ನಿರ್ದಿಷ್ಟ ವಯಸ್ಸಿನ ನಂತರ ಯುವಕರಿಗೆ ಜಾಗ ಬಿಡಬೇಕು: ಈಶ್ವರಪ್ಪ ನಿವೃತ್ತಿ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಬೆಂಗಳೂರು, ಏಪ್ರಿಲ್. 11: ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿಯ ಹಿರಿಯ ಶಾಸಕ ಕೆಎಸ್ ಈಶ್ವರಪ್ಪ ಅವರ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಶ್ಲಾಘಿಸಿದ್ದಾರೆ. ಈಶ್ವರಪ್ಪ ಅವರ ನಿರ್ಧಾರ ಒಂದು ನಿರ್ದಿಷ್ಟ ವಯಸ್ಸಿನ ನಂತರ ನಾವು ಯುವಕರಿಗೆ ಜಾಗವನ್ನು ಬಿಡಬೇಕು ಎಂಬ ಸಂದೇಶವನ್ನು ನೀಡುತ್ತದೆ ಎಂದಿದ್ದಾರೆ.
"ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಕುರಿತು ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಈ ಹಿಂದೆಯೂ ಸ್ಪರ್ಧಿಸಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಅವರ ಅನುಭವದ ಅಗತ್ಯವಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದೆವು. ಈಗ ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

" ಈ ನಿರ್ಧಾರ ಒಂದು ನಿರ್ದಿಷ್ಟ ವಯಸ್ಸಿನ ನಂತರ, ನಾವು ಯುವಕರಿಗೆ ಜಾಗವನ್ನು ಬಿಡಬೇಕು ಎಂಬ ಸಂದೇಶವನ್ನುನೀಡುತ್ತದೆ. ಇದು ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯ ಸಂಸ್ಕೃತಿಯಾಗಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ, ಅವರಿಗೆ ಟಿಕೆಟ್ ನಿರಾಕರಿಸಿದ್ದ ಹಿನ್ನಲೆ ಮಗನಿಗಾಗಿ ಲಾಭಿ ಮಾಡಲು ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ.
ಆಡಳಿತಾರೂಢ ಬಿಜೆಪಿ ಪಕ್ಷವು ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರನ್ನು ಅವಮಾನಿಸಿದೆ ಎಂದು ಕರ್ನಾಟಕ ಕಾಂಗ್ರೆಸ್ ಈ ಹಿಂದೆ ಆರೋಪಿಸಿತ್ತು. ಇದರಿಂದಾಗಿ ಅವರು ಚುನಾವಣಾ ರಾಜಕೀಯದಿಂದ ನಿರ್ಗಮಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯ ವಿಕೆಟ್ಗಳು ಬೀಳುತ್ತಿವೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
"ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ!. ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ! ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ ಕೆ.ಎಸ್.ಈಶ್ವರಪ್ಪ ಈಗ ಟಿಕೆಟ್ಗೂ ಲಾಭಿ ನಡೆಸಿ ಸುಸ್ತಾದರು. ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು" ಎಂದು ವ್ಯಂಗ್ಯವಾಡಿದೆ.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಲ್ಲಿರುವಾಗಲೇ ಕೆಎಸ್ ಈಶ್ವರಪ್ಪ ಅವರು ರಾಜಕೀಯದಿಂದ ನಿವೃತ್ತಿ ಹೊಂದಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವ ಈಶ್ವರಪ್ಪ, ''ಚುನಾವಣಾ ರಾಜಕೀಯದಿಂದ ಸ್ವಯಂ ನಿವೃತ್ತಿ ಪಡೆಯಲು ನಿರ್ಧರಿಸಿದ್ದೇನೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಿಸದಂತೆ ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಜೊತೆಗೆ ಉಪಮುಖ್ಯಮಂತ್ರಿ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳನ್ನು ನೀಡಿದ್ದಕ್ಕಾಗಿ ಪಕ್ಷಕ್ಕೆ ಧನ್ಯವಾದ ಸಲ್ಲಿಸಿದ್ದರು.
74 ವರ್ಷದ ಕುರುಬ ನಾಯಕ ಈಶ್ವರಪ್ಪ ಅವರು ಶಿವಮೊಗ್ಗದಿಂದ ಐದು ಬಾರಿ ಶಾಸಕರಾಗಿದ್ದಾರೆ. ಈಶ್ವರಪ್ಪ ಅವರು ಬೆಳಗಾವಿಯಲ್ಲಿ ಸಿವಿಲ್ ಕಾಮಗಾರಿಗೆ ಶೇ.40 ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಹೋಟೆಲ್ ಕೊಠಡಿಯಲ್ಲಿ ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣದ ಹಿನ್ನಲೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪೊಲೀಸರು ನಡೆಸಿದ ತನಿಖೆ ನಂತರ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆರೋಪದಿಂದ ಮುಕ್ತರಾದ ನಂತರ ನಂತರದವರು ಸಚಿವ ಸ್ಥಾನಕ್ಕೆ ಒತ್ತಾಯಿಸಿದರು. ಆದರೆ, ಪಕ್ಷ ಅದಕ್ಕೆ ತಲೆ ಕೆಡಿಸಿಕೊಂಡಿಲ್ಲ.












Click it and Unblock the Notifications