ಸಿಎಂ ನೀಡಿದ ಸಿಹಿಸುದ್ದಿ: ಪ್ರತಿವಾರ ಬಿಜೆಪಿ ಶಾಸಕರ ಸಮಸ್ಯೆ ಆಲಿಸಲು ಒಂದು ದಿನ ಫಿಕ್ಸ್!
ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕದ ಭಾರತೀಯ ಜನತಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಇನ್ನು ಮುಂದೆ ಪ್ರತಿ ಗುರುವಾರ ಶಾಸಕರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಆಲಿಸುವುದಕ್ಕಾಗಿ ಮೀಸಲಿರಿಸುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಯಾಗಿ ವಿಧಾನ ಮಂಡಲ ಮೊದಲ ಅಧಿವೇಶನವನ್ನು ಎದುರಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಶಾಸಕರಿಗೆ ಮಹತ್ವದ ಸೂಚನೆಯನ್ನು ಕೊಟ್ಟಿದ್ದಾರೆ. ಸೋಮವಾರ ರಾತ್ರಿ ಬಿಜೆಪಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು.
ಬೆಂಗಳೂರಿನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಮುಖ್ಯಮಂತ್ರಿಗಳು ಪ್ರತಿ ವಾರ ಗುರುವಾರ ಬಿಜೆಪಿ ಶಾಸಕರನ್ನು ಭೇಟಿ ಮಾಡಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ. ಸರ್ಕಾರ ಮತ್ತು ಪಕ್ಷದ ಕಾರ್ಯವೈಖರಿಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ಪ್ರತಿ ವಾರದಲ್ಲಿ ಒಂದು ದಿನ ಬಿಜೆಪಿ ಶಾಸಕರೊಂದಿಗೆ ಸಭೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ಕಾರ್ಯಕರ್ತರ ಭೇಟಿಗೆ ನಿಂತ ಸಚಿವರು
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುವ ನಿಟ್ಟಿನಲ್ಲಿ ಇತ್ತೀಚಿಗೆ ರಾಜ್ಯದ ಸಚಿವರು ಕೂಡಾ ಬೆಂಗಳೂರಿನ ಪಕ್ಷದ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಕೃಷಿ ಸಚಿವ ಬಿ ಸಿ ಪಾಟೀಲ್ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ. ಆ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಕ್ಕೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಇಂದಿನ ಈ ನಿರ್ಧಾರಕ್ಕೆ ಹಿಂದೆ ಬಿಜೆಪಿ ಸರ್ಕಾರದಲ್ಲಿ ಆಗಿರುವ ಗೊಂದಲಗಳೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಮೊದಲು ಬಿಜೆಪಿ ಸರ್ಕಾರ ಎಡವಿದ್ದು ಎಲ್ಲಿ?
ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಬಿಜೆಪಿ ಪಕ್ಷ ಮತ್ತು ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿತ್ತು. ಶಾಸಕಾಂಗ ಪಕ್ಷದ ಸಭೆಗಳು ನಡೆಯುತ್ತಿಲ್ಲ. ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇದ್ದರೂ ತಮ್ಮ ಸಮಸ್ಯೆಗಳನ್ನು ಆಲಿಸುವುದಕ್ಕೆ ಯಾರೂ ಇಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಕುರಿತು ಬಿಜೆಪಿ ಹೈಕಮಾಂಡ್ ನಾಯಕರಿಗೆ ರಾಜ್ಯದ ಕೆಲವು ಶಾಸಕರು ಪತ್ರವನ್ನೂ ಬರೆದಿದ್ದರು.

ಸರ್ಕಾರದ ಬಗ್ಗೆ ಹಿಂದೆ ಬಿಜೆಪಿ ಶಾಸಕರ ಆರೋಪಗಳು
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿದೆ. ನಾವು ಹೆಸರಿಗಷ್ಟೇ ಬಿಜೆಪಿಯ ಶಾಸಕರು. ನಮ್ಮ ಅಳಲು ಮತ್ತು ನೋವುಗಳನ್ನು ತೋಡಿಕೊಳ್ಳುವುದಕ್ಕೆ ಎಲ್ಲಿಯೂ ಅವಕಾಶ ಸಿಗುತ್ತಿಲ್ಲ. ಸರ್ಕಾರಕ್ಕೆ ಸಂಬಂಧಿಸಿದ ಯಾರೊಬ್ಬರೂ ನಮ್ಮ ಸಮಸ್ಯೆಗಳನ್ನು ಆಲಿಸುವುದಕ್ಕೆ ಸಿದ್ಧವಿಲ್ಲ. ಹೀಗೆ ಸಾಲು ಸಾಲು ಆರೋಪಗಳ ಪಟ್ಟಿಯು ಹೈಕಮಾಂಡ್ ನಾಯಕರ ಮುಂದೆ ಹೋಲಿದೆ. ಕೆಲವು ಬಿಜೆಪಿ ಶಾಸಕರು ನೇರವಾಗಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ನೇರವಾಗಿ ಆರೋಪ ಮಾಡಿದ್ದರು.

ಬಿಜೆಪಿ ಶಾಸಕರು ಮತ್ತು ಸರ್ಕಾರದ ನಡುವೆ ಸಮನ್ವಯ
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯತೆಯನ್ನು ಕಾಪಾಡಿಕೊಳ್ಳಬೇಕಿದೆ. ಸ್ಥಿರ ಸರ್ಕಾರದ ನಡುವೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆ ಮೂಲಕ ಬಿಎಸ್ ವೈ ಹೊರತಾಗಿ ಪಕ್ಷವನ್ನು ಬಲಪಡಿಸುವತ್ತ ಹೈಕಮಾಂಡ್ ನಾಯಕರು ನೀಡಿದ ಸೂಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.












Click it and Unblock the Notifications