ಸಂಸದರ ಪುತ್ರವಾತ್ಸಲ್ಯಕ್ಕೆ ಪ್ರತಿಷ್ಠೆಯ ಕಣವಾದ ಚನ್ನಪಟ್ಟಣ-ಶಿಗ್ಗಾಂವಿ!
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಪೈಕಿ ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳು ಕೆಲ ಸಾಮ್ಯತೆಗಳನ್ನು ಒಳಗೊಂಡಿದೆ. ಈ ಎರಡೂ ಕ್ಷೇತ್ರಗಳಲ್ಲಿ ಈ ಹಿಂದೆ ಶಾಸಕರಾಗಿದ್ದರು, ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದ್ದಾರೆ.
ಈಗ ತವರು ಕ್ಷೇತ್ರ ಉಳಿಸುಕೊಳ್ಳಲು ಸಂಸದರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಚನ್ನಪಟ್ಟಣ ಶಾಸಕರಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವರೂ ಆಗಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿದ್ದವರು. ಬಳಿಕ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದಾರೆ. ಈಗ ಈ ಇಬ್ಬರೂ ನಾಯಕರಿಗೆ ತಮ್ಮ ತವರು ಕ್ಷೇತ್ರದ ಮೇಲಿದ್ದ ಹಿಡಿತವೇ ದೊಡ್ಡ ಚಿಂತೆಯಾಗಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಗಳು ಬಂದರೆ, ಭವಿಷ್ಯದಲ್ಲಿ ಇದು ದೊಡ್ಡ ಸಂಕಷ್ಟ ತಂದೊಡ್ಡಲಿದೆ ಎಂದು ಚಿಂತೆಯಲ್ಲೇ ಇಬ್ಬರೂ ನಾಯಕರು ತಂತ್ರ ರೂಪಿಸುತ್ತಿದ್ದಾರಂತೆ.

ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಹೇಗಾದರೂ ಮಾಡಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೇ ಟಿಕೆಟ್ ಕೊಡಿಸಿ, ಶಾಸಕನನ್ನಾಗಿ ಮಾಡಬೇಕು ಎಂದು ಪಣ ತೊಟ್ಟಿದ್ದಾರೆ. ಇತ್ತ ಶಿಗ್ಗಾಂವಿಯಲ್ಲೂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಬಿಜೆಪಿ ಟಿಕೆಟ್ ಸಿಗುವುದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ.
ಸದ್ಯಕ್ಕೆ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಚನ್ನಪಟ್ಟಣದಲ್ಲಿ ಅಭ್ಯರ್ಥಿ ಘೋಷಣೆಗೆ ಹಲವು ಅಡ್ಡಿಗಳು ಎದುರಾಗಿವೆ. ಮೈತ್ರಿಯಿಂದಾಗಿ ಜೆಡಿಎಸ್ಗೆ ಈ ಉಪಚುನಾವಣೆಯು ದೊಡ್ಡ ತಲೆನೋವು ತಂದಿಕ್ಕಿದೆ.
ಸಿ.ಪಿ.ಯೋಗೇಶ್ವರ್ ನಾನೇ ನಿಲ್ಲುತ್ತೇನೆ ಎಂದು ಬಿಜೆಪಿಯಿಂದ ರಣಕಹಳೆ ಮೊಳಗಿಸಿದ್ದಾರೆ. ಅತ್ತ ಕಾಂಗ್ರೆಸ್ನಿಂದಲೂ ಅಚ್ಚರಿ ಅಭ್ಯರ್ಥಿ ಘೋಷಣೆಯಾಗಲಿದೆ. ಈ ಕ್ಷೇತ್ರದ ಮೇಲೆ ಡಿಕೆ ಬ್ರದರ್ಸ್ ಕಣ್ಣಿಟ್ಟಿದ್ದು, ಇದನ್ನು ಎದುರಿಸಲು ಮೈತ್ರಿಪಕ್ಷಗಳು ಪ್ರತಿತಂತ್ರ ರೂಪಿಸುತ್ತಿವೆ.
ಈ ಹಿನ್ನೆಲೆ ತೀವ್ರ ಕಗ್ಗಂಟಾಗಿರುವ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಉಭಯ ಪಕ್ಷಗಳ ಹಿರಿಯ ನಾಯಕರ ಮಹತ್ವದ ಸಭೆ ಕೂಡ ನಡೆಯಲಿದೆ. ಇಂದೇ ಅಭ್ಯರ್ಥಿಯ ಘೋಷಣೆಯೂ ಆಗುವ ಸಾಧ್ಯತೆಯೂ ಇದೆ.
ಅತ್ತ ಹಾವೇರಿಯ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಬೊಮ್ಮಾಯಿ ಅವರು ತಮ್ಮ ಪುತ್ರ ಭರತ್ಗೆ ಟಿಕೆಟ್ ಕೊಡಿಸಲೇಬೇಕು ಎಂದು ಫಿಕ್ಸ್ ಆಗಿದ್ದಾರೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಮನವೊಲಿಸಲು ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ.
ಶಿಗ್ಗಾಂವಿಯ ಸ್ಥಳೀಯ ಹಲವು ಪ್ರಬಲ ಆಕಾಂಕ್ಷಿಗಳು ಭರತ್ ಬೊಮ್ಮಾಯಿಗೆ ಟಿಕೆಟ್ ನೀಡುವ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಹೈಕಮಾಂಡ್ನಿಂದಲೇ ಟಿಕೆಟ್ ಅಂತಿಮಗೊಳಿಸುವುದು ಉತ್ತಮ ಎಂದು ಬಸವರಾಜ ಬೊಮ್ಮಾಯಿ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಹೈಕಮಾಂಡ್ ನಾಯಕರಾದ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವರನ್ನು ಭೇಟಿಯಾಗಿ ಪುತ್ರನಿಗೆ ಭವಿಷ್ಯ ಕಟ್ಟಿಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಎರಡೂ ಕ್ಷೇತ್ರಗಳು ಸದ್ಯ ಪುತ್ರ ವಾತ್ಸಲ್ಯದ ಮೇಲೆ ನಿಂತಿದೆ.












Click it and Unblock the Notifications