ಭಾರತ ಬಂದ್ ಬಗ್ಗೆ ನಾನ್ಯಾಕೆ ಪ್ರತಿಕ್ರಿಯಿಸಲಿ: ಬೊಮ್ಮಾಯಿ
ಬೆಂಗಳೂರು: ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾರವಾಗಿ ಪ್ರತಿಕ್ರಿಯಿಸಿದರು.
ಯಾರಾದರೂ ಬಂದ್ಗೆ ಕರೆ ನೀಡಿದ್ದರೆ ಅಂದು ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ರಕ್ಷಣೆ ಮಾಡುವುದಷ್ಟೇ ನಮ್ಮ ಕರ್ತವ್ಯ ಎಂದು ಅವರು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಕೋವಿಡ್ ಕಾರಣದಿಂದಾಗಿ ಒಂದೂವರೆ ವರ್ಷದಿಂದ ಕೆಲಸ ಕಾರ್ಯಗಳೆಲ್ಲವೂ ಸ್ಥಗಿತವಾಗಿದ್ದವು. ಈಗಷ್ಟೇ ಪುನರಾರಂಭವಾಗಿ ಚೇತರಿಕೆ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗದಂತೆ ಸೂಕ್ತ ಮುಂಜಾಗ್ರತೆ ವಹಿಸಲಾಗುವುದು ಎಂದು ಅವರು ಹೇಳಿದರು.

ಇತ್ತೀಚೆಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕೆಲವರು ವಿದೇಶಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ಮುಖಂಡರಿಂದ ತೀವ್ರ ಆಕ್ಷೇಪಕ್ಕೆ ವ್ಯಕ್ತವಾಗಿತ್ತು.
ಶಿಕ್ಷಕರಿಂದ ಹಸಿರು ಬಟ್ಟೆ:
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆ.27ರಂದು ಕರೆ ನೀಡಿರುವ ಕರೆ ನೀಡಿರುವ ಭಾರತ ಬಂದ್ ಬೆಂಬಲಿಸಿ ರಾಜ್ಯದ ಖಾಸಗಿ ಶಾಲಾ ಶಿಕ್ಷಕರು ಹಸಿರು ಬಟ್ಟೆ ಧರಿಸಿ ಅಥವಾ ಕೈಗೆ ಹಸಿರು ಪಟ್ಟಿಯನ್ನು ಧರಿಸಿ ಬೆಂಬಲಿಸಲು ನಿರ್ಧರಿಸಿದ್ದಾರೆ.
"ದೇಶದಾದ್ಯಂತ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ನೈತಿಕ ಬೆಂಬಲ ಇದೆ. ಶಾಲೆಗಳಿಗೆ ರಜೆ ನೀಡುವಂತಹ ಪರಿಸ್ಥಿತಿ ಇಲ್ಲ. ಮಕ್ಕಳು ನಿರಂತರ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಪೂರ್ಣ ತರಗತಿ ನಡೆಸಬೇಕು ಎಂದು ಸರ್ಕಾರವೂ ಸೂಚನೆ ನೀಡಿರುವುದರಿಂದ ಶಾಲೆಗಳು ಎಂದಿನಂತೆ ನಡೆಯಲಿವೆ. ಶಿಕ್ಷಕರು ಮಾತ್ರ ಹಸಿರು ಬಟ್ಟೆ ಧರಿಸಿ ಬೆಂಬಲ ವ್ಯಕ್ತಪಡಿಸಲಿದ್ದಾರೆ" ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್ ) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಹೇಳಿದ್ದಾರೆ.












Click it and Unblock the Notifications