ಚಿಕ್ಕಮಗಳೂರು; ನಾಲ್ವರು ವಕೀಲರ ಮೇಲಿನ ಎಫ್ಐಆರ್ಗೆ ತಡೆ
ಬೆಂಗಳೂರು, ಡಿಸೆಂಬರ್ 05: ಚಿಕ್ಕಮಗಳೂರಿನಲ್ಲಿ ಕಳೆದ ವಾರ ನಡೆದ ವಕೀಲರ ಮೇಲಿನ ಹಲ್ಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಕೀಲರು ಹಾಗೂ ಪೊಲೀಸರು ಇಬ್ಬರೂ ಜಿದ್ದಿಗೆ ಬಿದ್ದಂತೆ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲದೆ, ಪ್ರತಿಭಟನೆಗಳಲ್ಲಿ ತೊಡಗಿದ್ದ ಬೆನ್ನಲ್ಲೆ, ಪೊಲೀಸ್ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಚಿಕ್ಕಮಗಳೂರಿನ ನಾಲ್ವರು ವಕೀಲರ ಮೇಲೆ ದಾಖಲಿಸಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಚಿಕ್ಕಮಗಳೂರಿನ ವಕೀಲರಾದ ಡಿ. ಬಿ. ಸುಜೇಂದ್ರ, ಎ. ಕೆ. ಭುವನೇಶ್, ಕೆ. ಬಿ. ನಂದೀಶ್ ಮತ್ತು ಎಚ್. ಎಂ. ಸುಧಾಕರ್ ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ. ಇದೇ ವೇಳೆ ವಕೀಲ ಪ್ರೀತಮ್ ಅವರ ಮೇಲೆ ಪೊಲೀಸರು ದಾಖಲಿಸಿಕೊಂಡಿರುವ ಪ್ರತಿ ದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರಿಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರು, ನಾಲ್ವರು ವಕೀಲರ ವಿರುದ್ದ ಸುಳ್ಳು ಆರೋಪ ಮಾಡಲಾಗಿದೆ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ದುರುದ್ದೇಶದಿಂದ 4 ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ. ಕಾನೂನು ಉಲ್ಲಂಘನೆಕಾರರಂತೆ ವರ್ತಿಸಿದ್ದಾರೆ. ಅರ್ಜಿದಾರರು ಯಾವುದೇ ರೀತಿ ಕಾನೂನು ಉಲ್ಲಂಘನೆ ಮಾಡಿಲ್ಲ. ಆದ್ದರಿಂದ ಅವರ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಏನಿದು ಪ್ರಕರಣ?: ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023ರ ನ.30ರಂದು ಸಂಜೆ ವಕೀಲ ಎನ್. ಟಿ. ಪ್ರೀತಂ ಅವರು ಬೈಕ್ ನಿಲುಗಡೆ ಮಾಡಿದ್ದರು. ಆಗ ಬೈಕ್ ಕೀ ಎತ್ತಿಕೊಂಡಿದ್ದ ಪೊಲೀಸ್ ಅಧಿಕಾರಿ, ನೀವು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದೀರಿ ಎಂದು ತಿಳಿಸಿದ್ದರು.
ಅದಕ್ಕೆ ವಕೀಲ ಪ್ರೀತಮ್ ದಂಡ ಪಾವತಿಸುವುದಾಗಿ ಹೇಳಿದ್ದರು. ಅದಕ್ಕೆ ಒಪ್ಪದ ಪೊಲೀಸರು ಪ್ರೀತಮ್ ಅವರನ್ನು ಠಾಣೆಗೆ ಕರೆದೊಯ್ದು ಹಾಕಿ ಹಾಗೂ ಕ್ರಿಕೆಟ್ ಬ್ಯಾಟಿನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರೂ ಪ್ರೀತಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಅಲ್ಲದೆ, ಈ ಮಾಹಿತಿ ತಿಳಿದಾಗ ಕೆಲ ವಕೀಲರು ಠಾಣೆಗೆ ತೆರಳಿ ಪ್ರತಿಭಟನೆ ನಡೆಸಿ, ಪೊಲೀಸದ ದುಂಡಾವರ್ತನೆಯನ್ನು ಖಂಡಿಸಿದ್ದಾರೆ. ಗಾಯಗೊಂಡ ಪ್ರೀತಮ್ ಅವರನ್ನು ಆಸ್ಪತ್ರೆಗೆ ಸೇರಿದ್ದಾರೆ. ಈ ಮಧ್ಯೆ ಅರ್ಜಿದಾರ ವಕೀಲರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರೀತಮ್ ಅವರ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದ ಪೊಲೀಸ್ ಅಧಿಕಾರಿ ಎ. ಎಂ. ಸತೀಶ್ ಅವರಿಂದ ಮೊಬೈಲ್ ಕಿತ್ತುಕೊಂಡು, ಅದಕ್ಕೆ ಪ್ರಶ್ನೆ ಮಾಡಿಕ್ಕೆ ಅವರ ಹಲ್ಲೆ ನಡೆಸಲು ಯತ್ನಿಸಿದ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ, ಜೀವ ಬೆದರಿಕೆವೊಡ್ಡಿದ ಮತ್ತು ಸಾರ್ವಜನಿಕ ಶಾಂತಿಭಂಗ ಉಂಟು ಮಾಡಿದ ಆರೋಪ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಪೊಲೀಸರು ಮತ್ತು ವಕೀಲರ ಜಟಾಪಟಿ ಜೋರಾದ ಕಾರಣ ಕರ್ನಾಟಕ ಸರ್ಕಾರ ಪ್ರಕರಣದ ಕುರಿತು ಸಿಐಡಿ ತನಿಖೆಗೆ ಆದೇಶಿಸಿದೆ. ಪೊಲೀಸರನ್ನು ಬಂಧಿಸಬೇಕು ಎಂದು ವಕೀಲರು, ಪೊಲೀಸರನ್ನು ಬಂಧಿಸಬಾರದು ಎಂದು ಪೊಲೀಸ್ ಸಿಬ್ಬಂದಿ, ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಕಾರಣಕ್ಕೆ ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ.












Click it and Unblock the Notifications