ಸಿಎಂ ಸೇರಿದಂತೆ ಎಲ್ಲಾ ಮಂತ್ರಿಗಳು ಲೂಟಿಗೆ ಇಳಿದು, ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ: ಸಿದ್ದು ವಾಗ್ದಾಳಿ
ಬೆಂಗಳೂರು, ನವೆಂಬರ್ 21: ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಹೆಸರು ಪಡೆದಿದೆ. ಹಣ ನೀಡದೆ ಈ ಸರ್ಕಾರದಲ್ಲಿ ಯಾವುದೇ ಕೆಲಸ, ನೇಮಕಾತಿ, ವರ್ಗಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಮಂತ್ರಿಗಳು ಲೂಟಿಗೆ ಇಳಿದಿದ್ದು, ರಾಜ್ಯ ಹಾಳು ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ''ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಆಪರೇಶನ್ ಕಮಲ ಮೂಲಕ ಶಾಸಕರಿಗೆ ಕೋಟ್ಯಂತರ ರೂಪಾಯಿ ಕೊಟ್ಟು ಪಕ್ಷಕ್ಕೆ ಕರೆದುಕೊಂಡು ಅಧಿಕಾರ ಹಿಡಿದರು. ಮೂರು ವರ್ಷಗಳಿಂದ ಅಧಿಕಾರದಲ್ಲಿ ಇರುವ ಬಿಜೆಪಿ ಸರ್ಕಾರ ಲೂಟಿ ಹೊಡೆಯುವುದು ಸುಳ್ಳು ಹೇಳುವುದು ಇವರ ಸಾಧನೆಯಾಗಿದೆ'' ಎಂದರು.
ಮತ್ತೊಂದೆಡೆ ದ್ವೇಷದ ರಾಜಕಾರಣ ಮಾಡಿ ಸಮಾಜದಲ್ಲಿ ಸಾಮರಸ್ಯ ನಾಶ ಮಾಡುತ್ತಿದ್ದಾರೆ. ಜನ ಭಯದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ನಾಶವಾಗಲಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ದವಾಗಿ ವಾಗ್ದಾಳಿ ನಡೆಸಿದರು.

ಇನ್ನೂ ಕಾಂಗ್ರೆಸ್ ಪಕ್ಷ ಸಿದ್ಧಾಂತ, ನಾಯಕತ್ವ ನಂಬಿ ಬಿಜೆಪಿ, ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಬಣಕಾರ್ ಅವರು ಬಿಜೆಪಿ ತೊರೆದು ಬೇಷರತ್ತಾಗಿ ಪಕ್ಷ ಸೇರುತ್ತಿದ್ದಾರೆ. ಡಾ. ಶ್ರೀನಿವಾಸ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಬೇಷರತ್ತಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ನಾನು ಅವರನ್ನು ಸ್ವಾಗತಿಸುತ್ತೇನೆ. ಮಲ್ಲಿಕಾರ್ಜುನ ರೊಣಿ ಅವರು ನಮ್ಮ ಪಕ್ಷದಲ್ಲೇ ಇದ್ದವರು. ಅವರು ಕಳೆದ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರುತ್ತಿದ್ದಾರೆ, ಅವರನ್ನು ಸ್ವಾಗತ ಮಾಡುತ್ತಿದ್ದೇನೆ ಎಂದರು.
ನಾವೆಲ್ಲರೂ ಬಿಜೆಪಿ ಸೋಲಿಸಲು ಹೋರಾಡಬೇಕು
ಬಣಕಾರ್ ಅವರು ಹಿರೇಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವುದು ಗುರಿ ಎಂದರು. ಅದೇ ರೀತಿ ನಾವೆಲ್ಲರೂ ಬಿಜೆಪಿ ಸೋಲಿಸಲು ಹೋರಾಡಬೇಕು. ಇಂತಹ ಕೆಟ್ಟ, ಕೋಮುವಾದಿ ಸರ್ಕಾರವನ್ನು ನಾವು ನೋಡಿರಲಿಲ್ಲ. ರಾಜ್ಯ, ಜನರು, ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕಾದರೇ ಬಿಜೆಪಿ ಸೋಲಿಸಬೇಕು. ಹೀಗಾಗಿ ಹಿರೇಕೆರೂರು ಕ್ಷೇತ್ರದಲ್ಲಿ ಬಣಕಾರ್ ಅವರ ಆಗಮನದಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದ್ದು, ಪಕ್ಷ ಗೆಲ್ಲಿಸಲು ಶ್ರಮಿಸಿ ಎಂದು ಹೇಳಿದರು.

ಬಿ.ಸಿ ಪಾಟೀಲ್ ಆಪರೇಷನ್ ಕಮಲಕ್ಕೆ ಒಳಗಾದ ವ್ಯಕ್ತಿ. ದುಡ್ಡಿನ ಆಸೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಆತ ಜನಪ್ರತಿನಿಧಿ ಆಗಲು ಯೋಗ್ಯರಲ್ಲ. ಶ್ರೀನಿವಾಸ್ ಅವರದು ರಾಜಕೀಯ ಮನೆತನ. ಕೂಡ್ಲಿಗಿಯಲ್ಲಿ ಅವರ ತಂದೆ ನಾಯಕರಾಗಿದ್ದರು. ಅಲ್ಲಿಯೂ ಈ ಬಾರಿ ಕಾಂಗ್ರೆಸ್ ಗೆಲ್ಲಬೇಕು. ಕೋಮುವಾದಿ ಬಿಜೆಪಿ ಮಣಿಸಲು ಕಾಯಾ ವಾಚಾ ಮನಸಾ ಶ್ರಮಿಸಬೇಕು. ಮಲ್ಲಿಕಾರ್ಜುನ ರೊಣಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಈಗ ಮತ್ತೆ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜಾಪುರದಲ್ಲಿ ಗಾಣಿಗ ಸಮಾಜ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಹೆಚ್ಚಿದೆ ಎಂದರು.












Click it and Unblock the Notifications