ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ: ಸಿಎಂ ಹೇಳಿದ್ದೇನು?
ಬೆಂಗಳೂರು ಜನವರಿ 17: ಪಂಚಮಸಾಲಿ ಸಮಾಜದ ಪರ ನೇತೃತ್ವ ವಹಿಸಿರುವ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಅವರ ವಿರುದ್ಧ ಕೇಂದ್ರ ಸರ್ಕಾರಿ ಸೂಕ್ತ ಕ್ರಮ ಕೈಗೊಳ್ಳುವ ಸುಳಿವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
ರಾಜ್ಯದ ಪಂಚಮಸಾಲಿ ಲಿಂಗಾಯತರಿಗೆ 2ಎ ವರ್ಗದ ಮೀಸಲಾತಿ ಬೇಡಿಕೆ ವಿಚಾರದಲ್ಲಿ ಬೃಹತ್ ಹೋರಾಟ ನಡೆದಿತ್ತು. ಅದೇ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸರ್ಕಾರ ನಡುವೆ ನಡೆಯುತ್ತಿರುವ ಜಟಾಪಟಿ ನಡೆದಿದೆ. ಯತ್ನಾಳ್ ವಿರುದ್ಧ ಹಲವು ವಿಚಾರಗಳು ದೆಹಲಿ ಹೈಕಮಾಂಡ್ ನಾಯಕರ ಅಂಗಳ ತಲುಪಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಸೋಮವಾರ ದೆಹಲಿಗೆ ತೆರಳಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಿಡಿ ಕಾರಿದ್ದಾರೆ. ಯತ್ನಾಳ್ ಅವರ ಕುರಿತು ವರದಿ ಹೈಕಮಾಂಡ್ಗೆ ಕಳುಹಿಸಲಾಗಿದೆ. ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ವರದಿಯ ಆಧಾರಿಸಿ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಶಾಸಕ ಬಸನಗೌಡ ಯತ್ನಾಳ್ ಅವರು ರಾಜ್ಯದ ಹೆಚ್ಚು ಜನಸಂಖ್ಯೆಯ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ 2ಎ ಮೀಸಲಾತಿ ಕುರಿತು ಚಳವಳಿ ಮುನ್ನಡೆಸುತ್ತಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಏಕಾಏಕಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂಗೆ ಪತ್ರ ಬರೆದ ಯತ್ನಾಳ್
ಇತ್ತೀಚೆಗೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ಕ್ಯಾಬ್ ಚಾಲಕನ ಹತ್ಯೆಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಅವರ ಕೈವಾಡವಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಇದಕ್ಕೆ ಸಿಟ್ಟಿಗೆದ್ದ ಯತ್ನಾಳ್ ಸಿಬಿಐ ತನಿಖೆಗೆ ಆಗ್ರಹಿಸಿದ್ದು, ಇಂತಹ ಸಚಿವರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಕೋರಿ ಮುಖ್ಯಮಂತ್ರಿಗಳ ಪತ್ರ ಬರೆದಿದ್ದಾರೆ.
ಬಸನಗೌಡ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಸಂದೇಶ ಈಗಾಗಲೇ ನೀಡಿದೆ. ಸರ್ಕಾರದ ವಿರುದ್ಧ ಹೇಳಿಕೆ ನೀಡಿದರೆ ಅದು ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ತಿಳಿಸಿದೆ. ಆದರೆ ಇದನ್ನು ನಿರಾಕರಿಸಿದ ಶಾಸಕ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಇವೆಲ್ಲವುಗಳು ವದಂತಿಗಳು ಎಂದು ಹೇಳಿದ್ದಾರೆ.