ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ
ಬೆಂಗಳೂರು, ಆ.15: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆಸ್ಪತ್ರೆಗೆ ಗೃಹ ಸಚಿವರ ಭೇಟಿ:
ಶಿವಮೊಗ್ಗ ನಗರದಲ್ಲಿ ದುಷ್ಕರ್ಮಿ ಗಳಿಂದ ಇರಿತಕ್ಕೊಳಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಎಂಬ ಯುವಕನನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಗಾಯಾಳು ಪ್ರೇಮ್ಸಿಂಗ್ ಅವರ ಪೋಷಕರ ಜತೆಯೂ ಸಚಿವರು ಮಾತನಾಡಿ ಘಟನೆಯ ಬಗ್ಗೆ ವಿಚಾರಿಸಿದರು. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿದ ಸಚಿವರು, ದುಷ್ಟರನ್ನು ಆದಷ್ಟು ಬೇಗ ಹೆಡೆಮುರಿ ಕಟ್ಟಿ ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡಿದರು.

ಘಟನೆಯ ಹಿಂದೆ, ಇರಬಹುದಾದ ಮತಾಂಧ ಶಕ್ತಿಗಳನ್ನು ಬಯಲು ಮಾಡಬೇಕಿದೆ ಎಂದು ಸಚಿವರು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯವರೂ ಸಚಿವರೊಂದಿಗೆ ಉಪಸ್ಥಿತರಿದ್ದರು.












Click it and Unblock the Notifications