ಕೇಂದ್ರದ ಮುಂದೆ ಕಲ್ಯಾಣ ಕರ್ನಾಟಕಕ್ಕೆ 5,030 ಕೋಟಿ ರೂ. ಅನುದಾನಕ್ಕೆ ಸಿಎಂ ಬೊಮ್ಮಾಯಿ ಬೇಡಿಕೆ
ಬೆಂಗಳೂರು, ಫೆಬ್ರವರಿ 8: ರಾಜ್ಯದ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಆ ಭಾಗಕ್ಕೆ 5,030 ಕೋಟಿ ರೂಪಾಯಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.
ಸೋಮವಾರ ನವದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ವೇಳೆ ಈ ಬಗ್ಗೆ ಮನವಿ ಸಲ್ಲಿಸಿದರು. ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ರಾಜ್ಯಗಳ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ ಆಂಧ್ರಪ್ರದೇಶವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು.
ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ. 371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ ಎಂದು ತಿಳಿಸಿದರು.

ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಕಲ್ಯಾಣ ಕರ್ನಾಟಕದ ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಹಿಂದುಳಿದಿರುವುದರಿಂದ ಈ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5030 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕ ಮಂಡಳಿಗೆ 731 ಕೋಟಿ ರೂ. ನೆರವು ಬಿಡುಗಡೆ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ 731.03 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.
2021-22ನೇ ಸಾಲಿನ ಬಜೆಟ್ನಲ್ಲಿ 1,492 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಇದರಡಿ ಮೊದಲ ಕಂತಿನಲ್ಲಿ 373 ಕೋಟಿ ರೂ., 2ನೇ ಕಂತಿನಲ್ಲಿ 387 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಇದೀಗ 3 ಹಾಗೂ ನಾಲ್ಕನೇ ಕಂತಿನ ಹಣ ಬಿಡುಡೆಗೆ ಹಣಕಾಸು ಇಲಾಖೆ ಒಪ್ಪಿಗೆ ಪಡೆದು 731.03 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.












Click it and Unblock the Notifications