ಡಿ. 31ರ ಕರ್ನಾಟಕ ಬಂದ್‌ ಕೈ ಬಿಡಿ; ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್ 29; ಎಂಇಎಸ್ ನಿಷೇಧಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ 31ರಂದು ಕನ್ನಡ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಬಂದ್ ಕೈ ಬಿಡಲು ಮನವಿ ಮಾಡಿದ್ದಾರೆ.

ಬುಧವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್‍ನ್ನು ಕೈಬಿಡಬೇಕು" ಎಂದು ಮನವಿ ಮಾಡಿದರು.

"ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕಾನೂನು ಪರಿಶೀಲನೆ ಮಾಡಲಾಗುವುದು" ಎಂದರು.

CM Appeals For Withdrawal Of December 31st Karnataka Bandh Call

"ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ. ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಆಚರಣೆಯನ್ನು ಕೈಬಿಡಬೇಕು" ಎಂದು ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಆರಗ ಜ್ಞಾನೇಂದ್ರ ಮನವಿ; ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಬಂದ್ ಕರೆ ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ. "ವ್ಯಾಪಾರಸ್ಥರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿಂಪಡೆಯಬೇಕು" ಎಂದು ಸಚಿವರು ಮನವಿ ಮಾಡಿದರು.

"ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ವಾಣಿಜ್ಯ ಚಟುವಟಿಕೆ ಸರಿಯಾಗಿ ನಡೆಯುತ್ತಿಲ್ಲ. ಅದನ್ನು ಗನಮದಲ್ಲಿಟ್ಟುಕೊಂಡು ಬಂದ್‌ ಮಾಡಬಾರದು" ಎಂದು ಸಚಿವರು ಹೇಳಿದರು.

"ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಎಂಇಎಸ್ ನಿಷೇಧಿಸುವುದು ಒಂದೆಯಡು ದಿನದಲ್ಲಿ ಆಗುವುದಿಲ್ಲ. ಜನರೇ ಎಂಇಎಸ್ ತಿರಸ್ಕರಿಸಿದ್ದಾರೆ" ಎಂದರು.

ಬಂದ್ ಕರೆಯಲ್ಲಿ ಬದಲಾವಣೆ ಇಲ್ಲ; ಕರ್ನಾಟಕ ಬಂದ್ ಕರೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.

ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, "ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾವುದೇ ಕಾರಣಕ್ಕೂ ಬಂದ್‌ನಿಂದ ಹಿಂದೆ ಸರಿಯುವುದಿಲ್ಲ" ಎಂದರು.

"ಡಿಸೆಂಬರ್ 31ರಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುತ್ತದೆ. ಸಾವಿರಾರು ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. ಜನರು ನಮ್ಮ ಉದ್ದೇಶ ಅರಿತು ಬಂದ್‌ಗೆ ಬೆಂಬಲ ಕೊಡಬೇಕು" ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.

ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಸುವ ವಿಚಾರದಲ್ಲಿ ಸಂಘಟನೆಗಳ ನಡುವೆಯೇ ಪರ-ವಿರೋಧ ಅಭಿಪ್ರಾಯವಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಬುಧವಾರ ಡಿಸೆಂಬರ್ 31ರ ಬಂದ್ ಮುಂದೂಡಿ ಎಂದು ಕನ್ನಡ ಒಕ್ಕೂಟಕ್ಕೆ ಪತ್ರ ಬರೆದಿದ್ದಾರೆ.

ಶುಕ್ರವಾರದ ಬಂದ್‌ಗೆ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣ ಗೌಡ ಹೇಳಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಗುರುವಾರ ರಾಜಭವನ ಚಲೋ ಹಮ್ಮಿಕೊಂಡಿದೆ.

ಕನ್ನಡ ಚಿತ್ರರಂಗ ಶುಕ್ರವಾರದ ಕರ್ನಾಟಕ ಬಂದ್‌ಗೆ ವಿರೋಧ ವ್ಯಕ್ತಪಡಿಸಿದೆ. ಶುಕ್ರವಾರ ಹಲವು ಸಿನಿಮಾಗಳು ಬಿಡುಗಡೆಯಾಗುತ್ತದೆ. ಆದ್ದರಿಂದ ಬಂದ್‌ಗೆ ನೈತಿಕ ಬೆಂಬಲ ಮಾತ್ರ ಎಂದು ಘೋಷಣೆ ಮಾಡಿದೆ.

ಕನ್ನಡ ಚಳಿವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಡಿಸೆಂಬರ್ 31ರಂದು ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ. ಬಂದ್‌ಗೆ ಬೆಂಬಲ ನೀಡಿದ್ದ 30 ಸಂಘಟನೆಗಳು ಈಗ ಬೆಂಬಲ ವಾಪಸ್ ಪಡೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+