ಕಾಂಗ್ರೆಸ್ ಕೈ ಹಿಡಿಯ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಸಭೆ; ಮಹತ್ವದ ಮಾಹಿತಿ ಇಲ್ಲಿದೆ.
ಬೆಂಗಳೂರು, ನವೆಂಬರ್ 23: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಿಲು ಪ್ರಮುಖ ಕಾರಣ ಕಾಂಗ್ರೆಸ್ ನಾಯಕರು ನೀಡಿದ ಪಂಚ ಗ್ಯಾರಂಟಿ ಯೋಜನಗಳು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳ ಪೈಕಿ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಯನ್ನ ಜಾರಿಗೊಳಿಸಿದ್ದು, ಮುಂದಿನ ಜನವರಿಯಲ್ಲಿ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಲು ಸರ್ಕಾರ ಸಿದ್ದತೆ ನಡೆಸಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಕರ್ನಾಟಕದ ಜನತೆ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳು ತಲುಪಬೇಕು ಎಂಬ ನೀಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಚವರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಹಲವು ಸೂಚನೆಗಳನ್ನ ಸಿದ್ದರಾಮಯ್ಯ ಅವರು ನೀಡಿದ್ದಾರೆ.
ಶಕ್ತಿ ಯೋಜನೆ
ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಬಸ್ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಅನ್ನಭಾಗ್ಯ ಯೋಜನೆ
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.
7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಡಿಸೆಂಬರ್ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಗೃಹ ಜ್ಯೋತಿ ಯೋಜನೆ
ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್ ನಿಂದ ಈ ವರೆಗೆ 2900 ಕೋಟಿ ರೂ. ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು
ಗೃಹಲಕ್ಷ್ಮಿ ಯೋಜನೆ
ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸೂಚಿಸಿದರು.
ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.












Click it and Unblock the Notifications