ಟಣದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮುನಿಸಿಕೊಂಡು ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ತೊರೆದಿದ್ದಾರೆ. 'ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಈ ನಿರ್ಧಾರ ಕೈಕೊಂಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಜೊತೆಗೆ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ಕಾರ್ಯದರ್ಶಿಗಳಿಗೂ ರಾಜೀನಾಮೆ ರವಾನಿಸಿದ್ದೇನೆ' ಎಂದು ಸಿ.ಪಿ.ಯೋಗೇಶ್ವರ ಹೇಳಿದ್ದಾರೆ.
ಸಿ.ಪಿ.ಯೋಗೇಶ್ವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, 'ನಮ್ಮ ಸರ್ಕಾರ ಯೋಗೇಶ್ವರ ಅವರಿಗೆ ಕೊಟ್ಟಷ್ಟು ಅವಕಾಶ ಹಾಗೂ ಸ್ವಾತಂತ್ರ್ಯವನ್ನು ಹಿಂದೆ ಯಾರೂ ಕೊಟ್ಟಿಲ್ಲ, ಮುಂದೆಯೂ ಕೊಡಲು ಸಾಧ್ಯವಿಲ್ಲ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯಲ್ಲಿ ಸಂಪೂರ್ಣ ಸಹಕಾರ ನೀಡಲಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾರೂ ಏನು ಮಾಡಲು ಸಾಧ್ಯವಿಲ್ಲ' ಎಂದು ತಿಳಿಸಿದ್ದಾರೆ.
'2018ರ ಚುನಾವಣೆಗೆ ಚನ್ನಪಟ್ಟಣ, ಮದ್ದೂರು ಇಲ್ಲವೇ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ಇದೆ. ಆದರೆ, ನನ್ನ ಕುಟುಂಬದವರು ಯಾರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅಗತ್ಯ ಬಿದ್ದರೆ ಚನ್ನಪಟ್ಟಣದಲ್ಲಿ ಕಾರ್ಯಕರ್ತರೊಬ್ಬರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ' ಎಂದು ಯೋಗೇಶ್ವರ ಸ್ಪಷ್ಟಪಡಿಸಿದರು....

'ರಾಜೀನಾಮೆ ಸಲ್ಲಿಸಿದ್ದೇನೆ'
'ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಈ ನಿರ್ಧಾರ ಕೈಕೊಂಡಿದ್ದೇನೆ. ಇನ್ನು ಮುಂದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾವಚಿತ್ರ, ಹೆಸರು ಬಳಸುವುದು ಬೇಡ. ಕಾಂಗ್ರೆಸ್ ಪಕ್ಷದ ವರಿಷ್ಟರು ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಸರಿಯಾಗಿ ಬಳಕೆ ಮಾಡಲಿಲ್ಲ' ಎಂದು ಸಿ.ಪಿ.ಯೋಗೇಶ್ವರ ಆರೋಪ ಮಾಡಿದರು.

'ನನ್ನ ಅವಶ್ಯಕತೆ ಪಕ್ಷಕ್ಕಿಲ್ಲ'
'ಕಾಂಗ್ರೆಸ್ ಪಕ್ಷದ ನಾಯಕರಿಗೆ ನನ್ನ ಅವಶ್ಯಕತೆ ಇಲ್ಲ ಎನ್ನುವುದು ನನ್ನ ಭಾವನೆ. ಜಿಲ್ಲೆಯಲ್ಲಿ ಏಳೆಂಟು ಜನ ನಾಯಕರುಗಳ ಬಲಿಷ್ಠತ್ವ ಕಾಂಗ್ರೆಸ್ ಪಕ್ಷಕ್ಕಿದೆ'. ಎಂದು ಹೇಳಿದ ಸಿ.ಪಿ.ಯೋಗೇಶ್ವರ ಅವರು ಇಂಧನ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಕ್ಟೋಬರ್ 22ರಂದು ಸಭೆ
ತಮ್ಮ ಮುಂದಿನ ನಡೆ ಬಗ್ಗೆ ಚರ್ಚಿಸಲು ಅಕ್ಟೋಬರ್ 22ರಂದು ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಸಭೆಯನ್ನು ಸಿ.ಪಿ.ಯೋಗೇಶ್ವರ ಕರೆದಿದ್ದಾರೆ. ಅಲ್ಲಿ ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಮುಂದಿನ ತೀರ್ಮಾನವನ್ನು ಪ್ರಕಟಿಸಲಿದ್ದಾರೆ.

ಬಹುಮತದಿಂದ ಗೆಲ್ಲಿಸುವ ವಿಶ್ವಾಸ
'ಯಾವುದೇ ಪಕ್ಷ ಸೇರ್ಪಡೆ ಕುರಿತಂತೆ ಈವರೆಗೆ ನಾನು ಯಾರನ್ನೂ ಸಂಪರ್ಕಿಸಿಲ್ಲ. ಕ್ಷೇತ್ರದಿಂದ ಯಾವುದೇ ಪಕ್ಷದ ಚಿಹ್ನೆಯ ಅಡಿ ನಿಂತರೂ ಜನ ನನ್ನನ್ನು ಭಾರೀ ಬಹುಮತದಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ' ಎಂದು ಸಿ.ಪಿ.ಯೋಗೇಶ್ವರ ಹೇಳಿದರು.

'ಯೋಗೇಶ್ವರ ಪಕ್ಷ ಸೇರುವ ಬಗ್ಗೆ ಗೊತ್ತಿಲ್ಲ'
ಸಿ.ಪಿ.ಯೋಗೇಶ್ವರ ಜೆಡಿಎಸ್ ಪಕ್ಷ ಸೇರಬಹುದು ಎಂಬ ಸುದ್ದಿ ಹಬ್ಬಿದೆ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, 'ಸಿ.ಪಿ.ಯೋಗೇಶ್ವರ ಅವರು ಜೆಡಿಎಸ್ ಸೇರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಈ ಬಗ್ಗೆ ಗೊತ್ತಿಲ್ಲ' ಎಂದು ಹೇಳಿದ್ದಾರೆ.












Click it and Unblock the Notifications