ಕುಮಾರಣ್ಣ ಸರ್ಕಾರಕ್ಕೆ 150 ದಿನ : ಕೇಂದ್ರದಿಂದ ಸಿಕ್ಕಿದ್ದೇನು?
Recommended Video

ಬೆಂಗಳೂರು, ಅಕ್ಟೋಬರ್ 23 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 150 ದಿನಗಳು ಕಳೆದಿವೆ. ನೂರಾಐವತ್ತು ದಿನಗಳಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಾಧನೆ ಏನು? ಎಂಬುದು ಎಲ್ಲರನ್ನು ಕಾಡುವ ಪ್ರಶ್ನೆಯಾಗಿದೆ.
ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಮಾಧ್ಯಮಗಳ ಜೊತೆ ಸಂವಾದ ನಡೆಸಿದರು. 150 ದಿನಗಳಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳ ವಿವರ ನೀಡಿದರು.
ಮಾಧ್ಯಮ ಸಂವಾದದಲ್ಲಿ ಮುಖ್ಯಮಂತ್ರಿಗಳು ಪ್ರತಿ ಇಲಾಖೆಯ ಕುರಿತು ಮಾಹಿತಿ ನೀಡಿದರು. ಸರ್ಕಾರದ ಜನಪ್ರಿಯ ಯೋಜನೆ ಸಾಲ ಮನ್ನಾ ಕುರಿತು ಮಾತನಾಡಿದರು. 'ಬಿಜೆಪಿ ಆರೋಪಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ' ಎಂದು ಪ್ರತಿ ಪಕ್ಷದ ನಾಯಕರಿಗೆ ತಿರುಗೇಟು ಕೊಟ್ಟರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ 7 ಬಾರಿ ದೆಹಲಿಗೆ ಭೇಟಿ ನೀಡಿದ್ದಾರೆ. ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಕೇಂದ್ರದಿಂದ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ....

ಕೇಂದ್ರ ಸರ್ಕಾರದಿಂದ ಉತ್ತಮ ಸ್ಪಂದನೆ
ಮಾಧ್ಯಮಗಳ ಜೊತೆ ಸಂವಾದ ನಡೆಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ರಾಜ್ಯಕ್ಕೆ ಸಂಬಂಧಿಸಿದ ಹಲವಾರು ವಿಷಯಗಳಲ್ಲಿ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಉತ್ತಮ ಸ್ಪಂದನೆ ದೊರೆತಿದೆ' ಎಂದು ಹೇಳಿದರು.

ಭೂಮಿ ಹಸ್ತಾಂತರ
'ಬೆಂಗಳೂರು ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ಹಸ್ತಾಂತರಕ್ಕೆ ಇರುವ ತೊಡಕುಗಳನ್ನು ಕೇಂದ್ರ ರಕ್ಷಣಾ ಸಚಿವರಿಗೆ ಮನವರಿಕೆ ಮಾಡಿ, ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ, ಇರುವ ತೊಡಕುಗಳನ್ನು ನಿವಾರಿಸಲಾಗಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಬಲ ಬೆಲೆ ಖರೀದಿ ಕೇಂದ್ರ
'ಮೊದಲ ಬಾರಿಗೆ ಹೆಸರು ಬೆಳೆಗೆ ಸಕಾಲದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸಲು ಸಾಧ್ಯವಾಗಿದೆ. ಅಲ್ಲದೆ ಹಿಂದಿನ ಬಾಕಿ 954 ಕೋಟಿ ರೂ. ಬಿಡುಗಡೆಗೂ ಅಗತ್ಯ ದಾಖಲೆ, ಮಾಹಿತಿಗಳನ್ನು ಒದಗಿಸಲಾಗಿದ್ದು, ಶೀಘ್ರವೇ ಈ ಮೊತ್ತ ಬಿಡುಗಡೆಯಾಗುವ ನಿರೀಕ್ಷೆ ಇದೆ' ಎಂದು ಕುಮಾರಸ್ವಾಮಿ ಹೇಳಿದರು.

ಹೆದ್ದಾರಿಗಳ ಕೆಲಸಕ್ಕೆ ವೇಗ
'ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಮೆಗಾ ಡೈರಿ ಸ್ಥಾಪನೆಗೆ ನೆರವು, ಕೃಷಿ ಮಾರುಕಟ್ಟೆ ಉನ್ನತೀಕರಣ ಮತ್ತಿತರ ವಿಷಯಗಳ ಕುರಿತು ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಳೆಗಾರರ ಸಮಸ್ಯೆ
ಇದಲ್ಲದೆ ಇತ್ತೀಚೆಗೆ ಮೈಸೂರು ದಸರಾ ಉತ್ಸವಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ, ರಾಜ್ಯದ ಕಾಫಿ, ತಂಬಾಕು ಹಾಗೂ ಏಲಕ್ಕಿ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಿದ್ದು, ಇವುಗಳ ಪರಿಹಾರಕ್ಕೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ.












Click it and Unblock the Notifications