Breaking:ನೆರೆಪೀಡಿತ ಜಿಲ್ಲೆಗಳ ಡಿಸಿ ಜತೆ ಇಂದು ಸಂಜೆ4ಕ್ಕೆ ಸಿಎಂ ಸಭೆ
ಬೆಂಗಳೂರು ಆಗಸ್ಟ್ 06: ನಿರಂತರ ಮಳೆಯಿಂದ ತತ್ತರಿಸಿದ ರಾಜ್ಯದ ಜಿಲ್ಲೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು ಸಹ ಇಂದು (ಶನಿವಾರ) ಸಂಜೆ 4ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಆನ್ಲೈನ್ ಸಂವಾದ ನಡೆಸಲಿದ್ದಾರೆ.
ಸಂಜೆ 4ಗಂಟೆಗೆ ನಡೆಯಲಿರುವ ನೆರೆಪೀಡಿತ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳ ಜತೆಗಿನ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು ತಮ್ಮ ಆರ್.ಟಿ.ನಗರದ ನಿವಾಸದಿಂದಲೇ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಭಾರಿ ಮಳೆ ಮುಂದುವರಿದ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮ ಬಗ್ಗೆ ಚರ್ಚೆ, ನೆರೆಯಿಂದ ಉಂಟಾದ ಹಾನಿ ಕುರಿತು ಮಾಹಿತಿ ಪಡೆಯಲು ಮತ್ತು ಅಗತ್ಯ ಕ್ರಮ ಕುರಿತು ಅಧಿಕಾರಿಗಳಿಗೆ ಸೂಚಿಸಲು ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಕರಾಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ದಾವಣಗೆರೆ, ತುಮಕೂರು, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ಬೀದರ್, ಕಲಬುರಗಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಇತರ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಅಧಿಕಾರಿಗಳು ತಮ್ಮ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಅತಿವೃಷ್ಠಿ, ಬೆಳೆ ಹಾನಿ, ಸಾವು-ನೋವು ಮತ್ತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ಪರಿಹಾರ ಕ್ರಮ ಕುರಿತು ಚರ್ಚಿಸಲಿದ್ದಾರೆ. ಲಭ್ಯ ಮಾಹಿತಿ ಆಧಾರದ ಮೇರೆಗೆ ಅಗತ್ಯತೆಗೆ ಅನುಗುಣವಾಗಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಗೆ ಮುಖ್ಯಮಂತ್ರಿ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.