ಸಿಎಂ ಆಗಿ 1 ವರ್ಷ ದೆಹಲಿಗೆ ಹೊರಟು ನಿಂತ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಜುಲೈ, 21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 25, 26 ಎರಡು ದಿನಗಳ ಕಾಲ ನವದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದು, "ನಾನು 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದೇನೆ. ಜುಲೈ 25ರಂದು ನಡೆಯಲಿರುವ ಭಾರತದ ನೂತನ ರಾಷ್ಟ್ರಪತಿಗಳ ಪ್ರಮಾಣಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದೇನೆ" ಎಂದರು.
"ವಿವಿಧ ಇಲಾಖೆಗಳ ನಿಯೋಗಗಳೊಂದಿಗೂ ಪಾಲ್ಗೊಳ್ಳಲಾಗುವುದು. ವರಿಷ್ಠರ ಸಮ್ಮತಿಯ ಮೇರೆಗೆ ಸಚಿವ ಸಂಪುಟ ವಿಸ್ತರಣೆಯ ಬಗ್ಗೆಯೂ ಚರ್ಚಿಸಲಾಗುವುದು" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ವರಿಷ್ಠರಿಗೆ ವರದಿ; ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ಒಂದು ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ವರಿಷ್ಠರಿಗೆ ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ವರದಿಯನ್ನು ನೀಡುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರದ ಸುಮಾರು 50ಕ್ಕೂ ಹೆಚ್ಚು ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರನ್ನು ಕೈಬಿಟ್ಟಿದ್ದರೂ, ಹೊಸಬರ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ. ವರಿಷ್ಠರ ಭೇಟಿ ಬಳಿಕ ಹೊಸಬರ ಪಟ್ಟಿ ಬಿಡುಗಡೆ ಆಗುತ್ತದೆಯೇ? ಎನ್ನುವುದು ಕುತೂಹಲ ಮೂಡಿಸಿದೆ.
ಜುಲೈ 28ಕ್ಕೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ ಹಾಗೂ ಬಿಜೆಪಿ ಸರ್ಕಾರ 3 ವರ್ಷ ಪೂರೈಸುತ್ತಿರುವ ಹಿನ್ನೆಲೆ ಬೃಹತ್ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಸಮಾವೇಶಕ್ಕೆ ವರಿಷ್ಠರನ್ನು ಆಹ್ವಾನಿಸುವ ಸಾಧ್ಯತೆಯೂ ಇದೆ.

ಬಸವರಾಜ ಬೊಮ್ಮಾಯಿ ಮಾತನಾಡಿ, "ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ನಿಯೋಗವನ್ನು ರಚಿಸಲಾಗುವುದು. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಆದಷ್ಟು ಬೇಗ ನಿರ್ಧಾರ ಕೈಗೊಳ್ಳುತ್ತೇವೆ" ಎಂದರು.












Click it and Unblock the Notifications