ಮಳೆ ಹಾನಿ: ಮುಂದಿನ ವಾರ ಮುಖ್ಯಮಂತ್ರಿಗಳ ಉತ್ತರ ಕರ್ನಾಟಕ ಪ್ರವಾಸ
ಉಡುಪಿ, ಜುಲೈ 13: "ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾಗಿರುವ ಕಾರವಾರ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಮುಂದಿನ ವಾರ ಪ್ರವಾಸ ಕೈಗೊಳ್ಳುವುದಾಗಿ" ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಉಡುಪಿ ಪ್ರವಾಸದಲ್ಲಿರುವ ಬಸವರಾಜ ಬೊಮ್ಮಾಯಿ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಕತ್ತಲಲ್ಲೇ ಸಮುದ್ರ ವೀಕ್ಷಿಸಿ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ!
ಪ್ರವಾಹ ಪರಿಸ್ಥಿತಿ ಉಂಟಾಗಿರುವ ಪ್ರದೇಶಗಳಲ್ಲಿ ದೀರ್ಘಕಾಲದ ಮತ್ತು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಧ್ಯಮಗಳ ಜೊತೆ ಮಾತನಾಡಿ, "ಈ ವರ್ಷ ಜುಲೈ ತಿಂಗಳಲ್ಲಿ ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿ ಪ್ರವಾಹ ಪರಿಸ್ಥಿತಿ ಬಂದಿದೆ. ಇದುವರೆಗೂ 300ಕ್ಕಿಂತ ಹೆಚ್ಚು ಜನರನ್ನು ಪ್ರವಾಹ ಸ್ಥಳದಿಂದ ಸ್ಥಳಾಂತರ ಮಾಡಿ ರಕ್ಷಣೆ ಮಾಡಲಾಗಿದೆ. 32 ಜೀವ ಹಾನಿಯಾಗಿದ್ದು, 5 ಜನ ನಾಪತ್ತೆಯಾಗಿದ್ದಾರೆ. ಮಳೆಯಾಗಿರುವ ಜಿಲ್ಲೆಗಳಲ್ಲಿ 14 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ನಾಲ್ಕು ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ಕೆಲಸ ಮಾಡುತ್ತಿವೆ" ಎಂದರು.
"ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆಯ 355 ಹೇಕ್ಟರ್ ಪ್ರದೇಶ ಬೆಳೆ ಹಾನಿಗೊಳಗಾಗಿದೆ. 1062 ಮನೆಗಳಿಗೆ ಹಾನಿಯಾಗಿದೆ. ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ 2,187 ಕಿ. ಮೀ. ರಸ್ತೆ ಹಾನಿಗೊಳಗಾಗಿದೆ" ಎಂದು ವಿವರಣೆ ನೀಡಿದರು.
"ಪ್ರವಾಹದಿಂದ ಹಾನಿಗೊಳಗಾದ ಮನೆ ಮತ್ತು ಬೆಳೆ ಹಾನಿಗೆ ಪರಿಹಾರವನ್ನು ನೀಡಲು ಕೆಲವು ಹೊಸ ನಿಯಮಗಳನ್ನು ಮಾಡಿ ತುರ್ತಾಗಿ ಪರಿಹಾರ ಧನವನ್ನು ಹೆಚ್ಚಿಸಿ ನೀಡುವ ಕೆಲಸ ಆಗುತ್ತಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮೂಲಸೌಕರ್ಯಕ್ಕೆ 500 ಕೋಟಿ ರೂಪಾಯಿ; ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದರು.
"ಮಳೆಯಿಂದಾಗಿ ಬಹಳಷ್ಟು ರಸ್ತೆಗಳು ಹದಗೆಟ್ಟಿವೆ, ಮೂಲಸೌಕರ್ಯಗಳು ಹಾಳಾಗಿವೆ. ಹೀಗಾಗಿ ತಕ್ಷಣ ಮೂಲಸೌಕರ್ಯಗಳನ್ನು ಮರು ಸ್ಥಾಪನೆ ಮಾಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಉಂಟಾಗಿರುವ ಮೂಲಸೌಕರ್ಯ ಹಾನಿಗೆ ಈ 500 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು" ಎಂದರು.
ನೆರೆಸಂತ್ರಸ್ತರಿಗೆ ರಾಜ್ಯ ಸರ್ಕಾರ ಈ ಬಾರಿಯು ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರವನ್ನು ನಿಗದಿ ಪಡಿಸಿದೆ. ಇದರಿಂದಾಗಿ ನೆರೆ ಸಂತ್ರಸ್ಥರಿಗೆ ಹೆಚ್ಚಿನ ಪರಿಹಾರ ಸಿಗುವಂತೆ ಆಗಲಿದೆ.
ಮಾನವ ಜೀವ ಹಾನಿಗೆ ಕೇಂದ್ರ ಸರ್ಕಾರ 4 ಲಕ್ಷ ನಿಗದಿ ಮಾಡಿದೆ. ರಾಜ್ಯ ಸರ್ಕಾರ 5 ಲಕ್ಷ ಹಣವನ್ನು ಪರಿಷ್ಕರಣೆ ಮಾಡಿದೆ. ಪ್ರವಾಹ ನೀರು ನುಗ್ಗಿರುವ ಮನೆಗಳು ಗೃಹೋಪಯೋಗಿ ವಸ್ತುಗಳು, ಬಟ್ಟೆಬರೆ ಹಾನಿ ಕೇಂದ್ರ ಸರ್ಕಾರ 3,800 ನಿಗದಿ ಮಾಡಿದೆ. ರಾಜ್ಯ ಸರ್ಕಾರ 10,000 ಪರಿಷ್ಕರಣೆಯನ್ನು ಮಾಡಿದೆ.
ಶೇ 75ಕ್ಕಿಂತ ಹೆಚ್ಚಿನ ಸಂಪೂರ್ಣ ಮನೆಹಾನಿ ಸಂಭವಿಸಿದ್ದರೆ ಕೇಂದ್ರ ಸರ್ಕಾರ 95,100 ರೂ. ನಿಗದಿ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರ 5 ಲಕ್ಷ ನಿಗದಿ ಮಾಡಿದೆ. ಶೇ 25 ರಿಂದ 75 ರಷ್ಟು ಮನೆಯ ಹಾನಿಯಾಗಿದ್ದರೆ (ಮನೆಯನ್ನು ಕೆಡವಿ ನಿರ್ಮಿಸುವುದು) ಕೇಂದ್ರ 95,100 ನಿಗದಿ ಮಾಡಿದೆ. ರಾಜ್ಯ ಸರ್ಕಾರ 50,0000 ನಿಗದಿ ಮಾಡಿದೆ.
ಶೇ 25 ರಿಂದ 75ರಷ್ಟು ಮನೆಹಾನಿಯಾಗಿ ದುರಸ್ಥಿಯನ್ನು ಮಾಡುವುದಾಗಿದ್ದರೇ ಆ ಮನೆಗಳಿಗೆ ಕೇಂದ್ರ ಸರ್ಕಾರ 95,100 ನಿಗದಿ ಮಾಡಿದೆ. ರಾಜ್ಯ ಸರ್ಕಾರ 300000 ನಿಗದಿ ಮಾಡಿದೆ. ಶೇ 15 ರಿಂದ 25ರಷ್ಟು ಭಾಗಶಃ ಹಾನಿಯುಂಟಾಗಿದ್ದರೇ ಆ ಮನೆಗಳಿಗೆ ಕೇಂದ್ರ ಸರ್ಕಾರ 5,200 ರೂಪಾಯಿ ನಿಗದಿ ಮಾಡಿದ್ದರೆ, ರಾಜ್ಯ ಸರ್ಕಾರ ಪರಿಷ್ಕರಿಸಿ 50,000 ನಿಗದಿ ಮಾಡಿ ಆದೇಶ ಹೊರಡಿಸಿದೆ.