ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಐಡಿಗೆ
ಬೆಂಗಳೂರು, ಜುಲೈ 08 : ಕರ್ನಾಟಕ ಸರ್ಕಾರ ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಈ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಚಿವ ಕೆ.ಜೆ.ಜಾರ್ಜ್ ಅವರ ಹೆಸರು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರಿಂದ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ವಿವರ ಪಡೆದುಕೊಂಡರು. [ಗಣಪತಿ ಆತ್ಮಹತ್ಯೆ : ಸಚಿವ ಜಾರ್ಜ್ ಹೇಳುವುದೇನು?]

ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಗಣಪತಿ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದರು. [ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆಗೆ ಕಾರಣ ಯಾರು?]'
'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿಕೆ ನೀಡಿ ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಪೊಲೀಸ್ ಮಹಾ ನಿರ್ದೇಶಕರ ಜೊತೆ ಸಭೆ ನಡೆಸಿದ ಸಿಎಂ ಮತ್ತು ಗೃಹ ಸಚಿವರು ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲು ನಿರ್ಧಾರ ಕೈಗೊಂಡರು. ಸಿಐಡಿ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರ ನೇತೃತ್ವದ ತಂಡ ತನಿಖೆಯನ್ನು ನಡೆಸಲಿದೆ.












Click it and Unblock the Notifications