ರಾಘವೇಶ್ವರ ಭಾರತಿ ಶ್ರೀಗಳಿಗೆ ಸಿಐಡಿ ನೋಟಿಸ್
ಬೆಂಗಳೂರು, ಅ.13 : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. 24 ಗಂಟೆಯೊಳಗೆ ವಿಚಾರಣೆಗೆ ಆಗಮಿಸಬೇಕೆಂದು ಸೂಚನೆ ನೀಡಿದ್ದಾರೆ.
ಭಾನುವಾರ ಹೊನ್ನಾವರದ ಕೆಕ್ಕಾರು ಮಠಕ್ಕೆ ತೆರಳಿದ ಸಿಐಡಿ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರ ತಂಡ ಸ್ವಾಮೀಜಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, 24 ಗಂಟೆಯೊಳಗಾಗಿ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದೇವೇಳೆ ಶ್ರೀಗಳಿಗೆ ನೀಡಿರುವ ತಾತ್ಕಾಲಿಕ ಮಧ್ಯಂತರ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸರ್ಕಾರಿ ಅಭಿಯೋಜಕರು ಇಂದು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ.

ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷರು ಹಾಗೂ ಸದಸ್ಯರು ಬೆಂಗಳೂರಿಗೆ ಆಗಮಿಸಿ, ಪ್ರೇಮಲತಾ ದಿವಾಕರ್ ಶಾಸ್ತ್ರಿ ಅವರ ಹೇಳಿಕೆ ದಾಖಲು ಮಾಡಿಕೊಂಡಿದ್ದರು. ಆನಂತರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಪ್ರಕರಣದ ತನಿಖೆಯ ಪ್ರಗತಿ ಕುರಿತು ಮಾಹಿತಿ ಪಡೆದಿದ್ದರು. ಭಾನುವಾರ ಸಿಐಡಿ ಪೊಲೀಸರು ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. [ಏನಿದು ಪ್ರಕರಣ]
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ಬಂಧನಕ್ಕೆ ವಿಧಿಸಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಅ.9ರ ಗುರುವಾರ ತೆರವುಗೊಳಿಸಿತ್ತು. ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಬೆದರಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಶ್ರೀಗಳ ವಿರುದ್ಧ ಸಿಐಡಿ ತನಿಖೆ ಮುಂದುವರೆಯಲಿ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿತ್ತು. [ರಾಘವೇಶ್ವರ ಶ್ರೀಗಳಿಗೆ ಸಂಕಟ]
ರಾಘವೇಶ್ವರ ಭಾರತಿ ಸ್ವಾಮೀಜಿಗಳ ಪರ ವಕೀಲರು ಸ್ವಾಮೀಜಿಗಳಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ಅ.9ರ ಗುರುವಾರ ಬೆಂಗಳೂರಿನ ಸೆಷೆನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಒಂದು ತಿಂಗಳ ಕಾಲದ ಮಧ್ಯಂತರ ಷರತ್ತುಬದ್ಧ ಜಾಮೀನು ನೀಡಿತ್ತು ಮತ್ತು ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಸೂಚನೆ ನೀಡಿತ್ತು. [ಶ್ರೀಗಳಿಗೆ ನಿರೀಕ್ಷಣಾ ಜಾಮೀನು]












Click it and Unblock the Notifications