ಸಾಹಿತಿ ಡಾ. ಜಿ.ಎಸ್. ಆಮೂರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ
ಬೆಂಗಳೂರು, ಸೆ. 28: ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್. ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
'ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರರು, ಆಗಲೇ 'ಕಾಮಿಡಿಯ ಪರಿಕಲ್ಪನೆ' ಎಂಬ ಮಹಾಪ್ರಬಂಧ ಬರೆದು ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಪಾಂಡಿತ್ಯ ಹೊಂದಿದ್ದರು. ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ. ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದುಃಖವನ್ನುಂಟು ಮಾಡಿದೆ.

ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ'. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications