ನಾಲ್ವರಿಗೆ ಸಿದ್ದರಾಮಯ್ಯ ಸಂಪುಟ ಸೇರುವ ಭಾಗ್ಯ
ಬೆಂಗಳೂರು, ಜೂ. 10 : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಮತ್ತು ಸಂಪುಟ ವಿಸ್ತರಣೆ ಲೆಕ್ಕಾಚಾರಗಳು ಕಾಂಗ್ರೆಸ್ ಪಕ್ಷದಲ್ಲಿ ಆರಂಭಗೊಂಡಿವೆ. ಅಧಿವೇಶನಕ್ಕೂ ಮೊದಲು ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳು ಭರ್ತಿಯಾಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ.
ವಿಧಾನಪರಿಷತ್ ಮತ್ತು ರಾಜ್ಯಸಭೆಯ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ ಸಂಪುಟ ವಿಸ್ತರಣೆ ಲೆಕ್ಕಾಚಾರ ಆರಂಭವಾಗಿದ್ದು, ಮಂಗಳವಾರ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಈ ಕುರಿತು ಒಂದು ಸುತ್ತಿನ ಮಾತುಕತೆ ನಡೆಸಿ ಬೆಂಗಳೂರಿಗೆ ಮರಳಲಿದ್ದಾರೆ.

ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದರೆ ಡಾ.ಜಿ.ಪರಮೇಶ್ವರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದು, ವಿಧಾನಸಭೆ ಅಧಿವೇಶನ ಆರಂಭವಾಗುವುದಕ್ಕೂ ಮೊದಲು ಅಂದರೆ, ಜೂನ್ 23ಕ್ಕೂ ಮೊದಲು ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. [ವಿಧಾನಪರಿಷತ್ ಮತ್ತು ರಾಜ್ಯಸಭೆ ಅಭ್ಯರ್ಥಿಗಳು ಯಾರು?]
ನಾಲ್ಕು ಸ್ಥಾನ ಖಾಲಿ : ಸಂಸದರಾಗಿ ಆಯ್ಕೆಯಾದ ಪ್ರಕಾಶ್ ಹುಕ್ಕೇರಿ ಅವರು ರಾಜೀನಾಮೆ ನೀಡಿರುವುದರಿಂದ ಸಿದ್ದರಾಮಯ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿಯಿವೆ. ಈ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಚಿಂತನೆ ನಡೆಸಿದ್ದು, ಪರಮೇಶ್ವರ್ ಸೇರಿದಂತೆ ನಾಲ್ವರು ಸಂಪುಟ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಅವರಿಗೆ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದೆ. ಇನ್ನು ಉತ್ತರ ಕರ್ನಾಟಕದ ಭಾಗದ ಶಾಸಕರಿಗೆ ಆದ್ಯತೆ ನೀಡಲು ತೀರ್ಮಾನಿಸಿದ್ದು ಮಾಲೀಕಯ್ಯ ಗುತ್ತೇದಾರ್, ಎನ್.ವೈ.ಮೇಟಿ, ಬಿ.ಬಿ.ಚಿಮ್ಮನಕಟ್ಟಿ, ಕೆ.ಬಿ.ಕೋಳಿವಾಡ ಹಾಗೂ ಮಾಲಕ ರೆಡ್ಡಿ ಅವರುಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. [ಪ್ರಕಾಶ್ ಹುಕ್ಕೇರಿ ರಾಜೀನಾಮೆ]
ಒಬ್ಬರಿಗೆ ಒಂದು ಹುದ್ದೆ : ಕಾಂಗ್ರೆಸ್ ಪಕ್ಷದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮವಿದೆ. ಆದ್ದರಿಂದ ಸಚಿವರಾದ ತಕ್ಷಣ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ತೊರೆಯಲಿದ್ದು, ಈ ಸ್ಥಾನ ಯಾರಿಗೆ? ಎಂಬ ಕುತೂಹಲವಿದೆ.
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಬಸವರಾಜ ರಾಯರೆಡ್ಡಿ, ಬಿ.ಎಲ್.ಶಂಕರ್, ಕೃಷ್ಣಭೈರೇಗೌಡ ಅವರ ಹೆಸರು ಕೇಳಿಬರುತ್ತಿದೆ. ಒಟ್ಟಿನಲ್ಲಿ ಜೂನ್ ತಿಂಗಳ ಅಂತ್ಯದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಬದಲಾವಣೆಗಳಾಗುವುದಂತು ಖಚಿತವಾಗಿದೆ.












Click it and Unblock the Notifications