ಉಚಿತ ಕಣ್ಣಿನ ಚಿಕಿತ್ಸೆ ನೀಡುವ 'ನಾರಾಯಣ ದೇವಾಲಯ' ಉದ್ಘಾಟಿಸಿದ ಸಿಎಂ
ತುಮಕೂರು, ಡಿಸೆಂಬರ್ 07: ರಾಜ್ಯ ಸರ್ಕಾರವು 60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ತಪಾಸಣೆ, ಚಿಕಿತ್ಸೆ, ಉಚಿತ ಕನ್ನಡಕ ನೀಡುವ ಯೋಜನೆ ರೂಪಿಸಿದ್ದು, ಜನವರಿಯಲ್ಲಿ ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ತುಮಕೂರು ಜಿಲ್ಲೆಯ ಶೆಟ್ಟಿಹಳ್ಳಿಯಲ್ಲಿ 'ನಾರಾಯಣ ದೇವಾಲಯ' ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಜಾರಿಯಾಗಿದೆ. ಅದೇ ರೀತಿ ವೈದ್ಯಕೀಯ ಕ್ಷೇತ್ರದಲ್ಲಿರುವವರು ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದರು.
Breaking: ತುಮಕೂರು ಗ್ರಾ. ಶಾಸಕ ಗೌರಿಶಂಕರ್ ವಿರುದ್ಧ ಪ್ರಕರಣ
ನಾರಾಯಣ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಡಾ. ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಬದುಕಿನಲ್ಲಿ ಯಶಸ್ಸು ಪಡೆದ ಎಲ್ಲರು ಸಮಾಜಕ್ಕೆ ಹಿಂತಿರುಗಿಸಿ ನೀಡಬೇಕೆಂಬ ಸಣ್ಣ ಗುಣಧರ್ಮವಿದ್ದರೆ, ಈ ಜಗತ್ತು ಇನ್ನಷ್ಟು ಉತ್ತಮವಾಗುತ್ತದೆ ಎಂದು ಹೇಳಿದರು.
ರಾಜ್ಯದ ಜನರ ಆರೋಗ್ಯಕ್ಕಾಗಿ ವಿಶೇಷ ಕಾರ್ಯಕ್ರಮ
60ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ತಪಾಸಣೆ, ಚಿಕಿತ್ಸೆ ಜೊತೆಗೆ ಕಿವಿಯ ಸಮಸ್ಯೆಗೆ ಕಾಕ್ಲಿಯರ್ ಇಂಪ್ಲಾಂಟ್ ಮಾಡುವ ಯೋಜನೆ 500 ಕೋಟಿ ರೂ.ಗಳ ಯೋಜನೆ ರೂಪಿಸಿದ್ದೇವೆ. ಡಯಾಲಿಸಿಸ್ ಸೈಕಲ್ ಅನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ 12 ಹೊಸ ಕೇಂದ್ರಗಳನ್ನು ತೆರೆದು ಕೀಮೋಥೆರಪಿ ಸೈಕಲ್ ಗಳನ್ನು ದುಪ್ಪಟ್ಟು ಮಾಡಲಾಗಿದೆ. ಈ ಮೂಲಕ ಅತ್ಯಂತ ಸೂಕ್ಷ್ಮ ವಿಚಾರಗಳ ಕಡೆಗೆ ಹೆಚ್ಚಿನ ಗಮನ ನೀಡಿದ್ದೇವೆ ಎಂದು ವಿವರಿಸಿದರು.
ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಪ್ರತಿ ತಾಲ್ಲೂಕು ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲು ಆದೇಶ ಹೊರಡಿಸಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲು ತಲಾ 10.ಕೋಟಿ ರೂ. ವೆಚ್ಚ ನೀಡಲಾಗಿದೆ. ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.
ಎಲ್ಲ ಜಿಲ್ಲೆಗಳಲ್ಲಿ ಉಚಿತ ಆಸ್ಪತ್ರೆ ತೆರೆಯಲು ನಿರ್ಧಾರ
ಜಗತ್ತಿನಲ್ಲಿ ಅತಿ ಹೆಚ್ಚು ಕಣ್ಣಿನ ರೋಗ, ಕುರುಡುತ ಮಕ್ಕಳಿಗೆ ಬರುವುದು ಅಪೌಷ್ಟಿಕತೆಯಿಂದ. ಆದ್ದರಿಂದ ಸರ್ಕಾರ ಈ ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಆಹಾರ ಹಾಗೂ ಔಷಧ ನೀಡುವ ಯೋಜನೆ ರೂಪಿಸಿದೆ. ಅಪೌಷ್ಟಿಕತೆಯಿಂದಾಗುವ ಕಣ್ಣಿನ ತೊಂದರೆ ನಿವಾರಣೆಗೆ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಿದೆ.
ಡಾ ಭುಜಂಗ ಶೆಟ್ಟಿಯವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉಚಿತ ಆಸ್ಪತ್ರೆ ತೆರೆಯುವುದಾಗಿ ಹೇಳಿದ್ದಾರೆ. ಈ ಮೂಲಕ ರಾಜ್ಯವು ಆರೋಗ್ಯ ಕರ್ನಾಟಕ ವಾಗಲಿದೆ. ಮುನುಷ್ಯನ ದೇಹದಲ್ಲಿ ಹೃದಯದ ನಂತರ ಕಣ್ಣು ಮುಖ್ಯವಾದ ಅಂಗ. ಕಣ್ಣಿನಿಂದ ಕೇವಲ ನೋಟವಷ್ಟೆ ಅಲ್ಲ, ಜ್ಞಾನವೂ ಪ್ರಾಪ್ತಿ ಯಾಗುತ್ತದೆ. ಕಣ್ಣಿಲ್ಲದಿದ್ದರೆ ಶಿಕ್ಷಣ, ಸಾಹಿತ್ಯ ಇರುತ್ತಿರಲಿಲ್ಲ. ಇವೆರಡೂ ಇರದಿದ್ದರೆ ಸುಸಂಸ್ಕೃತ ಸಮಾಜದ ನಿರ್ಮಾಣವೂ ಆಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿಗಳು ಕಣ್ಣಿನ ಮಹತ್ವ ಕುರಿತು ತಿಳಿಸಿದರು.
ಇದು ಸಂಪೂರ್ಣ ಉಚಿತ ಕಣ್ಣಿನ ಆಸ್ಪತ್ರೆ
ಉದ್ಘಾಟನೆಗೊಂಡಿರುವುದ ಭುಜಂಗ ಶೇಟ್ಟಿಯವರ ಉಚಿತ ಆಸ್ಪತ್ರೆ. ಇಲ್ಲಿ ಕ್ಯಾಶ್ ಕೌಂಟರ್ ಇಲ್ಲ ಎಂದು ಕೇಳಿದಾಗ ಆಶ್ಚರ್ಯವಾಯಿತು. ತಮ್ಮ ದುಡಿಮೆಯಿಂದ ನೂರರಷ್ಟು ಪುಣ್ಯದ ಕಾರ್ಯ ಮಾಡುತ್ತಿದ್ದಾರೆ. ಈ ರೀತಿಯ ಆಸ್ಪತ್ರೆ ರಾಜ್ಯದಲ್ಲಿ ಎಲ್ಲಿಯೂ ಇಲ್ಲ. ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಮಾಡುತ್ತಾರೆ. ಆದರೆ ಎಲ್ಲಾ ರೀತಿಯ ಆಧುನಿಕ ವ್ಯವಸ್ಥೆಯನ್ನು ಒಳಗೊಂಡ ಆಸ್ಪತ್ರೆ ಇದಾಗಿದೆ. ಬಡವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕೆನ್ನುವ ತೀರ್ಮಾನ ಮಾದರಿಯಾಗಿದೆ ಎಂದು ಬೊಮ್ಮಾಯಿ ಶ್ಲಾಘಿಸಿದರು.
ಬಡವರಿಗೆ ಉತ್ತಮ ಆರೋಗ್ಯ ಸೇವೆಗಾಗಿ ಚಿಂತಿಸಬೇಕು
ವೈದ್ಯರು ಉತ್ತಮ ಸೇವೆಯನ್ನು ಕಡಿಮೆ ದರದಲ್ಲಿ ನೀಡುವ ಕೆಲಸ ಮಾಡಬೇಕು. ಇಂದು ವೈದ್ಯಕೀಯ ಸೇವೆ ಅತ್ಯಂತ ದುಬಾರಿಯಾಗಿದೆ. ಬಡವರು ಉತ್ತಮ ವೈದ್ಯಕೀಯ ಸೇವೆ ಪಡೆಯಲು ಸಾಧ್ಯವಾಗದಂತಾಗಿದೆ. ಈ ಬಗ್ಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗಂಭೀರವಾಗಿ ಚಿಂತಿಸಬೇಕಿದೆ.
ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ ಬಡವರಿಗಾಗಿ ಆಯುಷ್ಮಾನ್ ಭಾರತ
ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆಗೆಂದು ನೀಡುತ್ತಿದೆ. ರಾಜ್ಯ ದಲ್ಲಿ 5 ಕೋಟಿ ಕಾರ್ಡುಗಳನ್ನು ನೀಡುವ ಗುರಿ ಇದ್ದು, ಈಗಾಗಲೇ ಒಂದು ಕೋಟಿ ಕಾರ್ಡ್ ನೀಡಿದ್ದೇವೆ. ಹೀಗಿದ್ದರು ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಇಲ್ಲದೆ ಆಸ್ಪತ್ರೆಗಳಲ್ಲಿ ಸುಲಭ ದರದಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಬಿ.ಸಿ.ನಾಗೇಶ್, ಗೋವಿಂದ ಕಾರಜೋಳ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಸಿ.ಸೋಮಶೇಖರ್, ನಾರಾಯಣ ನೇತ್ರಾಲಯ ಆಸ್ಪತ್ರೆಯ ಹಿರಿಯ ವೈದ್ಯ ಡಾ: ಭುಜಂಗಶೆಟ್ಟಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.