ಮರ್ಯಾದೆಗೇಡು ಹತ್ಯೆಗಳ ಬಗ್ಗೆ ಸಿದ್ದರಾಮಯ್ಯ ಬೇಸರ; ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ ಎಂದ ಸಿಎಂ
ಬೆಂಗಳೂರು, ಆಗಸ್ಟ್ 29: ರಾಜ್ಯದಲ್ಲಿ ನಡೆಯುತ್ತಿರುವ ಮರ್ಯಾದೆಗೇಡು ಹತ್ಯೆ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕೋಲಾರದಲ್ಲಿ ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆಗೈದ ಬೆನ್ನಲ್ಲಿಯೇ ಸಿಎಂ ಟ್ವೀಟ್ ಮಾಡಿದ್ದಾರೆ.
ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ.
— CM of Karnataka (@CMofKarnataka) August 29, 2023
"ಜಾತಿ ಸಂರಚನೆಯ… pic.twitter.com/PTK52sAEad
ಈ ಕುರಿತು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ ಅವರು, ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ.

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಲಿದೆ.
ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಅಲ್ಲದೇ ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ ಎಂದು ಹೇಳಿದ್ದಾರೆ.
ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications