ಭೂ ಸ್ವಾಧೀನ ಕೈಬಿಡಿ: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೈತ ನಿಯೋಗ
ಬೆಂಗಳೂರು,ಡಿಸೆಂಬರ್ 23: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, 430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ. ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು. ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

'ಎಲ್ಲ ಸರ್ಕಾರಗಳಿಂದಲೂ ರೈತರಿಗೆ ನಿರಂತರ ಶೋಷಣೆ'
ಕಳೆದ ಹಲವು ದಶಕಗಳಿಂದ ರಾಜ್ಯ ಹಾಗೂ ಕೇಂದ್ರವನ್ನಾಳುತ್ತಿರುವ ಎಲ್ಲ ಪಕ್ಷಗಳ ಸರ್ಕಾರಗಳು ನಿರಂತರವಾಗಿ ದೇಶದ ರೈತರುಗಳನ್ನು ಶೋಷಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲಾದರೂ ರೈತರುಗಳು ಸಂಘಟನಾತ್ಮಕವಾಗಿ ಹೋರಾಡಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.
ಇಂದು ವಿಶ್ವ ರೈತರ ದಿವಸದ ಸಲುವಾಗಿ ಮೈಸೂರು ನಗರದ ಮುಕ್ತ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ರೈತ ಸಂಘ, ಹಸಿರು ಸೇನೆ, ರಾಜ್ಯ ಕಬ್ಬು ಬೆಳೆಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಚಂದ್ರು ರೈತರ ಬೆಂಬಲ ಬೆಲೆ, ಕಪ್ಪು ಮೂರು ಕರಾಳ ಶಾಸನಗಳನ್ನು ರದ್ದುಗೊಳಿಸಲು ನಿರಂತರ ಒಂದು ವರ್ಷಗಳ ಕಾಲ ಹೋರಾಟ ಮಾಡಿ 900 ರೈತರುಗಳು ತಮ್ಮ ಜೀವವನ್ನೇ ಅರ್ಪಿಸಿದ್ದರು ಸಹ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದುವರೆಗೂ ಇವುಗಳನ್ನು ರದ್ದುಗೊಳಿಸಿಲ್ಲ.
ಕೇಂದ್ರದಲ್ಲಿ ಬಹುಮತವಿಲ್ಲದಿದ್ದರೂ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ದೇಶದ ರೈತರನ್ನು ಅಂಧಕಾರದಲ್ಲಿ ದೂಡಿದೆ. ರಾಜ್ಯ ಸರ್ಕಾರವು ಸಹ ಇದೇ ಶಾಸನಗಳನ್ನು ಮುಂದುವರಿಸಿಕೊಂಡು ಬಂದಿರುವುದು ಆತಂಕಕಾರಿ ಬೆಳವಣಿಗೆ. ಎಲ್ಲ ಪಕ್ಷಗಳ ರಾಜಕಾರಣಿಗಳು ಕೇವಲ ವೋಟ್ ಬ್ಯಾಂಕ್ ಗೋಸ್ಕರ ರೈತರುಗಳನ್ನು ನಿರಂತರ ಶೋಷಿಸುತಿರುವುದರ ವಿರುದ್ಧ ಸಂಘಟನಾತ್ಮಕವಾಗಿ ಒಂದಾಗಿ ಹೋರಾಟ ಮಾಡಿ, ರೈತರೇ ಅಧಿಕಾರಕ್ಕೆ ಬಂದು ರೈತರ ಸರ್ಕಾರ ನಿರ್ಮಾಣ ಮಾಡಿದ ದಿವಸ ಈ ಕೆಟ್ಟ ಸರ್ಕಾರಗಳಿಂದ ದೇಶದ ರೈತರಿಗೆ ಮುಕ್ತಿ ಸಿಗಲು ಸಾಧ್ಯ ಎಂದು ಮಾರ್ಮಿಕವಾಗಿ ತಿಳಿಸಿದರು. ಸಭೆಯಲ್ಲಿ ರೈತ ಮುಖಂಡ ಕುರುಬರು ಶಾಂತಕುಮಾರ್ ಸೇರಿದಂತೆ ಅನೇಕ ರೈತ ನಾಯಕರುಗಳು ಹಾಗೂ ಸಾವಿರಾರು ರೈತರುಗಳು ಭಾಗವಹಿಸಿದ್ದರು.












Click it and Unblock the Notifications