ಮದುವೆ ಆಮಿಷವೊಡ್ಡಿ ಯುವತಿ ಜೊತೆ ದೈಹಿಕ ಸಂಪರ್ಕ, ವಂಚನೆ: ಪೊಲೀಸ್ ಸಬ್-ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್
ಚಿತ್ರದುರ್ಗ: ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಶೋಷಿಸಿ, ಗರ್ಭಿಣಿಯಾದಾಗ ಗರ್ಭಪಾತದ ಮಾತ್ರೆ ನೀಡಿ ವಂಚಿಸಿದ ಆರೋಪದ ಮೇಲೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ವಿಭಾಗದ ರಿಸರ್ವ್ ಸಬ್-ಇನ್ಸ್ಪೆಕ್ಟರ್ ವಿರುದ್ಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿ ಪೊಲೀಸ್ ಅಧಿಕಾರಿಯನ್ನು ಡಿಎಆರ್ ವಿಭಾಗದ ಆರ್ಎಸ್ಐ ವರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಸಂತ್ರಸ್ತ ಯುವತಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಯುವತಿಯ ಪರಿಚಯ
ಮೂಲತಃ ದಾವಣಗೆರೆಯವರಾದ ಸಂತ್ರಸ್ತೆ, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಂ ಮೂಲಕ ಆರ್ಎಸ್ಐ ವರುಣ್ ಕುಮಾರ್ ಪರಿಚಯವಾಗಿತ್ತು. ಆ ಸಮಯದಲ್ಲಿ ವರುಣ್ ಕುಮಾರ್ ಪೊಲೀಸ್ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದರು. ಪರಿಚಯ ಹತ್ತಿರವಾಗಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಎನ್ನಲಾಗಿದೆ.

ದೂರಿನ ಪ್ರಕಾರ, ವರುಣ್ ಕುಮಾರ್ ಯುವತಿಯನ್ನು ಮದುವೆಯಾಗುವುದಾಗಿ ನಿರಂತರವಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ಈ ಮಧ್ಯೆ ಯುವತಿ ಗರ್ಭಿಣಿಯಾಗಿದ್ದರು. ವಿಷಯ ತಿಳಿದು ತಕ್ಷಣ ಮದುವೆಯಾಗುವಂತೆ ಯುವತಿ ಒತ್ತಾಯಿಸಿದಾಗ, ಆರೋಪಿ ವರುಣ್ ಕುಮಾರ್ ಮದುವೆಯಾಗುವ ಬದಲು ಆಕೆಗೆ ಬಲವಂತವಾಗಿ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದಾರೆ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾರೆ.
ಎಸ್ಪಿ ಭೇಟಿಯಾಗಿ ನ್ಯಾಯಕ್ಕೆ ಆಗ್ರಹ
ತನಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಮತ್ತು ಆರೋಪಿತ ಪೊಲೀಸ್ ಅಧಿಕಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ ಸಂತ್ರಸ್ತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಆರ್ಎಸ್ಐ ವರುಣ್ ಕುಮಾರ್ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮಹಿಳಾ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣದ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಮುಂದಿನ ಕ್ರಮ ಏನು?
ಸಾಮಾನ್ಯವಾಗಿ ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಹೊಂದುವುದು ಮತ್ತು ಬಲವಂತವಾಗಿ ಗರ್ಭಪಾತ ಮಾಡಿಸುವ ಪ್ರಕರಣಗಳಲ್ಲಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ವಂಚನೆ, ಅತ್ಯಾಚಾರದ ಆಮಿಷ ಹಾಗೂ ಸಮ್ಮತಿಯಿಲ್ಲದೆ ಗರ್ಭಪಾತ ಮಾಡಿಸಿದ ಗಂಭೀರ ಸಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ.
ಪೊಲೀಸ್ ಇಲಾಖೆಯ ನಿಯಮಗಳ ಪ್ರಕಾರ, ಯಾವುದೇ ಅಧಿಕಾರಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿ ಅವರು ತಲೆಮರೆಸಿಕೊಂಡರೆ ಅಥವಾ 48 ಗಂಟೆಗಳಿಗಿಂತ ಹೆಚ್ಚು ಕಾಲ ಪೊಲೀಸ್ ವಶದಲ್ಲಿದ್ದರೆ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಲಾಗುತ್ತದೆ. ತನಿಖೆಯ ವರದಿ ಬಂದ ಬಳಿಕ ಇಲಾಖಾ ವಿಚಾರಣೆ ನಡೆಸಿ ವಜಾಗೊಳಿಸುವ ಅವಕಾಶವೂ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿ, ನಕಲಿ ಭರವಸೆಗಳನ್ನು ನಂಬಿ ವಂಚನೆಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.













Click it and Unblock the Notifications