ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಲೋಚನಾ ಸಭೆ
ಬೆಂಗಳೂರು, ಜು. 14: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಟ್ಟಿರುವ ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ-ಕರ್ನಾಟಕ (ಸಿಎಸಿಎಲ್ ಕೆ) ಬೆಂಗಳೂರಿನ ಶಾಸಕರ ಭವನದಲ್ಲಿ ಜು. 15 ರಂದು ರಾಜ್ಯ ಮಟ್ಟದ ಸಮಾಲೋಚನಾ ಸಭೆ ಹಮ್ಮಿಕೊಂಡಿದೆ.
"18 ವರ್ಷದೊಳಗಿನ ಎಲ್ಲಾ ರೀತಿಯ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿ" ಎಂಬ ಧ್ಯೇಯವಾಕ್ಯದಡಿ ಹೋರಾಟ ನಡೆಸುತ್ತಿರುವ ಸಮಿತಿ, ಈ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸುತ್ತಿದೆ. ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದೆ.[ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಏನು ಮಾಡಬಹುದು?]
ಸಭೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿರುವರು. ಡಾ. ನಿರಂಜನಾರಾಧ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಭೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮಕ್ಕಳ ಹಿತ ದೃಷ್ಠಿಯಿಂದ ಒಂದು ಉತ್ತಮ ಕಾಯಿದೆ ಬರುವ ನಿಟ್ಟಿನಲ್ಲಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬಾಲಕಾರ್ಮಿಕ ಪದ್ಧತಿ ಕಾಯ್ದೆ ಅನುಷ್ಠಾನಕ್ಕೆ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳೇನು? ಇರುವ ಕಾಯ್ದೆಯ ಸಮರ್ಪಕ ಅನುಷ್ಠಾನ ಹೇಗೆ? ಬಾಲಕಾರ್ಮಿಕರಿದ್ದರೆ ಅವರಿಗೆ ಪುನರ್ವಸತಿ ಕಲ್ಪಿಸುವುದು ಹೇಗೆ? ಇನ್ನು ಮುಂತಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.