ದೆಹಲಿಯತ್ತ ಸಿಎಂ; ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್.?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಈ ಬಾರೀ ಸಂಪುಟ ವಿಸ್ತರಣೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಹೆಚ್ಚಾಗಿದೆ.
ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ದೆಹಲಿಗೆ ತೆರಳುತ್ತಿದ್ದೇನೆ, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರನ್ನ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ಹೈಕಮಾಂಡ್ ನಾಯಕ ಭೇಟಿ ವೇಳೆ ಬಾಕಿ ಉಳಿದಿರುವ ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನೂ 2023 ರ ವಿಧಾನ ಸಭಾ ಚುನಾವಣೆಗೆ ನಾಲ್ಕರಿಂದ ಐದು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಖಾಲಿ ಉಳಿದಿರುವ ಸ್ಥಾನವನ್ನು ಭರ್ತಿ ಮಾಡುವಂತೆ ಒತ್ತಡಗಳು ಹೆಚ್ಚಾದ ಬೆನ್ನೆಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸವನ್ನ ಕೈಗೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಒಂದು ಕಡೆ ಗುಜರಾತ್ ಚುನಾವಣೆಯಲ್ಲಿ ಹೈಕಮಾಂಡ್ ನಾಯಕರು ಫುಲ್ ಬ್ಯುಸಿಯಾಗಿದ್ದು, ಈ ನಡುವೆ ರಾಜ್ಯ ಸಚಿವ ಸಂಪುಟ ವಿಸ್ತರಣಗೆ ಗ್ನೀನ್ ಸಿಗ್ನಲ್ ಸಿಗುತ್ತಾ ಎಂಬುದು ಅನುಮಾನ ಹುಟ್ಟಿಸಿದೆ.
ಸಂಪುಟ ಸೇರಲು ಕಾಯುತ್ತಿರುವ ಈಶ್ವರಪ್ಪ,ರಮೇಶ್ ಜಾರಕಿಹೊಳಿ
ಇನ್ನು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಹ ಸಂಪುಟ ಸೇರಲು ಕಾಯುತ್ತಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಹಿನ್ನೆಲೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದ್ದು, ಸಂಪುಟ ವಿಸ್ತರಣೆ ಮಾಡುವುದು ತಡವಾದ ಹಿನ್ನೆಲೆ ಮಾಜಿ ಸಚಿವ ಈಶ್ವರಪ್ಪ, ಪಕ್ಷದ ಕಾರ್ಯಕ್ರಮಗಳು ಸೇರಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಂತರವನ್ನ ಕಾಯ್ದುಕೊಂಡಿದ್ದು ಸಂಪುಟ ಸೇರಲು ಈಶ್ವರಪ್ಪ ಕಾಯುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಬೆಳಗಾವಿಯ ಸಾಹುಕಾರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮೊದಲಿಗರಾಗಿದ್ದಾರೆ. ಸಿಡಿ ಪ್ರಕರಣದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಎಸ್ಐಟಿ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ಕ್ಲೀನ್ಚಿಟ್ ಸಿಕ್ಕ ಬಳಿಕವೂ ರಮೇಶ್ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಇದೇ ಕಾರಣಕ್ಕೆ ಕೆಲ ದಿನಗಳ ಹಿಂದೆ ನಡೆದ ತಮ್ಮದೇ ಸಮುದಾಯದ ಎಸ್ಟಿ ಸಮಾವೇಶ, ಜನ ಸಂಕಲ್ಪ ಯಾತ್ರೆಗೆ ಗೈರಾಗುವ ಮೂಲಕ ಅಸಮಾಧಾನ ಹಾಕಿದ್ದರು. ಅಲ್ಲದೇ ಕೆಲ ದಿನಗಳ ಹಿಂದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರೆ. ಮಂತ್ರಿ ಆಗುವರ ಪಟ್ಟಿಯಲ್ಲಿ ರಮೇಶ್ ಜಾರಕಿಹೊಳಿ ಅವರ ಹೆಸರು ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದರು. ಇನ್ನೂ ಚುನಾವಣಾ ವರ್ಷವಾಗಿರುವ ಹಿನ್ನೆಲೆ ಬಿಜೆಪಿಯ ಯುವ ಶಾಸಕರಿಂದ ಹೊಸ ಕೂಗು ಕೇಳಿ ಬಂದಿದ್ದು, ಪಕ್ಷ ಹೊಸ ಮುಖಗಳಿಗೆ ಮಣೆ ಹಾಕಬೇಕು. ಇದರಿಂದ ಚುನಾವಣೆಯಲ್ಲಿ ಯುವ ಪೀಳಿಗೆ ಮತಗಳನ್ನು ಸೆಳೆಯಬಹುದು ಎನ್ನುವ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬಂದಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆಯೇ ಕಗ್ಗಂಟಾಗಿ ಪರಿಣಮಿಸಿದೆ.
ಗಡಿ ವಿವಾದ; ಮುಕುಲ್ ರೋಹ್ಟಗಿ ಭೇಟಿ ಮಾಡಲಿರುವ ಸಿಎಂ
ಇನ್ನೂ ಮಹಾರಾಷ್ಟ್ರ ಗಡಿ ವಿವಾದವನ್ನ ತೆಗೆದಿದ್ದು, ಈ ವಿಚಾರದಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಮಾಡುತ್ತಿದೆ. ಈ ಹಿನ್ನೆಲೆ ಸುಪ್ರೀ ಕೋರ್ಟ್ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ ನಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ
ಬಿಜೆಪಿಯವರು ಸಂವಿಧಾನವನ್ನೇ ತಿರುಚಿದ್ದಾರೆ ಅಂತ ಸಿದ್ದರಾಮಯ್ಯ ಆರೋಪ ಮಾಡಿರುವ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾತನಾಡಿ, ಸಂವಿಧಾನ ತಿದಿದ್ದು ಕಾಂಗ್ರೆಸ್. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನವನ್ನ ಗಾಳಿ ತೂರಿದ್ದು ಕಾಂಗ್ರೆಸ್, ವ್ಯಕ್ತಿ ಸ್ವತಂತ್ರವನ್ನ ಮೊಟಕು ಗೊಳಿಸಿ ಎಲ್ಲರನ್ನ ಜೈಲಿಗೆ ಹಾಕಿದ್ದು ಕಾಂಗ್ರೆಸ್. ಅವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದರು.