ಎರಡು ಕ್ಷೇತ್ರದ ಉಪ ಚುನಾವಣೆ : ಮೈತ್ರಿ ನಾಯಕರ ಮಹತ್ವದ ಸಭೆ
ಬೆಂಗಳೂರು, ಏಪ್ರಿಲ್ 29 : ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ನ ನಾಯಕರು ಮಹತ್ವದ ಸಭೆ ನಡೆಸಿದರು. ಎರಡು ಕ್ಷೇತ್ರದ ಉಪ ಚುನಾವಣೆಯನ್ನು ಗೆಲ್ಲಲು ನಾಯಕರು ತಂತ್ರವನ್ನು ರೂಪಿಸಿದರು. ಮೇ 19ರಂದು ಎರಡು ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ನಲ್ಲಿ ಭಾನುವಾರ ಸರಣಿ ಸಭೆಗಳು ನಡೆದವು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಕುರಿತು ಚರ್ಚಿಸಿದರು.
ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ, ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟ ಗೆಲ್ಲುವ ಸ್ಥಾನಗಳ ಕುರಿತು ನಾಯಕರು ಚರ್ಚೆಯನ್ನು ಮಾಡಿದರು.
ವಿಧಾನಸಭೆಯಲ್ಲಿ ಸದಸ್ಯ ಬಲವನ್ನು ಹೆಚ್ಚಿಸಿಕೊಳ್ಳಲು ಕುಂದಗೋಳ, ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ತೀರ್ಮಾನ ಕೈಗೊಳ್ಳಲಾಯಿತು. ಉಪ ಚುನಾವಣೆಯಲ್ಲಿ ಅಭ್ಯರ್ಥಿ ಕಣಕ್ಕಿಳಿಸದೇ ಜೆಡಿಎಸ್ ಕಾಂಗ್ರೆಸ್ಗೆ ಬೆಂಬಲ ನೀಡಿದೆ....

ಚಿಂಚೋಳಿ ವಿಧಾನಸಭಾ ಕ್ಷೇತ್ರ
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾದ ಸುಭಾಷ್ ರಾಥೋಡ್ ಅವರಿಗೆ ಬಿಫಾರಂ ಅನ್ನು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು, ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನ್ಯೂಸ್ ಚಾನೆಲ್ಗಳಿಗೆ ಬಹಿಷ್ಕಾರ
ಕೆ.ಸಿ.ವೇಣುಗೋಪಾಲ್ ಜೊತೆಗಿನ ಸಭೆಯ ಬಳಿಕ ಹೊರಬಂದ ಎಚ್.ಡಿ.ಕುಮಾರಸ್ವಾಮಿ ಅವರು ಸುದ್ದಿ ವಾಹಿನಿಗಳ ಜೊತೆ ಮಾತನಾಡಲು ನಿರಾಕರಿಸಿದರು. 'ನಿಮ್ಮಲ್ಲಿನ ಚರ್ಚೆ, ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ಅದೇಮು ಸ್ಟೋರಿನೋ, ಅದೇನು ಚರ್ಚೆ ಮಾಡ್ತಿರೋ ಮಾಡಿಕೊಳ್ಳಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ' ಎಂದು ಹೇಳಿ ಹೊರಟು ಹೋದರು.

ದಿನೇಶ್ ಗುಂಡೂರಾವ್ ಹೇಳಿದ್ದೇನು?
ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, 'ಲೋಕಸಭಾ ಚುನಾವಣೆ ಮತ್ತು ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ನಾಯಕರು ಚರ್ಚೆ ನಡೆಸಿದ್ದಾರೆ' ಎಂದು ಹೇಳಿದರು.

ಸಮಾನ ಮನಸ್ಕರ ಸಭೆ
ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಕರೆದಿರುವ ಸಮಾನ ಮನಸ್ಕರ ಸಭೆ ಕುರಿತು ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್ ಅವರು, 'ಒಳ್ಳೆ ವಿಚಾರಕ್ಕೆ ಅವರು ಸಭೆ ಕರೆದಿರಬಹುದು. ನಮ್ಮದೇನೂ ಹಿಟ್ಲರ್ ಆಡಳಿತ ಅಲ್ಲವಲ್ಲ. ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತೇನೆ' ಎಂದರು.












Click it and Unblock the Notifications