Siddaramaiah: ರಾಜಪ್ಪ ಮೇಷ್ಟ್ರು ಹಾಗೆ ಮಾಡದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ: ಸಿದ್ದರಾಮಯ್ಯ ಹೇಳಿದೇನು?
ಬೆಂಗಳೂರು,ಜುಲೈ 09: ರಾಜಪ್ಪ ಎನ್ನುವ ಮೇಸ್ಟ್ರು ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ಶಾಲೆಗೆ ಸೇರಿಸದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ. ಸಾಮಾಜಿಕ-ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ ಒದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ ಎಂದು ಸೂಚಿಸಿದರು.

ಬಜೆಟ್ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್ಆರ್ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ.
ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8163 ಕೋಟಿ ಕಡ್ಡಾಯವಾಗಿ ಸಿಎಸ್ಆರ್ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1190 ಕೋಟಿ ಕಳೆದ ವರ್ಷ ಸಿಎಸ್ಆರ್ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್ಆರ್ ಅಡಿ ಬಳಸುತ್ತಿವೆ ಎಂದು ಹೇಳಿದರು.
ರಾಮನಗರ ಜಿಲ್ಲೆಯಲ್ಲಿ ಪೈಲೆಟ್ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪೆನಿ ಒಂದೇ 20 ಕೋಟಿ ಸಿಎಸ್ಆರ್ ಅಡಿ ಒದಗಿಸಿದ್ದಾರೆ. ನಾವು 3 ಎಕ್ರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ.
ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು.
ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಚುರುಕುಗೊಳಿಸಬೇಕು. ರಾಜ್ಯದಲ್ಲಿ 217 ವಕ್ಫ್ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ, 22581 ವಕ್ಫ್ ಖಾತೆ ಮ್ಯುಟೇಶನ್ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದರು.












Click it and Unblock the Notifications