15-20 ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ; ಸಿಎಂ ಜೈಲಿಗೆ : ಭವಿಷ್ಯ ನುಡಿದ ಯಡಿಯೂರಪ್ಪ
ಬಳ್ಳಾರಿ, ನವೆಂಬರ್ 09: ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವ ಹಕ್ಕನ್ನು ಕಳೆದುಕೊಂಡಿದ್ದಾರೆ ಮತ್ತು ಮುಂದಿನ 15 ರಿಂದ 20 ದಿನಗಳಲ್ಲಿ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ.
ಸಂಡೂರು ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಕಾಲ ದೂರವಿಲ್ಲ. ಸಿದ್ದರಾಮಯ್ಯನವರು ಮತ್ತು ಅವರ ಪತ್ನಿ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಲೋಕಾಯುಕ್ತ ತನಿಖೆ ಎದುರಿಸಿದ್ದಾರೆ ಎಂದು ಹೇಳಿದರು.

ಮೈಸೂರು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಾವು ಒತ್ತಾಯಿಸಿದ್ದೇವೆ. ಸಿಬಿಐ ತನಿಖೆಗೆ ವಹಿಸಿದ 24 ಗಂಟೆಗಳಲ್ಲಿ ಮುಖ್ಯಮಂತ್ರಿಯನ್ನು ಬಂಧನ ಮಾಡಿ ಜೈಲಿಗೆ ಕಳುಹಿಸುವುದು ನಿಶ್ಚಿತ. ಹಣ, ಹೆಂಡ, ಅಧಿಕಾರದ ಬಲದಿಂದ ಹಾಗೂ ಜಾತಿ ವಿಷಬೀಜ ಬಿತ್ತಿ ರಾಜಕಾರಣ ಮಾಡುವ ಕಾಲ ಹೋಗಿದೆ. ಸಿದ್ದರಾಮಯ್ಯನವರೇ, ಇವತ್ತು ಜನ ಜಾಗೃತರಾಗಿದ್ದಾರೆ. ನಿಮ್ಮ ಮೋಸಕ್ಕೆ ಬಲಿ ಆಗುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ ಮೂರಕ್ಕೆ ಮೂರು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಂಗಾರು ಹನುಮಂತು ಅವರ ಚಿಹ್ನೆ ಕಮಲದ ಹೂವಿನ ಗುರುತಿಗೆ ಮತ ಕೊಡಿ. ಹಳ್ಳಿಗಳಿಗೆ ತೆರಳಿ ಬಿಜೆಪಿ ಪರವಾಗಿ ಪ್ರಚಾರ ಮಾಡಬೇಕೆಂದು ಮನವಿ ಮಾಡಿದರು. ಬಂಗಾರು ಹನುಮಂತು ಅವರನ್ನು ಗೆಲ್ಲಿಸುವ ಉದ್ದೇಶದಿಂದ ಯಡಿಯೂರಪ್ಪ ಇಲ್ಲಿಗೆ ಬಂದಿದ್ದು, ಅದಕ್ಕಾಗಿ ನಮ್ಮೆಲ್ಲ ಬಂಧುಗಳು ಮನೆ ಮನೆಗೆ ಹೋಗಿ ಪ್ರಚಾರ ಮಾಡಬೇಕು ಎಂದು ಬಿ ಎಸ್ ಯಡಿಯೂರಪ್ಪ ಅವರು ಹೇಳಿದರು.
ನರೇಂದ್ರ ಮೋದಿಯವರ ಗುರುತು, ಬಂಗಾರು ಹನುಮಂತು ಅವರ ಗುರುತು, ಬಿಜೆಪಿ ಗುರುತು ಕಮಲ -ಕಮಲ-ಕಮಲ ಎಂದು ನೆನಪಿಸಿದರು. ಸಂಡೂರು ಕ್ಷೇತ್ರದಲ್ಲಿ ತಾತ, ಮುತ್ತಾತಂದಿರ ಕಾಲದಿಂದ ಉಳುಮೆ ಮಾಡಿಕೊಂಡು ಬಂದ ರೈತರ ಭೂಮಿಯ ವಿಚಾರದಲ್ಲಿ ಸಮಸ್ಯೆ ಆಗಿದೆ. ಅದನ್ನು ಸರಿಪಡಿಸುವ ಎಲ್ಲ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇನ್ನೂ ಈ ವೇಳೆ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ.
ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ. ಇದ್ದ ವಕ್ಫ್ ಆಸ್ತಿಯನ್ನು ಕಾಂಗ್ರೆಸ್ಸಿನ ಹಿರಿಯ ನಾಯಕರು ಲೂಟಿ ಮಾಡಿದ್ದರು. ಬಾಡಿಗೆ, ಲೀಸ್ ಮೂಲಕ ಸಾವಿರಾರು ಕೋಟಿ ಹಣ ಪಡೆಯುತ್ತಿದ್ದರು. ಇರುವ ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ನಾವು ಹೇಳಿದ್ದೆವು. ಈಗ ವಕ್ಫ್ ಛೂ ಬಿಟ್ಟಿದ್ದಾರೆ; ನೂರಾರು ವರ್ಷಗಳ ಮಂದಿರ, ಮಠ ಹೊಡೆಯಲು ಮುಂದಾಗಿದ್ದಾರೆ. ವಿಜಯಪುರ ಜಿಲ್ಲೆಯ ಪಡಗಾನೂರು ಗ್ರಾಮದಲ್ಲಿ ಚಾಲುಕ್ಯರು ಕಟ್ಟಿದ 1500 ವರ್ಷಗಳ ಹಿಂದಿನ ದೇವಸ್ಥಾನ ವಕ್ಫ್ ಎಂದು ಘೋಷಿಸಿದ್ದಾರೆ ಎಂದು ಆರೋಪಿಸಿದರು.
ಕೇವಲ ಕಾಲಂ ನಂಬರ್ 11ರಲ್ಲಿ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು. ಕೇಳಿದರೆ ಸಮರ್ಪಕ ಉತ್ತರ ಸಿಗಲಿಲ್ಲ ಎಂದು ಆಕ್ಷೇಪಿಸಿದರು. ಸೇಲ್ ಡೀಡ್ ಇಲ್ಲದೆ ವಕ್ಫ್ ಷಡ್ಯಂತ್ರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ. ಫಾರೂಕ್ ಅಬ್ದುಲ್ಲ ಭಯೋತ್ಪಾದಕರನ್ನು ಕೊಲ್ಲಬಾರದು ಎನ್ನುತ್ತಿದ್ದಾರೆ. ಪಾಕ್ ಜೊತೆ ಮಾತುಕತೆ ಮಾಡಲು ಕೋರುತ್ತಾರೆ. ಅವರ ಜೊತೆ ಇಂಡಿ ಒಕ್ಕೂಟ ಇದೆ. ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಭ್ರಮಣೆ ಆಗಿದೆಯೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ತುಷ್ಟೀಕರಣದ ಈ ನೀತಿಯನ್ನು ವಿರೋಧಿಸುತ್ತೇನೆ; ಕಾಂಗ್ರೆಸ್ ಇಲ್ಲಿ ಗೆದ್ದರೆ ನಿಮ್ಮ ಮನೆಗಳನ್ನೂ ವಕ್ಫ್ ಆಸ್ತಿ ಎನ್ನಬಹುದು ಎಂದು ಎಚ್ಚರಿಸಿದರು.












Click it and Unblock the Notifications