ಚಿಂಚೋಳಿ, ಕುಂದಗೋಳ ಉಪ ಚುನಾವಣೆ : ಸಿದ್ದರಾಮಯ್ಯ, ಖರ್ಗೆ ಪ್ರತಿಷ್ಠೆ!
ಬೆಂಗಳೂರು, ಏಪ್ರಿಲ್ 30 : ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮೈತ್ರಿ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿಗೆ ಚುನಾವಣೆ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆಯೂ ಇದರಲ್ಲಿ ಅಡಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ, ಕುಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಆದ್ದರಿಂದ, ಕ್ಷೇತ್ರವನ್ನುಉಳಿಸಿಕೊಳ್ಳುವ ಅನಿವಾರ್ಯತೆ ಪಕ್ಷಕ್ಕಿದೆ. ಬಿಜೆಪಿ ಉಪ ಚುನಾವಣೆ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ.
ಕುಂದಗೋಳ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಪ್ರತಿಷ್ಠೆ ಅಡಗಿದೆ. ಚಿಂಚೋಳಿ ಕ್ಷೇತ್ರದಲ್ಲಿ ತಮ್ಮ ಕುಟುಂಬದ ವಿರುದ್ಧ ತೊಡೆ ತಟ್ಟಿರುವ ಡಾ.ಉಮೇಶ್ ಜಾಧವ್ ಅವರಿಗೆ ಮುಖಭಂಗ ಉಂಟು ಮಾಡಲು ಮಲ್ಲಿಕಾರ್ಜುನ ಖರ್ಗೆ ತಂತ್ರ ರೂಪಿಸಿದ್ದಾರೆ.
ಸಿದ್ದರಾಮಯ್ಯ ಅವರು ಕುಂದಗೋಳದಲ್ಲಿ, ಮಲ್ಲಿಕಾರ್ಜುನ ಖರ್ಗೆ ಅವರು ಚಿಂಚೋಳಿಯಲ್ಲಿ ತಾವು ಬಯಸಿದ ಅಭ್ಯರ್ಥಿಗೆ ಟಿಕೆಟ್ ಕೊಡಿಸಿದ್ದಾರೆ. ಮೇ 19ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ....

ಕುಂದಗೋಳ ಕ್ಷೇತ್ರ
ಕುಂದಗೋಳ ಕ್ಷೇತ್ರದಲ್ಲಿ ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಕುರುಬ ಸಮುದಾಯಕ್ಕೆ ಸೇರಿದ ಸಿ.ಎಸ್.ಶಿವಳ್ಳಿ ಅವರು ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕಾಂಗ್ರೆಸ್ ವಶದಲ್ಲಿದ್ದ ಕ್ಷೇತ್ರವನ್ನು ಮರಳಿ ಪಡೆಯಬೇಕು ಎಂದು ಸಿದ್ದರಾಮಯ್ಯ ಪಣ ತೊಟ್ಟಿದ್ದಾರೆ. ಅದಕ್ಕಾಗಿ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ಕೊಡಿಸಿದ್ದಾರೆ.

ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದರು
ಉಪ ಚುನಾವಣೆ ಘೋಷಣೆಗೂ ಮೊದಲೇ ಹುಬ್ಬಳ್ಳಿಗೆ ಸಿದ್ದರಾಮಯ್ಯ ಆಗಮಿಸಿದ್ದಾಗ ಕುಂದಗೋಳ ಕ್ಷೇತ್ರದ ನಾಯಕರು ಅವರನ್ನು ಭೇಟಿಯಾಗಿದ್ದರು. ಹಲವು ಜನರು ಟಿಕೆಟ್ಗಾಗಿ ಬೇಡಿಕೆಯನ್ನು ಇಟ್ಟಿದ್ದರು. ಶಿವಳ್ಳಿ ಕುಟುಂಬದ ಬದಲು ಬೇರೆ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದರು. ಬಂಡಾಯ ಏಳುವ ಸೂಚನೆ ನೀಡಿದ್ದರು. ಆದರೆ, ಎಲ್ಲವರನ್ನೂ ಬದಿಗೊತ್ತಿ ಸಿದ್ದರಾಮಯ್ಯ ಅವರು ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ಕೊಡಿಸಿದ್ದಾರೆ.

ಚಿಂಚೋಳಿ ಕ್ಷೇತ್ರ
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆ ಅಡಗಿದೆ. ಡಾ.ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಸೋಲಿಸಬೇಕು ಎಂದು ಅವರು ಪಣ ತೊಟ್ಟಿದ್ದಾರೆ. ಆದ್ದರಿಂದ, ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಸುಭಾಷ್ ರಾಥೋಡ್ ಅವರಿಗೆ ಟಿಕೆಟ್ ಕೊಟಿಸಿದ್ದಾರೆ.

ರಾಜಕೀಯ ಹಿನ್ನಡೆ ಉಂಟು ಮಾಡುವುದು
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಡಾ.ಉಮೇಶ್ ಜಾಧವ್ ಪಕ್ಷ ತೊರೆದು, ಬಿಜೆಪಿ ಸೇರಿ ಲೋಕಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಣಕ್ಕಿಳಿದಿದ್ದರು. ಲೋಕಸಭಾ ಚುನಾವಣೆಯಲ್ಲಿ ಅವರನ್ನು ಸೋಲಿಸಿ, ಉಪ ಚುನಾವಣೆಯಲ್ಲಿ ಅವಿನಾಶ್ ಜಾಧವ್ ಅವರನ್ನು ಸೋಲಿಸಿ ಮುಖಭಂಗ ಉಂಟು ಮಾಡಲು ಖರ್ಗೆ ಬಯಸಿದ್ದಾರೆ.












Click it and Unblock the Notifications