ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 6: ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಿಗೆ ಸುಮಾರು ಐದು ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಘೋಷಣೆ ಮಾಡಿದ್ದಾರೆ.
ಸದ್ಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಈ ಸಮಸ್ಯೆ ನೀಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಆಗಿರುವ ಮಕ್ಕಳ ದಾಖಲಾತಿ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಆದ್ಯತೆಯಲ್ಲಿ ಶಿಕ್ಷಕರ ನೇಮಕಾತಿಯನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು.
'ಶಿಕ್ಷಣ ಸಚಿವರ ಮನವಿ ಮೇರೆಗೆ ಸರ್ಕಾರವು ಸುಮಾರು ಐದು ಸಾವಿರ ಶಿಕ್ಷಕರನ್ನು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನೇಮಿಸಿಕೊಳ್ಳಲು ತೀರ್ಮಾನಿಸಿದೆ' ಎಂದು ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಅತ್ಯುತ್ತಮ ಸಂಗತಿ ಎಂದು ಶ್ಲಾಘಿಸಿದ ಬೊಮ್ಮಾಯಿ, ಶಿಕ್ಷಕರು ಹೊಸ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಬೇಕು ಹಾಗೂ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಸೂಚಿಸಿದರು.
'ನಾನು ಶೈಕ್ಷಣಿಕ ನೀತಿಗಳನ್ನು ಅಧ್ಯಯನ ಮಾಡಿದ್ದೇನೆ. ಸ್ವಾತಂತ್ರ್ಯಾನಂತರ ವಿದ್ಯಾರ್ಥಿಗಳಿಗೆ ನಾವು ನೀಡುತ್ತಿರುವ ಅತ್ಯುತ್ತಮ ಕೊಡುಗೆಯಿದು. ಇಂಥ ನೀತಿಗಳನ್ನು ಅನುಷ್ಠಾನಗೊಳಿಸುವಾಗ, ಧನಾತ್ಮಕ ಪ್ರತಿಕ್ರಿಯೆಗಳು ಹಾಗೂ ಆಕ್ಷೇಪಣೆಗಳು ಸಹಜ. ನೀತಿಯನ್ನು ಅಧ್ಯಯನ ಮಾಡಲು ಹಾಗೂ ಅವರ ಸಲಹೆಯನ್ನು ಸಲ್ಲಿಸಲು ನಾನು ಶಿಕ್ಷಕರನ್ನು ವಿನಂತಿಸುತ್ತೇನೆ. ಈ ನೀತಿಯನ್ನು ಪ್ರಾಥಮಿಕ ಹಾಗೂ ಮಧ್ಯಮ ಮಟ್ಟದಲ್ಲಿ ಕಾರ್ಯಗತಗೊಳಿಸಲು ಸಿದ್ಧರಿದ್ದೇವೆ' ಎಂದು ಬೊಮ್ಮಾಯಿ ಹೇಳಿದರು.

2021-22ರ ಶೈಕ್ಷಣಿಕ ವರ್ಷದಲ್ಲಿ 31 ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಮತ್ತು ಹತ್ತು ಪಿಯು ಉಪನ್ಯಾಸಕರಿಗೆ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಾಗರಾಜ್ ಸಿಎಂ (ಸರ್ಕಾರಿ ಶಾಲೆ, ದೊಡ್ಡಬನಹಳ್ಳಿ, ಬೆಂಗಳೂರು ದಕ್ಷಿಣ) ಹೇಮಾ ಅಂಗಡಿ (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳಗಾವಿ) ಹಾಗೂ ಪರಮೇಶ್ವರಯ್ಯ ಎಂ (ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಲಾಲವಿ ಬಳ್ಳಾರಿ) ಅವರನ್ನು ಗೌರವಿಸಲಾಯಿತು.
ವಿರೋಧ ಪಕ್ಷಗಳು ಬೇಜವಾಬ್ದಾರಿ ಹೇಳಿಕೆ ನೀಡಬಾರದು: ಉನ್ನತ ಶಿಕ್ಷಣ ಸಚಿವ
ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿರೋಧ ಪಕ್ಷದ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್ಇಪಿ ಕುರಿತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ಇಂಥ ಹೇಳಿಕೆಗಳನ್ನು ನೀಡುವ ಮೂಲಕ, ವಿರೋಧ ಪಕ್ಷದ ನಾಯಕರು ನೀತಿಯನ್ನು ರೂಪಿಸಿದ ಶಿಕ್ಷಕರು ಹಾಗೂ ತಜ್ಞರಿಗೆ ಅಗೌರವ ತೋರುತ್ತಿದ್ದಾರೆ. ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿದವರು ಇಂಥ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದಿಲ್ಲ' ಎಂದು ಹೇಳಿದರು.












Click it and Unblock the Notifications