Siddaramaiah: ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದವರು ನಮಗೆ ಪಾಠ ಮಾಡೋದಕ್ಕೆ ಬರ್ತಾರಾ?: ಸಿದ್ದರಾಮಯ್ಯ ಗರಂ
ಬೆಂಗಳೂರು, ಜೂನ್ 06 : ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸಯೂ ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ ಎಂದು ಬಿಜೆಪಿ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು.
ಈ ಕುರಿತು ಮಂಗಳವಾರ ವಿಧಾನಸೌಧದ ಆವರಣದಲ್ಲಿರುವ ದೇವರಾಜ್ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು.
ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿ, 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ ಎಂದು ಬಿಜೆಪಿ ವಿರುದ್ದ ಕುಟುಕಿದರು.

ನಾಡು ಕಂಡ ಮುತ್ಸದಿ ರಾಜಕಾರಣಿ
ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು.
ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದರು.
ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.












Click it and Unblock the Notifications