ಗ್ರಾಮೀಣ ಬ್ಯಾಂಕ್ ಸಾಲಗಾರ ರೈತರ ಸಮಸ್ಯೆ ನಿವಾರಣೆಗೆ ವಿಶೇಷ ಸಭೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 22: ಗಣಿ ಜಿಲ್ಲೆ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಬೆಳೆ ಸಾಲ ಪಡೆದು ಸುಸ್ತಿದಾರರಾದ ರೈತರಿಗೆ ಓಟಿಎಸ್ ಯೋಜನೆಯಡಿ ಅನುಕೂಲ ಕಲ್ಪಿಸುವ ಅಧಿಕಾರಿಗಳಿಗೆ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರೈತ ಮುಖಂಡರ ನಿಯೋಗದ ಜೊತೆಗೆ ಸಮಸ್ಯೆ ಕುರಿತು ಅವರು ಚರ್ಚಿಸಿ ಮಾತನಾಡಿದರು.

ರೈತರಿಗೆ ಓಟಿಎಸ್ (One Time Settlement) ಯೋಜನೆಯಡಿ ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳ ಜೊತೆಗೆ ಪರಿಹಾರ ಕಳಡುಕೊಳ್ಳುವ ಕುರಿತು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಬ್ಯಾಂಕ್ನಿಂದ ನೋಟಿಸ್
ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು. ಅತೀ ವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ದಂತಹ ಸಮಸ್ಯೆಗಳಿಂದ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೋಟೀಸು, ಲೀಗಲ್ ನೋಟೀಸ್ ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ ಎಂದು ಅಳಲು ತೋಡಿಕೊಳ್ಳಲಾಗಿದೆ.

ಬ್ಯಾಂಕ್ಗಳ ಈ ರೀತಿಯ ಕ್ರಮಗಳಿಂದ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 30 ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓಟಿಎಸ್ ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಹಲವು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಈ ಅನುಕೂಲ ಕಲ್ಪಿಸಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಗೆ ಬ್ಯಾಂಕ್ ಅಧಿಕಾರಿಗಳು ಗೈರು
ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6,500 ಕೋಟಿ ರೂ. ಸುಸ್ತಿ ಸಾಲವಿದೆ. ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಆದರೆ ಬ್ಯಾಂಕ್ ಅಧ್ಯಕ್ಷರು ಸಭೆಗೆ ಗೈರಾಗಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಸಭೆಯಲ್ಲಿ ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಭಾಗವಹಿಸಿದ್ದರು.












Click it and Unblock the Notifications