ಚನ್ನಪಟ್ಟಣ ಟಿಕೆಟ್ ಕುರಿತು ಮಹತ್ವದ ಹೇಳಿಕೆ ನೀಡಿದ ನಿಖಿಲ್ ಕುಮಾರಸ್ವಾಮಿ
ರಾಮನಗರ, ಅಕ್ಟೋಬರ್ 12: ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಭದ್ರಕೋಟೆ. ಈ ಬಾರಿ ಉಪಚುನಾವಣೆಯಲ್ಲಿ ಇಡೀ ರಾಷ್ಟ್ರದ ಗಮನ ಸೆಳೆದಿದೆ. ನಮ್ಮ ಹೈಕಮಾಂಡ್ ಮತ್ತು ಬಿಜೆಪಿ ಹೈಕಮಾಂಡ್ ಚರ್ಚೆ ಮಾಡಿ ಅಭ್ಯರ್ಥಿ ಯಾರು ಅಂತ ತೀರ್ಮಾನ ಮಾಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲ್ಲೂಕಿನ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳ ಸಭೆಯಲ್ಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಈಗಾಗಲೇ ಕುಮಾರಣ್ಣ ಅವರು ಐದು ಜಿಲ್ಲಾ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಪ್ರಮುಖ ಮುಖಂಡರಹಾಗೂ ಸರ್ವಜನಿಕರ ಸಭೆ ನಡೆಸಿದ್ದಾರೆ.ಅತೀ ಶೀಘ್ರದಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗುವ ಸಾಧ್ಯತೆ ಇರುತ್ತೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರುಗಳು, ಮುಖಂಡರುಗಳು ಸಭೆ ನಡೆಸುತ್ತಿದ್ದಾರೆ.
ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಭದ್ರಕೋಟೆ. ಈ ಬಾರಿ ಉಪಚುನಾವಣೆಯಲ್ಲಿ ಇಡೀ ರಾಷ್ಟ್ರದ ಗಮನ ಸೆಳೆದಿದೆ. ಇದಕ್ಕೆ ಕಾರಣ ಕುಮಾರಣ್ಣನ ಸ್ವ ಕ್ಷೇತ್ರ. ಆಗಾಗಿ ಕೆಲವೊಂದು ನಿರ್ಧಾರಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಈ ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅನೇಕ ಸಂದರ್ಭದಲ್ಲಿ ಹೇಳೀದ್ದೇನೆ, ಇಲ್ಲಿ ಅಭ್ಯರ್ಥಿ ಯಾರಾದ್ರೂ ಇರಬಹುದು, ಯಾರೇ ಅಭ್ಯರ್ಥಿ ಆದ್ರೂ 80 ಸಾವಿರ ಮತ ಈ ಕ್ಷೇತ್ರದಲ್ಲಿ ನಿರಂತರವಾಗಿ ಕ್ಷೇತ್ರದ ಜನತೆ ಆಶೀರ್ವಾದ ಮಾಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಇಲ್ಲಿ ನಿಖಿಲ್ ಕುಮಾರಸ್ವಾಮಿನೇ ಬಂದು ಸ್ಪರ್ಧೆ ಮಾಡಬೇಕೆಂದಿಲ್ಲ, ಸಾಮಾನ್ಯ ಕಾರ್ಯಕರ್ತ ನಿಂತಾಗ ಕೂಡ 60 ಸಾವಿರ ಮತ ನೀಡಿದ್ರು, ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದಾಗ 73 ಸಾವಿರ ಮತಗಳು ನೀಡಿದ್ದರು, ಈಗಾಗಿ 80ಸಾವಿರ ಮತಜೆಡಿಎಸ್ ತೆಕ್ಕೆನಲ್ಲಿದೆ, ನಮ್ಮ ಹೋರಾಟ 20 ರಿಂದ 25 ಸಾವಿರ ಮತಗಳಿಗೆ, ಲೀಡ್ ಬರುವುದಕ್ಕೆ ನಮ್ಮ ಹೋರಾಟ ಆಗಾಗಿ ಅಂತಿಮವಾಗಿ NDA ಮಿತ್ರ ಪಕ್ಷವಾಗಿ ಲೋಕಸಭೆಯಲ್ಲಿ ಕೆಲಸ ಮಾಡಿದ್ದೇವೆ ನಮ್ಮ ಹೈಕಮಾಂಡ್ ಮತ್ತು ಬಿಜೆಪಿ ಹೈಕಮಾಂಡ್ ಚರ್ಚೆ ಮಾಡಿ ಅಭ್ಯರ್ಥಿ ಯಾರು ಅಂತ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಈ ವೇಳೆ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಆ ಅಧಿಕಾರಿ ನಾನು ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿದ್ದಾರೆ. ನಾನು ಎಲ್ಲಿ ಬೆದರಿಕೆ ಹಾಕಿದ್ದೇನೆ? ಅವರ ಬಗ್ಗೆ ಇರುವ ವಿಚಾರವನ್ನು ದಾಖಲೆ ಸಮೇತ ಹೇಳಿದ್ದೇನೆ. ಅದನ್ನು ಬೆದರಿಕೆ ಎಂದರೆ ಹೇಗೆ? ಕೇವಲ ರಾಜಕೀಯ ದುರುದ್ದೇಶದಿಂದ ದೂರು ನೀಡಿದ್ದಾರೆ. ನಾನೂ ಅದಕ್ಕೆಲ್ಲ ಹೆದರಲ್ಲ, ಅವರೂ ನನಗೆ ಹೆದರಬೇಕಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.
ನಾನು ಆ ಅಧಿಕಾರಿ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದು ನಿಜ. ನಾನು ಏನು ಮಾತನಾಡಿದ್ದೇನೆ ಎನ್ನುವುದನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ. ಆ ಮಾಧ್ಯಮಗೋಷ್ಠಿ ನಂತರ ಆ ಅಧಿಕಾರಿ ಸಹೋದ್ಯೋಗಿಗಳಿಗೆ ಬರೆದ ಪತ್ರದ ಬಗ್ಗೆಯೂ ಗೊತ್ತಿದೆ. ಈ ವಿಷಯ ನ್ಯಾಯಾಲಯಕ್ಕೆ ಬರುತ್ತದೆ, ಅಲ್ಲಿ ಎದುರಿಸುತ್ತೇನೆ. ನಾನು ಎಲ್ಲಿಯೂ ಹೆದರಿ ಓಡುವ ವ್ಯಕ್ತಿ ನಾನಲ್ಲ. ಅವರೂ ನನಗೆ ಹೆದರಬೇಕಾಗಿಲ್ಲ. ನಾನೂ ಅವರಿಗೆ ಹೆದರಬೇಕಾಗಿಲ್ಲ. ನನ್ನ ವಿರುದ್ಧ 12 ವರ್ಷಗಳಿಂದ ಗಣಿಗಾರಿಕೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಯಾವಾಗ ಕರೆದರೂ ಹೋಗಿದ್ದೇನೆ. ಕೆಲ ದಿನಗಳ ಹಿಂದೆಯೂ ಹೋಗಿದ್ದೇನೆ. ಬರುವುದಿಲ್ಲ ಎಂದು ನಾನು ಹೇಳಿದ್ದೇನೆಯೇ ಎಂದು ಕೇಳಿದರು.
ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ. ರಕ್ಷಿಸಲಿ, ನ್ಯಾಯಾಲಯ ಇದೆ, ಅಲ್ಲಿಯೇ ಎದುರಿಸುತ್ತೇನೆ. ನ್ಯಾಯಾಲಯದ ನನಗೆ ನಂಬಿಕೆ ಇದೆ ಎಂದು ಹೇಳಿದರು.












Click it and Unblock the Notifications