ಯಡಿಯೂರಪ್ಪ ಮತ್ತೊಂದು ರಾಜಕೀಯ ನಡೆ: ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ?
ಬೆಂಗಳೂರು, ಜು. 19: ಮುಖ್ಯಮಂತ್ರಿ ಬದಲಾವಣೆ ಕುರಿತು ದೆಹಲಿಯಲ್ಲಿ ಹೈಕಮಾಂಡ್ ತೀವ್ರ ಚರ್ಚೆ ನಡೆಸಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ನಿರ್ಧಾರ ಮಾಡಿದ್ದಾರೆ. ಮುಂದಿನ ತಿಂಗಳು ರಾಜ್ಯ ವಿಧಾನ ಮಂಡಲ ಅಧಿವೇಶನ ಕರೆಯುವ ಮೂಲಕ ಮಹತ್ವದ ಹೆಜ್ಜೆಯನ್ನಿಡಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಬಂದಿದೆ.
ಮುಂದಿನ ತಿಂಗಳು ಆಗಸ್ಟ್ ಮೊದಲ ವಾರದಲ್ಲಿಯೇ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಕರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಆಪ್ತ ಸಚಿವರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ವರ್ಷಗಳಿಂದ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರಿಂದ ಈ ಸಲ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕು. ಆ ಮೂಲಕ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಆದ್ಯತೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಹಿಂದೆಯೇ ಒತ್ತಾಯಿಸಿದ್ದರು.
Recommended Video
ಕಳೆದ 2019ರಿಂದ ಕೊರೊನಾ ವೈರಸ್ ಸಂಕಷ್ಟ ಎದುರಾಗಿದೆ. ಹೀಗಾಗಿ ರಾಜಧಾನಿ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿದು ಬಂದಿದೆ. ಚಳಿಗಾಲದ ಅಧಿವೇಶನ ಕನಿಷ್ಠ ಎರಡು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ.