ಮತ್ತೆ ಗಡಿ ತಕರಾರು; ಮಹಾರಾಷ್ಟ್ರ ಗಡಿಯೊಳಗೆ ಕರ್ನಾಟಕದಿಂದಲೂ ವಿಮೆ ಜಾರಿ: ಸಿಎಂ ಬೊಮ್ಮಾಯಿ ಎಚ್ಚರಿಕೆ
ಬೆಂಗಳೂರು, ಏಪ್ರಿಲ್5: ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ಈ ಮಧ್ಯ ಮಹಾರಾಷ್ಟ್ರ ಮತ್ತೆ ಗಡಿ ಕ್ಯಾತೆ ತಗೆದಿದೆ. ಮಹಾರಾಷ್ಟ್ರ ಬಿಜೆಪಿ ಸರ್ಕಾರ ಗಡಿಭಾಗದ ಕರ್ನಾಟಕದ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೆ ಮುಂದಾಗಿರುವುದು ಕನ್ನಡಿಗರ ಕೋಪಕ್ಕೆ ಕಾರಣವಾಗಿದೆ.
ಈ ಕುರಿತು ಕರ್ನಾಟಕದ ನಾಯಕರು ಮಹಾರಾಷ್ಟ್ರದ ನಡೆಯನ್ನ ಖಂಡಿಸಿ ಮಹಾರಾಷ್ಟ್ರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಅವರ ಯೋಜನೆ ನಮ್ಮ ನೆಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ನಮ್ಮ ನೆಲದಲ್ಲಿ, ನಮ್ಮ ಜನರ ಆರೋಗ್ಯ ರಕ್ಷಿಸಲು ನಮಗೆ ತಾಕತ್ತು ಇಲ್ಲವೇ? ನಮ್ಮ ನೆಲದಲ್ಲಿ ಯೋಜನೆ ಜಾರಿ ಮಾಡಲು ಮಹಾರಾಷ್ಟ್ರ ಸರಕಾರಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ರಾಜ್ಯ ಕಾಂಗ್ರೆಸ್ ನಾಯಕರು ಪ್ರಶ್ನಿಸಿದರು.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಕರ್ನಾಟಕ ಗಡಿಗೆ ಸೇರಿದ ಗ್ರಾಮಗಳ ಜನರಿಗೆ ವಿಮೆ ನೀಡುವ ಆದೇಶ ಮಹಾರಾಷ್ಟ್ರದ ಉದ್ದಟತನದ ಪರಮಾವಧಿಯಾಗಿದ್ದು ಕೂಡಲೇ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ನಮ್ಮ ಮನವಿ ಕಡೆಗಣಿಸಿ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಿದೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥಶಿಂಧೆ ಹಾಗು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು .ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ.

ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು. ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದಿದ್ದಾರೆ.
ಮಹಾರಾಷ್ಟ್ರದ ಉದ್ಧಟತನ ಸಹಿಸಲು ಸಾಧ್ಯವೇ ಇಲ್ಲ: ಸಿದ್ದರಾಮಯ್ಯ
ಕನ್ನಡಿಗರ ತೀವ್ರ ವಿರೋಧಧ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ.
ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯ ವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ.
ಗಡಿ ವಿವಾದ ಇತ್ಯರ್ಥಗೊಳ್ಳುವ ವರೆಗೆ ಎರಡೂ ರಾಜ್ಯಗಳು ವಿವಾದವನ್ನು ಕೆದಕಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿ ಎರಡೂ ರಾಜ್ಯಗಳ ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಿದ್ದರು. ಆ ಸೂಚನೆಯನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಧಿಕ್ಕರಿಸಿದ್ದಾರೆ
ಬೆಳಗಾವಿ ಗಡಿವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ನಮಗೆ ಇದೆ. ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ.












Click it and Unblock the Notifications