ಇಡೀ ವರ್ಷ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸೋಣ: ಸಿಎಂ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಆ. 15: ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾತಂತ್ರ್ಯ ಅಮೃತಮಹೋತ್ಸವದ ಮುನ್ನಾದಿನ ಶನಿವಾರ ನಾಡಿನ ಜನತೆಯಲ್ಲಿ ಮನವಿ ಮಾಡಿದರು.
ವಿಧಾನಸೌಧದ ಪೂರ್ವಭಾಗದ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. "ಸ್ವಾತಂತ್ರ್ಯ ನನ್ನ ಆ ಜನ್ಮ ಸಿದ್ಧ ಹಕ್ಕು ಎಂಬ ಗೋಪಾಲ ಕೃಷ್ಣ ಗೋಖಲೆಯವರ ವೀರೋಚಿತ ಘೋಷಣೆಯೊಂದಿಗೆ ಪ್ರಾರಂಭವಾದ ಭಾರತದ ಸ್ವಾತಂತ್ರ್ಯದ ಹೋರಾಟ ಭಗತ್ ಸಿಂಗ್ ಅವರಂತಹ ಯುವಕರ ಬಲಿದಾನ, ವೀರ ಸಾವರ್ಕರ್ ಅವರಂತಹ ಮಹನೀಯರ ತ್ಯಾಗದ ಮೂಲಕ ಮುಂದಡಿ ಇಟ್ಟಿದ್ದು ಸ್ಮರಣಾರ್ಹ. ಸ್ವಾತಂತ್ರ್ಯ ಚಳುವಳಿಯ ಸಾತ್ವಿಕ ಹೋರಾಟಕ್ಕೆ ಸತ್ಯದ ಮೆರಗು ನೀಡಿದವರು ಮಹಾತ್ಮ ಗಾಂಧಿ, ಇವರೆಲ್ಲರನ್ನು ನಾವು ಸದಾಕಾಲ ಸ್ಮರಿಸಬೇಕು." ಎಂದರು.
"ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ನಾವು ಹಗಲಿರಳು ಕಾಯಬೇಕು. ವಿಧಾನಸೌಧದ ಮೆಟ್ಟಿಲುಗಳು ನವಭಾರತದ ನಿರ್ಮಾಣಕ್ಕೆ ಸಾಕ್ಷಿಯಾಗಿವೆ" ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದ ವಿಶೇಷ: ಧಾರವಾಡ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ದಂಡಿಯಾತ್ರೆ ಮತ್ತು ವೀರ ರಾಣಿ ಕಿತ್ತೂರು ಚೆನ್ನಮ್ಮ ಕಿರುನಾಟಕಗಳು ಹಾಗೂ ಶಿವಮೊಗ್ಗ ರಂಗಾಯಣ ಪ್ರಸ್ತುತ ಪಡಿಸಿದ ಏಸೂರು ಕೊಟ್ಟರು ಈಸೂರು ಬಿಡೆವೂ ಮತ್ತು ವಿಧುರಾಶ್ವಥ್ ನಾಟಕಗಳು ಸಮಾರಂಭದ ವಿಶೇಷ ಆಕರ್ಷಣೆಗಳಾಗಿದ್ದವು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಜಾನಪದ ಪ್ರಕಾರಗಳಾದ ವೀರಗಾಸೆ, ಡೊಳ್ಳುಕುಣಿತ, ಪೂಜಾಕುಣಿತ, ಕೀಲು ಕುದುರೆ ಒಳಗೊಂಡಂತೆ ವಿವಿಧ ನೃತ್ಯ ಪ್ರಕಾರಗಳು ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಮುನ್ನಾದಿನ ದೇಶಭಕ್ತಿ ಹೆಚ್ಚಿಸುವಂತಿದ್ದವು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ, ರಜನೀಶ್ ಗೋಯಲ್ ಮತ್ತು ಮಂಜುನಾಥ್ ಪ್ರಸಾದ್, ಡಾ. ಶಾಲಿನಿ ಗೋಯಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್. ಹರ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ರಂಗಪ್ಪ ಉಪಸ್ಥಿತರಿದ್ದರು.












Click it and Unblock the Notifications