ಕರ್ನಾಟಕದಲ್ಲಿ ಕೊವಿಡ್-19: ಮುಖ್ಯಮಂತ್ರಿ ಸಭೆಯ ಹೈಲೈಟ್ಸ್
ಬೆಂಗಳೂರು, ಜನವರಿ 17: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿಯು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕೊಂಚ ಕಡಿಮೆಯಿದೆ. ಇದರ ಮಧ್ಯೆ ವಾರಾಂತ್ಯದ ಲಾಕ್ಡೌನ್ ಜಾರಿಗೊಳಿಸಬೇಕೇ ಬೇಡವೇ ಎಂಬುದನ್ನು ಶುಕ್ರವಾರ ನಿರ್ಧರಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ವರ್ಚುವಲ್ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕೊವಿಡ್-19 ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದರು. ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್, ಡಿಸಿಎಂ ಅಶ್ವತ್ ನಾರಾಯಣ ಸೇರಿದಂತೆ ಹಲವು ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮುಂದಿನ ದಿನಗಳಲ್ಲಿ ಹೇಗಿರಲಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಾರಾಂತ್ಯದ ಕರ್ಫ್ಯೂ ಮುಂದುವರಿಸುವ ಕುರಿತು ಶುಕ್ರವಾರದ ಮತ್ತೊಂದು ಸುತ್ತಿನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರ್ ಅಶೋಕ್ ಹೇಳಿದ್ದಾರೆ. ಹಾಗಿದ್ದರೆ ಸೋಮವಾರ ನಡೆದ ಮಹತ್ವದ ಸಭೆಯ ಮುಖ್ಯಾಂಶಗಳೇನು ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಪ್ರಮುಖ ಅಂಶಗಳು:
1. ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ನೀಡುವುದರ ಜೊತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ
2. ಜನರು ಟ್ರಯಾಜಿಂಗ್ ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ
3. ಹೋಮ್ ಐಸೊಲೇಷನ್ ಹೆಚ್ಚಿಸಲು ಸೂಚಿಸಲಾಗಿದ್ದು, ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು
4. ಕೊವಿಡ್-19 ಸೋಂಕು ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸೂಚಿಸುವುದು
5. ಔಷಧಿ ಕಿಟ್ ಅನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚನೆ
6. ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆದು ಹಾಕುವುದು
7. ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು
8. ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಅನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು
9. ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು
10. ಆಮ್ಲಜನಕ ಘಟಕಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚನೆ
11. ಕೊವಿಡ್-19 ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ
12. ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು
13. ಕೊರೊನಾವೈರಸ್ ಲಸಿಕೆ ಅಭಿಯಾನವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ
14. ಔಷಧಿಗಳನ್ನು ಕೂಡಲೇ ಒದಗಿಸಬೇಕು ಹಾಗೂ ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ತೆಗೆದುಕೊಳ್ಳಬೇಕು
15. ಜನರು ಕೊವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನ
16. ಭಾರತ ಸರ್ಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ
17. ಕೊರೊನಾವೈರಸ್ ಲಸಿಕೆಯ ಎರಡನೇ ಡೋಸ್ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧಾರ
18. 15 ರಿಂದ 18 ವರ್ಷ ವಯೋಮಾನದವರಿಗೆ ಕೊವಿಡ್-19 ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲು ಸೂಚನೆ.












Click it and Unblock the Notifications